Home / ಕವನ / ಕವಿತೆ / ರಾಮುಲುವೂ ಸೋಮುಲುವೂ

ರಾಮುಲುವೂ ಸೋಮುಲುವೂ

ನಿರ್ಜನವಾದ ಬಯಲು
ಹೊತ್ತಾದರೋ ಕಹಿಬೇವಿನ ಹೆಮ್ಮೆರಗಳ ಹಿಂದೆ ಮರೆಯಾಗುತ್ತಿದೆ
ಒಂದಿಷ್ಟು ಇಳಿಬೆಳಕು ಮಾತ್ರ
ಪುಡಿ ಪುಡಿಯಾದ ಒಣಹುಲ್ಲಿನ ಮೇಲೆ ಸಮಾನಾಂತರವಾಗಿ ಬಿದ್ದಿದೆ
ಅಷ್ಟರಲ್ಲಿ ಎಡಗಡೆಯಿಂದ (ಅಥವಾ ಬಲಗಡೆಯಿಂದ)
ರಾಮುಲುವೂ ಸೋಮುಲುವೂ
ಅನುಮಾನಿಸುತ್ತ ಅನುಮಾನಿಸುತ್ತ ಪ್ರವೇಶಿಸುವರು
ಅಂಗಿಯ ಬದಿಗೆ ಜೋತಕೈ, ಕಚ್ಚೆಯ ಕೆಳಗೆ ದೊಂಗಾಲು
ತಲೆಯಿರುವಲ್ಲಿ ಮುಂಡಾಸು-ದೂರಕ್ಕೆ ಇಷ್ಟೆ-
ಒಂದು ಕ್ಷಣ ಮುಖ ಮುಖ ನೋಡುತ್ತ ನಿಲ್ಲುವರು
ನಂತರ ಲಗುಬಗನೆ
ಚೆಂಡುಗಳನ್ನರಸುತ್ತ ಬೇರೆ ಬೇರೆ ದಿಕ್ಕುಗಳಿಗೆ ಚದುರುವರು
ಹೀಗೆ ಅರಸುತ್ತ, ಕಂಡುಹುಡುಕುತ್ತ
ಹಲವು ಕಾಲದ ಮೇಲೆ
ಪಿಚ್ಚಿನಲ್ಲಿ ಇಬ್ಬರೂ ಭೇಟಿಯಾಗುವರು
ನಂತರ ವಿಕೆಟುಗಳನ್ನು ಹೆಕ್ಕಿ ತಬ್ಬಿಕೊಂಡು
ದಾಪುಗಾಲುಗಳನ್ನು ಹಾಕುತ್ತ ನಿಷ್ಕ್ರಮಿಸುವರು


ಇಬ್ಬನಿಯಾದರೋ ನೆಲಕ್ಕೆ ತೆಳ್ಳಗಿನ ಮುಸುಕು ಹಾಕುತ್ತಿದೆ
ಆಕಾಶದಲ್ಲಿ ನಾಲ್ಕಾರು ನಕ್ಷತ್ರಗಳು ಬಿದ್ದಿವೆ
ಆಲಸಿಗಳಾದ ಕತ್ತೆಗಳು ಮಾತ್ರ ಯಾವುದನ್ನೂ ಗಮನಿಸದೆ
ನಿಶ್ಚಲವಾಗಿ ನಿಂತಿವೆ
ಅಷ್ಟರಲ್ಲಿ ರಾಮುಲುವೂ ಸೋಮುಲುವೂ
ಮತ್ತೆ ಪ್ರವೇಶಿಸುವರು
ನೆಟ್ಟದೃಷ್ಟಿಯಿಂದ ಪಿಚ್ಚಿನ ಕಡೆಗೆ ದಪದಪನೆ ಧಾವಿಸುವರು
ಅದರ ಹುರಿಹಾಸನ್ನು
ಎಡಗಡೆಯಿಂದೊಬ್ಬ, ಬಲಗಡೆಯಿಂದೊಬ್ಬ
ಎತ್ತಿ ಸುತ್ತಲು ಮನಸ್ಸು ಮಾಡುವರು
ಸುತ್ತುತ್ತ ಉರುಳುರುಳಾಗಿ ಬೆಳೆಯುತ್ತಿರುವ ಹಾಸಿನ
ಉರುಳಿಗೆ ಕೈಗಳನ್ನೂ ನೆಲಕ್ಕೆ ಕಾಲುಗಳನ್ನೂ
ಊರಿ ನೂಕಿ ಸೆಟೆದು ಮುಗ್ಗರಿಸಿ ಬೀಳುವರು
ಕೆಳಗೊಬ್ಬ, ಮೇಲೊಬ್ಬ
ಬಿದ್ದರೂ ಬಿಡದೆ, ಕೈ ಬದಲಾಯಿಸುತ್ತ, ಏದುತ್ತ
ಎತ್ತಿ ಎಳೆದು ದೂರಕ್ಕೆ ಸಾಗಿಸುವರು


ಜನವರಿಯ ಇರುಳಾದರೋ ಯಥೇಷ್ಟ ಹೆಪ್ಪುಗಟ್ಟುತ್ತಿದೆ
ಮೈದಾನು ಯಾವುದು, ಮರ ಯಾವುದು ಗೊತ್ತಾಗುವುದೆ ಕಷ್ಟ
ಅಷ್ಟರಲ್ಲಿ ರಾಮುಲುವೂ ಸೋಮುಲುವೂ
ಭಾರವಾದ ಕೂಜೆಗಳನ್ನು ಎತ್ತಿಕೊಂಡು ಬಿಡದೆ ಪ್ರವೇಶಿಸುವರು
ಕುಸಿದುಹೋಗುತ್ತಿರುವ ಕಾಲುಗಳನ್ನು ಲೆಕ್ಕಿಸದೆ
ಪಿಚ್ಚಿನ ಕಡೆಗೆ ಚುರುಕಾಗಿ ಪುಟಪುಟನೆ ಹೆಜ್ಜೆ ಹಾಕುವರು
ಬಾಯಲ್ಲಿ ಒಂದೊಂದು ಬೀಡಿ
ಜೋಡಿ ನಕ್ಷತ್ರಗಳಂತೆ ಉರಿಯುತ್ತ
ರಾಮುಲುವೂ ಸೋಮುಲುವೂ
ಧೂಳೆಬ್ಬಿಸಿ ಸುಸ್ತಾಗಿ ಮಲಗಿದ ಬಯಲ ಮೈಗೆ
ನೀರು ಸಿಂಪಡಿಸಲು ತೊಡಗುವರು
ಕ್ರಮೇಣ ದಟ್ಟವಾದ ಕತ್ತಲು ಎಲ್ಲವನ್ನೂ ಆವರಿಸುವುದು
ಸ್ವಲ್ಪ ಹೊತ್ತಿನಲ್ಲೆ ಒಂದು ಬೀಡಿ ನಂದುವುದು
ನಂತರ ಇನ್ನೊಂದು
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...