Home / ಕವನ / ಕವಿತೆ / ರಾಮುಲುವೂ ಸೋಮುಲುವೂ

ರಾಮುಲುವೂ ಸೋಮುಲುವೂ

ನಿರ್ಜನವಾದ ಬಯಲು
ಹೊತ್ತಾದರೋ ಕಹಿಬೇವಿನ ಹೆಮ್ಮೆರಗಳ ಹಿಂದೆ ಮರೆಯಾಗುತ್ತಿದೆ
ಒಂದಿಷ್ಟು ಇಳಿಬೆಳಕು ಮಾತ್ರ
ಪುಡಿ ಪುಡಿಯಾದ ಒಣಹುಲ್ಲಿನ ಮೇಲೆ ಸಮಾನಾಂತರವಾಗಿ ಬಿದ್ದಿದೆ
ಅಷ್ಟರಲ್ಲಿ ಎಡಗಡೆಯಿಂದ (ಅಥವಾ ಬಲಗಡೆಯಿಂದ)
ರಾಮುಲುವೂ ಸೋಮುಲುವೂ
ಅನುಮಾನಿಸುತ್ತ ಅನುಮಾನಿಸುತ್ತ ಪ್ರವೇಶಿಸುವರು
ಅಂಗಿಯ ಬದಿಗೆ ಜೋತಕೈ, ಕಚ್ಚೆಯ ಕೆಳಗೆ ದೊಂಗಾಲು
ತಲೆಯಿರುವಲ್ಲಿ ಮುಂಡಾಸು-ದೂರಕ್ಕೆ ಇಷ್ಟೆ-
ಒಂದು ಕ್ಷಣ ಮುಖ ಮುಖ ನೋಡುತ್ತ ನಿಲ್ಲುವರು
ನಂತರ ಲಗುಬಗನೆ
ಚೆಂಡುಗಳನ್ನರಸುತ್ತ ಬೇರೆ ಬೇರೆ ದಿಕ್ಕುಗಳಿಗೆ ಚದುರುವರು
ಹೀಗೆ ಅರಸುತ್ತ, ಕಂಡುಹುಡುಕುತ್ತ
ಹಲವು ಕಾಲದ ಮೇಲೆ
ಪಿಚ್ಚಿನಲ್ಲಿ ಇಬ್ಬರೂ ಭೇಟಿಯಾಗುವರು
ನಂತರ ವಿಕೆಟುಗಳನ್ನು ಹೆಕ್ಕಿ ತಬ್ಬಿಕೊಂಡು
ದಾಪುಗಾಲುಗಳನ್ನು ಹಾಕುತ್ತ ನಿಷ್ಕ್ರಮಿಸುವರು


ಇಬ್ಬನಿಯಾದರೋ ನೆಲಕ್ಕೆ ತೆಳ್ಳಗಿನ ಮುಸುಕು ಹಾಕುತ್ತಿದೆ
ಆಕಾಶದಲ್ಲಿ ನಾಲ್ಕಾರು ನಕ್ಷತ್ರಗಳು ಬಿದ್ದಿವೆ
ಆಲಸಿಗಳಾದ ಕತ್ತೆಗಳು ಮಾತ್ರ ಯಾವುದನ್ನೂ ಗಮನಿಸದೆ
ನಿಶ್ಚಲವಾಗಿ ನಿಂತಿವೆ
ಅಷ್ಟರಲ್ಲಿ ರಾಮುಲುವೂ ಸೋಮುಲುವೂ
ಮತ್ತೆ ಪ್ರವೇಶಿಸುವರು
ನೆಟ್ಟದೃಷ್ಟಿಯಿಂದ ಪಿಚ್ಚಿನ ಕಡೆಗೆ ದಪದಪನೆ ಧಾವಿಸುವರು
ಅದರ ಹುರಿಹಾಸನ್ನು
ಎಡಗಡೆಯಿಂದೊಬ್ಬ, ಬಲಗಡೆಯಿಂದೊಬ್ಬ
ಎತ್ತಿ ಸುತ್ತಲು ಮನಸ್ಸು ಮಾಡುವರು
ಸುತ್ತುತ್ತ ಉರುಳುರುಳಾಗಿ ಬೆಳೆಯುತ್ತಿರುವ ಹಾಸಿನ
ಉರುಳಿಗೆ ಕೈಗಳನ್ನೂ ನೆಲಕ್ಕೆ ಕಾಲುಗಳನ್ನೂ
ಊರಿ ನೂಕಿ ಸೆಟೆದು ಮುಗ್ಗರಿಸಿ ಬೀಳುವರು
ಕೆಳಗೊಬ್ಬ, ಮೇಲೊಬ್ಬ
ಬಿದ್ದರೂ ಬಿಡದೆ, ಕೈ ಬದಲಾಯಿಸುತ್ತ, ಏದುತ್ತ
ಎತ್ತಿ ಎಳೆದು ದೂರಕ್ಕೆ ಸಾಗಿಸುವರು


ಜನವರಿಯ ಇರುಳಾದರೋ ಯಥೇಷ್ಟ ಹೆಪ್ಪುಗಟ್ಟುತ್ತಿದೆ
ಮೈದಾನು ಯಾವುದು, ಮರ ಯಾವುದು ಗೊತ್ತಾಗುವುದೆ ಕಷ್ಟ
ಅಷ್ಟರಲ್ಲಿ ರಾಮುಲುವೂ ಸೋಮುಲುವೂ
ಭಾರವಾದ ಕೂಜೆಗಳನ್ನು ಎತ್ತಿಕೊಂಡು ಬಿಡದೆ ಪ್ರವೇಶಿಸುವರು
ಕುಸಿದುಹೋಗುತ್ತಿರುವ ಕಾಲುಗಳನ್ನು ಲೆಕ್ಕಿಸದೆ
ಪಿಚ್ಚಿನ ಕಡೆಗೆ ಚುರುಕಾಗಿ ಪುಟಪುಟನೆ ಹೆಜ್ಜೆ ಹಾಕುವರು
ಬಾಯಲ್ಲಿ ಒಂದೊಂದು ಬೀಡಿ
ಜೋಡಿ ನಕ್ಷತ್ರಗಳಂತೆ ಉರಿಯುತ್ತ
ರಾಮುಲುವೂ ಸೋಮುಲುವೂ
ಧೂಳೆಬ್ಬಿಸಿ ಸುಸ್ತಾಗಿ ಮಲಗಿದ ಬಯಲ ಮೈಗೆ
ನೀರು ಸಿಂಪಡಿಸಲು ತೊಡಗುವರು
ಕ್ರಮೇಣ ದಟ್ಟವಾದ ಕತ್ತಲು ಎಲ್ಲವನ್ನೂ ಆವರಿಸುವುದು
ಸ್ವಲ್ಪ ಹೊತ್ತಿನಲ್ಲೆ ಒಂದು ಬೀಡಿ ನಂದುವುದು
ನಂತರ ಇನ್ನೊಂದು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...