Home / ಕಥೆ / ಜನಪದ / ಉತ್ತರೀಮಳೆ

ಉತ್ತರೀಮಳೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಅತ್ತೆ ಸೊಸೆಯರು ಹಿತ್ತಲ ಮನೆಯಲ್ಲಿ ಒಂದಿಷ್ಟು ವಾದಿಸಾಡುತ್ತಿದ್ದರು. ಅಷ್ಟರಲ್ಲಿ ಹೊಲದಿಂದ ಮಗನು ಬಂದನೆಂದು ಅತ್ತೆ ಎದ್ದು ಹೋದಳು. ಮಗನಿಗೆ ಉಣಬಡಿಸಬೇಕಲ್ಲವೇ?

ಊಟಕ್ಕೆ ಕುಳಿತ ಮಗನಿಗೆ ಉಣಬಡಿಸುತ್ತ ಹಗುರಾಗಿ ಎಳೆತೆಗೆದಳು ತಾಯಿ – “ಈ ಸೊಸೆ ಬೇಡಪ್ಪ ಮಗನೇ, ಇವಳನ್ನು ತವರಿಗೆ ಕಳಿಸು.”

“ಕಳಿಸಿಬಿಡುವುದಕ್ಕೆ ಎತ್ತೇ ಎಮ್ಮೆಯೇ? ಖರ್ಚು – ಮಾಡಿತಂದು ಕೈಹಿಡಿದವಳನ್ನು ಹೇಗೆ ಬಿಡುವುದವ್ವ” ಎಂದು ಕೇಳಿದನು ಮಗ.

“ನನ್ನ ಚಿನ್ನದ ಒಂಕೆ ಮಾರುವೆನು. ಸೂತ್ರದ ಗೊಂಬೆಯಂಥ ಹೆಣ್ಣು ತರುವೆನು. ಮಗನೇ, ಬಿಟ್ಟುಬಿಡು ಇವಳನ್ನು” ತಾಯಿಯ ಆಗ್ರಹ.

“ಆವಲ್ಲ ಕರುವಲ್ಲ, ಬೊಗಸೆತುಂಬ ತೆರವುಕೊಟ್ಟು ತಂದವಳನ್ನು ಬಿಡುವುದೆಂತು ತಾಯಿ?”

“ಕಿವಿಯೊಳಗಿನ ವಜ್ರದೋಲೆ ಮಾರುತ್ತೇನೆ. ಬ್ಯಾಂಗಡಿಯಂಥ ಹೆಣ್ಣು ತರುತ್ತೇನೆ. ಬಿಟ್ಟುಬಿಡು ನನ್ನ ಮಗನೇ ಇವಳನ್ನು” ಮತ್ತೆಯೂ ಅದೇ ಒತ್ತಾಯ ತಾಯಿಯದು.

“ಕೊಂಡುತಂದ ಆಡು-ಕುರಿ ಬಿಟ್ಟುಬಿಡುವುದಕ್ಕಾಗುವದಿಲ್ಲ. ದೈವಸಾಕ್ಷಿಯಾಗಿ ಕೈಹಿಡಿದವಳನ್ನು ಹೇಗೆ ಬಿಡುವುದು ಅವ್ವಾ ?”

“ಇದೋ ಈ ಮೂಗುತಿಯನ್ನು ಮಾರುತ್ತೇನೆ. ಮುತ್ತಿನಂಥ ಮಡದಿಯನ್ನು ತರುತ್ತೇನೆ. ಬಿಟ್ಟುಬಿಡು ಇವಳನ್ನು” ಅನ್ನುತ್ತಾಳೆ ತಾಯಿ.

ನೂರು ಸಾರೆ ಹೇಳುತ್ತ ಬಂದರೆ ಸುಳ್ಳೇ ಸತ್ಯವಾಗುವದಂತೆ. ಛಲಹಿಡಿದು ಬಿಟ್ಟು ಮಾತು ಗೆಲ್ಲಲೇ ಬೇಕಲ್ಲವೇ ? ಸೊಸೆ ತನ್ನ ತವರಿಗೆ ಹೊರಟುನಿಂತಳು.

“ಸೊಸೆ ಮುದ್ದೇ, ನೆಲುವಿನ ಮೇಲಿಟ್ಟ ನೆಲ್ಲಕ್ಕಿ ಬೋನವನ್ನಾದರೂ ಉಂಡು ಹೋಗು” ಎಂದು ಅತ್ತೆ ತೋರಿಕೆಯಲ್ಲಿ ಆಗ್ರಹಪಡಿಸಿದರೆ, ಸೊಸೆ ಏನೆಂದು ಮರುನುಡಿಯುತ್ತಾಳೆ – “ಅದನ್ನು ನೀನುಣ್ಣು ಇಲ್ಲವೆ ಮಗನಿಗೆ ಉಣಬಡಿಸು. ಉಳಿದರೆ ಬರುವವಳಿಗಾಗಿ ಕಾಯ್ದಿಡು.”

“ಚೆಟ್ಟಿಗೆಯೊಳಗಿರುವ ಗಟ್ಟಿತುಪ್ಪವೊಂದಿಷ್ಟು ತಿಂದಾದರೂ ಹೋಗಮ್ಮ ಮುದ್ದು ಸೊಸೆಯೇ” ಎಂದು ಅತ್ತೆಯಾಡಿದ ಉಪಕಾರದ ಮಾತಿಗೆ ಸೊಸೆ ಹೇಳುತ್ತಾಳೆ – “ನೀನಾದರೂ ತಿನ್ನು. ನಿನ್ನ ಮಗನಿಗಾದರೂ ತಿನ್ನಿಸು. ಅದರಲ್ಲಿ ಒಂದಿಷ್ಟು ಬರುವವಳಿಗಾಗಿ ಕಾಯ್ದಿರಿಸು.”

ಒಲೆಯಮೇಲಿಟ್ಟ ಹಸುವಿನ ಹಾಲನ್ನಾದರೂ ಕುಡಿದು ಹೋಗು ಎಂದಾಗ ಹಾಗೂ, ಪಟ್ಟಿಗೆಯೊಳಗಿನ ಸಂಣಂಚಿನ ಕುಪ್ಪಸವನ್ನಾದರೂ ತೊಟ್ಟುಕೊಂಡು ಹೋಗು ಎಂದಾಗ, ಸೊಸೆ ಅದೇರೀತಿಯಲ್ಲಿ ಉತ್ತರಿಸುತ್ತಾಳೆ.

ಹೇಳಿದ್ದಕ್ಕೆಲ್ಲ ಮರಳಿ ಉತ್ತರ ಕೊಡುವಳೆಂದು ಆ ಸೊಸೆಗೆ ಉತ್ತರಾದೇವಿಯೆಂದು ಹೆಸರಾಯಿತೇನೋ. ಅಂತೂ ಉತ್ತರಾದೇವಿ ಅತ್ತೆಯ ಮನೆಯಿಂದ ತವರು ಮನೆಯತ್ತ ಹೊರಟಳು.

ಒಂದು ಮಗುವನ್ನು ಬಗಲಲ್ಲಿ ಎತ್ತಿಕೊಂಡಿದ್ದಾಳೆ. ಇನ್ನೊಂದನ್ನು ಕೈಹಿಡಿದು ನಡೆಸುತ್ತಿದ್ದಾಳೆ. ತುಸು ಮುಂದೆ ಸಾಗುವಷ್ಟರಲ್ಲಿ ಬಾಳೆ ಬನವನ್ನು ಕಂಡು, ಅದಕ್ಕೆ ಹೇಳುತ್ತಾಳೆ, ತವರುಮನೆಗೆ ಹೋಗುವೆನೆಂದು. “ನೀನು ಹೋದರೆ ನಮಗೆ ನೀರುಣಿಸುವವರಾರು ? ಹಣ್ಣಾದರೆ ತಿನ್ನುವವರಾರು?” ಎಂದು ಕೇಳಿತು ಬಾಳೆಯ ಬನ.

“ನೀರುಣ್ಣಿಸುವದಕ್ಕೂ ಹಣ್ಣು ತಿನ್ನುವದಕ್ಕೂ ನನಗಿಂತ ಜಾಣೆಯಾದವಳು ಈ ಮನೆಗೆ ಬರುತ್ತಾಳೆ” ಎಂದು ಮರುನುಡಿಯುತ್ತಾಳೆ ಉತ್ತರೆ.

ಇನ್ನೂಮುಂದೆ ಹೋದಾಗ ಕಿತ್ತಳೆಯ ಬನಕ್ಕೂ ಹೇಳುತ್ತಾಳೆ ತವರೂರಿಗೆ ಹೋಗುವೆನೆಂದು. ಕಿತ್ತಳೆ ಬನವೂ ಕೇಳುತ್ತದೆ – “ನೀನು ಹೋದರೆ ನನಗೆ ನೀರುಣ್ಣಿಸುವರಾರು? ಹಣ್ಣಾದರೆ ತಿನ್ನುವವರಾರು” ಎಂದು. ಅದಕ್ಕೂ ಮರುನುಡಿಯುತ್ತಾಳೆ ಅದೇಬಗೆಯಾಗಿ -“ನೀರುಣಿಸುವದಕ್ಕೂ ಹಣ್ಣುತಿನ್ನುವದಕ್ಕೂ ನನಗಿಂತ ಜಾಣೆಯಾದವಳು ಈ ಮನೆಗೆ ಬರುತ್ತಾಳೆ.”

ಅತ್ತೆಯಾದವಳು ಸೀರೆಕುಪ್ಪಸಗಳ ದೊಡ್ಡ ಗಂಟನ್ನೇ ಆಕೆಯ ಮುಂದೆ ಇಳುಹಿದರೆ ಸೊಸೆ – “ಇನ್ನಾವ ಸೀರೆಯೂ ಬೇಡ. ಬೇರಾವ ಕುಪ್ಪಸವೂ ಬೇಡ, ನಮ್ಮವ್ವ ನನಗೆಂದು ಕೊಟ್ಹ ಸೀರೆಕುಪ್ಪಸ ಎತ್ತಿ ಇಡಿರಿ ಈಚೆಗೆ” ಎಂದಳು.

ಒಂದು ಮಗುವನ್ನು ಬಗಲಲ್ಲಿ ಎತ್ತಿಕೊಂಡು, ಇನ್ನೊಂದನ್ನು ಕೈಯಲ್ಲಿ ಹಿಡಿದುಕೊಂಡು, ಕಾಲ್ಗೆಜ್ಜೆಯನ್ನು ಗಿಲಿಸುತ್ತ ಹೊರಟ ಆಕೆಯನ್ನು ಕಂಡು ದೊಡ್ಡ ಮನುಷ್ಯರೊಬ್ಬರು ಕೇಳಿದರು – “ನೀನಾವ ರಾಜನ ಸೊಸೆಯಮ್ಮ?”

“ನಾನಾವ ರಾಜನ ಸೊಸೆಯಾಗಲಿ ? ಅತ್ತೆಮ್ಮನ ಉರವಣಿಗೆಯಲ್ಲಿ ತವರೂರಿಗೆ ಹೊರಟಿದ್ದೇನೆ” ಎಂದು ಉತ್ತರಾ ಮರುನುಡಿಯುತ್ತಾಳೆ.

ಮೊದಲು ತಂದೆಯ ಮನೆಗೆ ಹೋಗಿ –  ಕದತೆಗೆ, ಅಪ್ಪಯ್ಯ, ಕದತೆಗೆಯಿರಿ. ನನ್ನಪ್ಪಾ ನನಗೆ ಕದತೆಗೆ” ಎಂದು ಕೂಗಲು ಒಳಗಿನಿಂದ ತಂದೆಯ
ಉತ್ತರ ಬರುತ್ತದೆ. –

“ಕಂದವ್ವನನ್ನು ತೊಡೆಯಮೇಲೆ ಹಾಕಿಕೊಂಡು ಚಾಪೆಯಮೇಲೆ ಕುಳಿತಿದ್ದೇನೆ. ದೀಪದ ಬುರುಡೆ ತುಂಬಿದೆ. ಹೇಗೆ ಎದ್ದು ಬರಲಿ ? ಮಗಳೇ, ನಿಮ್ಮಣ್ಣನ ಮನೆಗೆ ಹೋಗವ್ವ”

ಬಳಿಕ ಅಣ್ಣನ ಮನೆಗೆ ಹೋಗಿ ಅಲ್ಲಿಯೂ ಅದೇ ಬಗೆಯಾಗಿ ಹಲುಬಿದರೆ, ಅಣ್ಣನ ತೊಡೆಯ ಮೇಲೆ ಮುದ್ದುಮಗು ಮಲಗಿದ್ದರಿಂದ ಅವನಿಗೂ ಎದ್ದು ಬರಲಿಕ್ಕಾಗಲಿಲ್ಲ. ಅಕ್ಕನಮನೆಗೆ ಹೋಗಲು ತಿಳಿಸಿದನು.

ಅಕ್ಕನ ಮನೆ ಆಯಿತು. ತಂಗೆಯಮನೆ ಆಯಿತು. ಅಲ್ಲಿ ತೋಳಿನಲ್ಲಿ ಕೆಂಪವ್ವ ಮಲಗಿದ್ದರೆ, ಇಲ್ಲಿ ಕಾಳವ್ವ ಮಲಗಿದ್ದಳು. ಆದ್ದರಿಂದ ಎದ್ದು ಬರುವವರಾರು? ತಂಗಿಯ ಸೂಚನೆಯಂತೆ ಅವ್ವನ ಮನೆಗೆ ಹೋದಳು.

ಕಣ್ಣೀರು ಕೋಡಿಯಾಗಿ ಹರಿಯುತ್ತದೆ.

“ಕದ ತೆಗೆ ಅವ್ವಾ” ಅಂದಾಗ ಅವಳು ಕದತೆಗೆದು ಮಗಳನ್ನು ಅಪ್ಪಿಕೊಂಡು ತಲೆತಡವಿದಳು. ಕಣ್ಣೀರು ಹೊಳೆಯಾಗಿ ಹರಿಸುತ್ತ ಹೇಳಿದಳು –

“ನಿನ್ನಪ್ಪ ನನ್ನನ್ನು ಉರಿಸಿದನು. ನನ್ನ ಪಾಡು ನಿನಗೂ ತಗುಲಿತೇ ? ನೀನು ಉತ್ತರಾಮಳೆಯಾಗಿ ಹೊರಡಿನ್ನು”.

ಮಗಳು ಒಂದು ಮಗುವನ್ನು ಬಗಲಲ್ಲಿ ಎತ್ತಿಕೊಂಡು, ಇನ್ನೊಂದನ್ನು ಕೈಯಲ್ಲಿ ಹಿಡಿದುಕೊಂಡು ಕಾಲುಗೆಜ್ಜೆ ಗಿಲಕ್ ಅನ್ನುತ್ತಿರಲಿ, ಉತ್ತರೆ ಮಳೆಯಾಗಿ ಹೊರಟಳು.

ಉತ್ತರೆಮಳೆಗಾಗಿ ದಾರಿಕಾಯದವರು ಯಾರಿದ್ದಾರೆ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...