Home / ಕಥೆ / ಜನಪದ / ಕೊಂಡು ತಂದ ಮಾತು

ಕೊಂಡು ತಂದ ಮಾತು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಚಿಕ್ಕ ಹಳ್ಳಿಯೊಂದರಲ್ಲಿ ಸಮಗಾರ ಗಂಡಹೆಂಡಿರಿದ್ದರು. ಗಂಡನು ಹಳೆಯ ಕಾಲ್ಮರೆಗಳನ್ನು ಗಟ್ಟಿಮಾಡಿಕೊಡುವ ಕೆಲಸಮಾಡುತ್ತಿದ್ದನು. ಇಡಿಯವಾರ ದುಡಿದರೂ ಅವನಿಗೆ ಒಂದು ರೂಪಾಯಿಗಿಂತ ಹೆಚ್ಚು ಗಳಿಕೆ ಆಗುತ್ತಿದ್ದಿಲ್ಲ.

ನೆರೆಯೂರಿನ ಸಂತೆಗೆ ಹೋಗಿ ಉಪ್ಪು – ಮೆಣಸಿನಕಾಯಿ ಮೊದಲಾದವುಗಳನ್ನು ಕೊಂಡುತರುವದಕ್ಕಾಗಿ ಹೆಂಡತಿಯು ಹನ್ನರಡಾಣೆ ಹಣವನ್ನು ಗಂಡನ ಕೈಗಿತ್ತಳು. ಹಸಿವೆಯಾದಾಗ ಉಣ್ಣಲೆಂದು ಒಂದೆರಡು ರೊಟ್ಟಿಗಳನ್ನೂ ಕಟ್ಟಿದಳು.

ಸಮಗಾರನು ದಾರಿ ಹಿಡಿದು ಸಾಗುತ್ತಿರಲು ಅವನಿಗೆ ಕುದುರೆಯ ಮೇಲೆ ಕುಳಿತು ಸಂತೆಗೆ ಹೊರಟವನು ಚೊತೆಯಾದನು. ಅವನನ್ನು ಕುರಿತು ಸಮಗಾರನು – “ಅಪ್ಪಾ, ಏನಾದರೊಂದು ಮಾತು ಹೇಳಿರಿ. ಅಂದರೆ ದಾರಿಸಾಗುತ್ತದೆ” ಎಂದನು.

“ಮಾತೆಂದರೆ ಸುಮ್ಮನೇ ಬರುವವೇ ? ಮಾತಿಗೆ ರೊಕ್ಕ ಬೀಳುತ್ತವೆ” ಎಂದನು ಕುದುರೆಯವನು.

“ಒಂದು ಮಾತಿನ ಬೆಲೆ ಎಷ್ಟು?” ಸಮಗಾರನ ಪ್ರಶ್ನೆ.

“ನಾಲ್ಕಾಣೆಗೊಂದು ಮಾತು.”

ಹೆಂಡತಿ ಸಂತೆಗಾಗಿ ಕೊಟ್ಟ ಹನ್ನರಡಾಣೆಗಳಲ್ಲಿ ನಾಲ್ಕಾಣೆಕೊಟ್ಟು ಒಂದು ಮಾತು ಕೊಂಡರಾಗುತ್ತದೆ. ಕೊಂಡಮಾತು ಎಂಥವಿರುತ್ತವೆಯೋ ನೋಡೋಣ – ಎಂದುಕೊಂಡು, ಕಿಸೆಯೊಳಗಿನ ನಾಲ್ಕಾಣೆ ರೊಕ್ಕ ತೆಗೆದು ಕುದುರೆಯವನ ಕೈಯಲ್ಲಿಟ್ಟು – “ಒಂದು ಮಾತು ಹೇಳಿರಿ” ಅಂದನು.

“ಸತ್ತವನನ್ನು ಹೊತ್ತು ಹಾಕಬೇಕು.”

“ಇಷ್ಟಕ್ಕೇ ನಾಲ್ಕಾಣೆ ಕೊಟ್ಟಂತಾಯಿತು. ಆಗಲಿ. ಇನ್ನೊಂದು ಮಾತು ಹೇಳಿ. ಇಕೊಳ್ಳಿರಿ, ನಾಲ್ಕಾಣೆ” ಸಮಗಾರನು ಅನ್ನಲು “ಸರಕಾರದ ಮುಂದೆ ಸುಳ್ಳು ಹೇಳಬಾರದು” ಇದು ಕುದುರೆಯವನು ಹೇಳಿದ ಎರಡನೇಮಾತು. ಸಮಗಾರನಿಗೆ ಅನಿಸಿತು – “ಇನ್ನುಳಿದ ನಾಲ್ಕಾಣೆಯಿಂದ ಸಂತೆಯಲ್ಲಿ ಏನುಕೊಳ್ಳಲಿಕ್ಕಾಗುತ್ತದೆ? ಇನ್ನೊಂದು ಮಾತನ್ನೇ ಕೊಂಡರಾಯಿತು” ಕುದುರೆಯವನಿಗೆ ಮತ್ತೆ ನಾಲ್ಕಾಣೆಕೊಟ್ಟು ಮೂರನೇ ಮಾತು ಕೇಳಿದನು-

“ಹೆಂಡತಿಯ ಮುಂದೆ ನಿಜ ಹೇಳಬಾರದು” ಇದೇ ಆತನು ಹೇಳಿಕೊಟ್ಟ ಮೂರನೇಮಾತು. ಸುಮಗಾರನಿಗೆ ಸಂತೆಯಲ್ಲಿ ಮಾಡಬೇಕಾದ ಯುವಕೆಲಸವೂ ಇರಲಿಲ್ಲ,- ನೇರವಾಗಿ ಹಳ್ಳಕ್ಕೆ ಹೋಗಿ ಹೆಂಡತಿಕಟ್ಟಿಕೊಟ್ಟ ಎರಡು ರೊಟ್ಟಿಗಳನ್ನು ತಿಂದು ಊರ ಚಾವಡಿ ಮುಂದಿನ ಕಟ್ಟಿಯಮೇಲೆ ಕುಳಿತುಕೊಂಡನು. ಅ ಅಷ್ಟರಲ್ಲಿ ಓಲೆಕಾರನು ಬಂದು – “ನಿನ್ನನ್ನು ಗೌಡರು ಕರೆಯುತ್ತಾರೆ” ಎನ್ನಲು ಸಮಗಾರನು ಗೌಡನ ಬಳಿಗೆ ಹೋದನು. ಗೌಡ ಹೇಳಿದನು ಆತನಿಗೆ – “ಇಗೋ, ಇಲ್ಲಿ ಯಾವ ಊರಿನವನೋ ಏನೋ, ಮಲಗಿಕೊಂಡಲ್ಲಿಯೇ ಸತ್ತಿದ್ದಾನೆ. ಆತನನ್ನು ಹೊತ್ತೊಯ್ದು ಹುಗಿದು ಬಾ, ಎರಡು ರೂಪಾಯಿ ಕೊಡುತ್ತೇನೆ.”

ಸಮಗಾರನಿಗನಿಸಿತು – ನಾಲ್ಕಾಣೆಗೆ ಕೊಂಡ ಒಂದು ಮಾತು ಎರಡು ರೂಪಾಯಿ ಗಳಿಸಿಕೊಡುತ್ತಿರುವಾಗ ಒಲ್ಲೆನೆನ್ನಬಾರದು. ಗೌಡನಿಂದ ಎರಡು ರೂಪಾಯಿ ಇಸಗೊಂಡು ಮಲಗಿದವನ ಬಳಿಗೆ ಹೋಗಿ, ಅವನನ್ನು ಎತ್ತಿ ಕುಳ್ಳಿರಿಸುವಷ್ಟರಲ್ಲಿ ಒಂದು ಹಮ್ಮಿಣಿಯೇ ಸಿಕ್ಕಿತು. ಅದನ್ನು ಭದ್ರವಾಗಿರಿಸಿಕೊಂಡು ಹೆಣವನ್ನು ಹೊತ್ತು ಹುಗಿದುಬಂದನು ಸಂತೆಗೆ.

ಜೀವ ಬೇಡಿದ್ದನ್ನು ಮೊದಲು ಕೊಂಡು ತಿಂದು, ಆ ಬಳಿಕ ಒಂದು ಕುದುರೆಯನ್ನು ಕೊಂಡು ಅದರ ಮೇಲೆ ಕುಳಿತುಕೊಂಡು ತನ್ನೂರ ಹಾದಿ ಹಿಡಿದನು- ದಾರಿ ನೋಡುತ್ತ ಕುಳಿತ ಹೆಂಡತಿಯು ದೂರದಿಂದಲೇ ಗಂಡನನ್ನು ಗುರುತಿಸಿ, “ಕುದುರೆ ಎಲ್ಲಿಂದ ತಂದಿ” ಎಂದು ಕೇಳಿದಳು. “ತಡೆ, ಹೇಳುತ್ತೇನೆ” ಎಂದು ಕುದುರ ಕಟ್ಟಿ ಹಾಕಿ ಒಳಗೆ ಹೋಗಿ ಹೆಂಡತಿಯ ಕೈಯಲ್ಲಿ ಹಮ್ಮೀಣಿಕೊಟ್ಟು ತೆಗೆದು ಇಡಲು ಹೇಳಿದನು.

“ಇದೆಲ್ಲಿ ಸಿಕ್ಕಿತು ?” ಹೆಂಡತಿಯ ಪ್ರಶ್ನೆ.
‘ನೀನು ಕಟ್ಟಿಕೊಟ್ಟ ಎರಡು ರೊಟ್ಟಿಯಿಂದ ಹೊಟ್ಟಿತುಂಬಲಿಲ್ಲ. ಒಂದು ಎಕ್ಕಲೆ ಗಿಡದ ಬಳಿಗೆ ಹೋಗಿ ಅದರ ಹಾಲು ತೆಗೆದುಕೊಂಡು ಕುಳಿತಾಗ ಈ ಹಮ್ಮೀಣಿ ಕಾಣಿಸಿತು” ಎಂದು ಸುಳ್ಳುಸುಳ್ಳು ಹೇಳಿದೆನು. ಹೆಂಡತಿಯ ಮುಂದೆ ನಿಜ ಹೇಳಬಾರದು – ಎಂಬ ಮಾತು ಕೊಂಡಿದ್ದನಲ್ಲವೇ ?

ಹಮ್ಮೀಣಿಯ ಸಹಾಯದಿಂದ ಸುಮಗಾರಮ ಹೊಸಮನೆ ಕಟ್ಟಿಸಿದನು.
ಎತ್ತುಗಳನ್ನು ಕೊಂಡನು. ಗಾಡಿ ಮಾಡಿಸಿದನು. ಹಯನಿಗೆ ಎಮ್ಮೆ ಕಟ್ಟಿದನು.
ಹೆಂಡತಿಗೆ ಒಳ್ಳೊಳ್ಳೆಯ ಸೀರ ಕುಪ್ಪಸ ಕೊಟ್ಟನು. ಆಭರಣಗಳನ್ನು ತಂದನು..
ಅದನ್ನೆಲ್ಲ ಕಂಡು ನೆರೆಹೊರೆಯವರಿಗೆ ಆಶ್ಚರ್ಯವೆನಿಸಿತು.

ಸಮಾಗಾರನ ಹೆಂಡತಿಯನ್ನು ಒತ್ತಟ್ಟಿಗೆ ಕರೆದು, ನೆರೆಮನೆಯ ಹೆಣ್ಣುಮಗಳು ಕೇಳಿದಳು – “ಇದೆಲ್ಲ ಐಶ್ವರ್ಯ ಎಲ್ಲಿಂದ ಬಂತು ?”

“ಸಂತೆಗೆ ಹೋದಾಗ ನನ್ನ ಗಂಡನು ಹೊಟ್ಟೆತುಂಬಲಿಲ್ಲವೆಂದು ಎಕ್ಕೆಲೆಯ ಹಾಲು ಕುಡಿದು, ಕುಳಿತಾಗ ರೊಕ್ಕದ ಹಮ್ಮೀಣಿಯೇ ಕಾಣಿಸಿತಂತೆ” ಎಂದು
ಸಮಗಾರತಿ ಹೇಳಿದಳು.

ನೆರೆಮನೆಯ ಹೆಂಗಸು ತನ್ನ ಗಂಡನನ್ನು ಸಂತೆಗೆ ಕಳಿಸುವ ಎತ್ತುಗಡೆ ಮಾಡಿದಳು. ಎಕ್ಕೆಲೆಯ ಹಾಲು ಕುಡಿಯುವ ರಹಸ್ಯವನ್ನು ಹೇಳಿಕೊಟ್ಟಳು. ಕೈಯಲ್ಲಿ ಹನ್ನೆರಡಾಣೆ ರೊಕ್ಕ ಕೊಟ್ಟಳು.

ಶ್ರೀಮಂತನಾಗಬೇಕೆಂಬ ಹವ್ಯಾಸದಿಂದ ಹೆಂಡತಿಯ ಮಾತು ಕೇಳಿ, ಎಕ್ಕಲೆಯ ಹಾಲು ಕುಡಿದು, ಹೊಟ್ಟಿಯುರಿಯುವದೆಂದು ಮನೆಗೆ ಬಂದು ಆ ಗೃಹಸ್ಥನು ಸತ್ತೇಹೋದನು. ಆತನ ಹೆಂಡತಿ ಸಮಗಾರ್ತಿಯ ಮಾತು ಕೇಳಿದ್ದರಿಂದ ಹೀಗಾಯಿತೆಂದು ಬೊಬ್ಬಿಟ್ಟಳು.

ಸರ್ಕಾರದವರು ಸಮಗಾರ್ತಿಯನ್ನು ಕರೆಸಿ ಕೇಳಿದರೆ ಆಕೆ ತನ್ನ ಗಂಡನ ಹೆಸರು ಹೇಳಿದಳು. ಸಮಗಾರನನ್ನು ಕರೆಯಿಸಲು, ಸರ್ಕಾರದ ಮುಂದೆ ಸುಳ್ಳು ಹೇಳಬಾರದು – ಎಂಬ ಮಾತು ನೆನಪಿಗೆ ಬಂತು. ನಡೆದ ಸಂಗತಿಯನ್ನೆಲ್ಲ ಹೇಳಿದನು. ಹೆಂಡತಿಯ ಮುಂದೆ ನಿಜ ಹೇಳಬಾರದು – ಎಂಬ ಮಾತಿನ ಪ್ರಕಾರ ನಾನು ಆಕೆಗೆ ಎಕ್ಕಲೆಯ ಕಥೆಯನ್ನು ಹುಟ್ಟಿಸಿಕೊಂಡು ಹೇಳಿದೆನೆಂದೂ ನುಡಿದನು.

“ಎಕ್ಕಲೆಯ ಹಾಲು ಕುಡಿದರೆ ಹೊಟ್ಟೆಯಲ್ಲಿ ಉರುಪುಬಿಟ್ಟು ಸಾಯುವರು” ಎಂಬುದು ನಿನ್ನ ಗಂಡನಿಗೆ ತಿಳಿಯಲಿಲ್ಲವೇ ? ಹೋಗು. ಸಮಗಾರ್ತಿಯದಾಗಲಿ ಸಮಗಾರನದಾಗಲಿ ಏನೂ ತಪ್ಪಿಲ್ಲ. ನಿನ್ನದೇ ತಪ್ಪು. ಮಾಡಿದ್ದನ್ನು ಭೋಗಿಸು” ಎಂದರು ಸರ್ಕಾರದವರು ಆಕೆಗೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...