Home / ಕಥೆ / ಜನಪದ / ಆಶೆ ಬಹಳ ಕೆಟ್ಟದು

ಆಶೆ ಬಹಳ ಕೆಟ್ಟದು

ಕಾಶಮ್ಮ – ಮಲ್ಲೇಶಿ ಎಂಬ ಅಜ್ಜಿ ಮೊಮ್ಮ್ಮಗ ಇದ್ದರು. ಮೊಮ್ಮಗನು ದುಡಿದು ತಂದಷ್ಟರಲ್ಲಿಯೇ ಅವರಿಬ್ಬರೂ ಕಷ್ಟದಿಂದ ಬಾಳ್ವೆ ಮಾಡುತ್ತಿದ್ದರು.
ಒಂದು ದಿನ ಮಲ್ಲೇಶಿ ಹೇಳಿದನು ಅಜ್ಜಿಗೆ – “ಅಜ್ಜೀ, ಈ ಚಿಕ್ಕ ಹಳ್ಳಿಯಲ್ಲಿ ಬಾಳ್ವೆ ಸರಿಯಾಗಿ ಸಾಗುವಂತಿಲ್ಲ. ನೆರೆಯೂರಿಗೆ ಹೋಗೋಣ.” ಅಜ್ಜಿಗೂ ಆ ಮಾತು ಸಮ್ಮತವಾಯಿತು. ಹೊರಟೇಬಿಟ್ಟರು ಬೆಣ್ಣೆಕಟ್ಟೆಗೆ.

ಬೆಣ್ಣಿಕಟ್ಟೆಗೆ ಒಬ್ಬ ಸಾಹುಕಾರನ ಮನೆಗೆ ಹೋದಾಗ ಅವನು ಅದೇ ಉಂಡು, ಎಲೆ ಅಡಿಕೆ ಮೆಲ್ಲುತ್ತ ಕುಳಿತುಕೊ೦ಡಿದ್ದನು. ಅಜ್ಜಿ ಕೇಳಿದಳು –
“ಧನಿಯರೇ ನಾವು ಬೇರೂರಿಂದ ಬಂದಿದ್ದೇವೆ, ಇಲ್ಲೆ ದುಡಕೂಂಡು ತಿನ್ನಲಿಕ್ಕೆ. ಇರಲಿಕ್ಕೆ ಒಂದಿಷ್ಟು ಜಾಗಕೊಡಿರಿ.”

“ನಮ್ಮ ಹಿತ್ತಲಲ್ಲಿ ಕಸ ಚೆಲ್ಲುವ ಒಂದು ಗುಂಡಿಯಿದೆ. ಅದರೂಳಗಿನ ಕಸವನ್ನೆಲ್ಲ ನಮ್ಮ ತೋಟಕ್ಕೊಯ್ದು ಹಾಕಿ ಆ ತೋಟದಲ್ಲಿರುವ ಒಂದೆರಡು ಮುರುಕು ತಗಡುಗಳನ್ನು ತಂದು ಆಶ್ರಯ ಮಾಡಿಕೊಂಡು ಇರುವಿರಾ?” ಸಾಹುಕಾರನು ಕೇಳಿದನು.

“ಆ ಜಾಗದ ಬಾಡಿಗೆ ಎಷ್ಟು ?” ಅಜ್ಜಿಯ ಪ್ರಶ್ನೆ.”

“ನಮ್ಮಲ್ಲಿರುವ ನಾಲ್ಕು ಎಮ್ಮೆ ಎರಡು ಹೋರಿ, ಮೂರು ಆಕಳುಗಳನ್ನು ಕಾಯಬೇಕು. ಅವುಗಳ ಸೆಗಣಿಯನ್ನು ಬಡಿದು ಕುಳ್ಳುಹಚ್ಚಬೇಕಲ್ಲದೆ ಅವುಗಳನ್ನು ಮಾರಿಕೊಂಡು ಬಂದು, ನಮಗೆ ರೊಕ್ಕ ಕೊಡಬೇಕು; ಅದೇ ಬಾಡಿಗೆ.”

ಸಾಹುಕಾರನು ಹೇಳಿದ್ದಕ್ಕೆ ಮುದಿಕೆ ಒಷ್ಟಿಕೊಂಡಳು. ಮಲ್ಲೇಶಿಗೂ ಕೆಲಸ ದೊರೆತು ಉಪಜೀವನಕ್ಕ ದಾರಿಯಾಯಿತು.

ಶಿವನು ಸಾಹುಕಾರನನ್ನು ಪರೀಕ್ಷಿಸಬೇಕೆಂದು ಮುಪ್ಪಿನ ಭಿಕ್ಷುಕನಾಗಿ ಬಂದು ಒಂದು ದಿನ ಸಾಹುಕಾರನ ಮನೆಯ ಮುಂದೆ ನಿಂತು – “ಅನ್ನ ನೀಡಿರಿ”
ಎಂದು ಕೂಗ ತೊಡಗಲು, “ಮುಂದೆ ಸಾಗು” ಎಂದು ಸಾಹುಕಾರನು ಅಬ್ಬರಿಸಿದನು. ಅದನ್ನು ಕಂಡು ಕನಿಕರವೆನಿಸಿ ಅಜ್ಜಿಯು ಆ ಮುದುಕನನ್ನು
ಕರೆತಂದು ಕುಳ್ಳಿರಿಸಿ ಉಣಬಡಿಸಿದಳು| ಒಂದು ರೊಟ್ಟಿ, ಪುಂಡಿಪಲ್ಲೆ. ಹಸಿದ ಭಿಕ್ಷುಕನು ಅದನ್ನು ಗಪಗಪನೆ ತಿಂದು ಇನ್ನೂ ಒಂದು ರೊಟ್ಟಿ ಕೇಳಿದನು.
ಮೊಮ್ಮಗನಿಗಾಗಿ ಇಟ್ಟ ರೊಟ್ಟಿಯನ್ನೂ ಅಜ್ಜಿಯು ಭಿಕ್ಷುಕನಿಗೆ ನೀಡಿದಳು ಅದೂ ಸಾಕಾಗದೆ – “”ಅಜ್ಜಿ, ನೀನು ಬಯ್ದರೂ ಚಿಂತೆಯಿಲ್ಲ. ಇನ್ನೊಂದು ರೊಟ್ಟಿ ಕೊಡಮ್ಮ” ಎ೦ದನು ಆ ಬಿಕ್ಷುಕ.

ಅಜ್ಜಿಯ ಬಳಿಯಲ್ಲಿಯೂ ರೊಟ್ಟ ಉಳಿದಿರಲಿಲ್ಲ. ವಿಚಾರಿಸತೊಡಗಿದಳು. ಮರು ಕ್ಷಣದಲ್ಲಿ ಏನೋ ಹೊಳೆದಂತಾಗಿ ಅಲ್ಲಿಂದೆದ್ದು ಸಾಹುಕಾರನ ಮನೆಗೆ ಹೋಗಿ ಒಂದು ರೊಟ್ಟಿಯನ್ನು ಕೈಗಡ ಕೇಳಿದಳು. “ರೊಟ್ಟಿಯನ್ನು ಕೈಗಡ ಕೊಡುವದಿಲ್ಲ. ಸಾಲವಾಗಿ ಕೊಡುತ್ತೇನೆ. ಅದಕ್ಕ ಬಡ್ಡಿ ಬೀಳುತ್ತದೆ” ಎಂದನು.

ಅಜ್ಜಿ ಅದಕ್ಕೊಪ್ಪಲು ಸಾಹುಕಾರನು ಒಳಗೆ ಹೋಗಿ ಹೆಂಡತಿಗೆ ಹೇಳಿದೆನು, ಕಿವಿಯಲ್ಲಿ – “ತುಸು ಹಿಟ್ಟು ಹಿಡಿದು ತೆಳ್ಳಗಿನ ಒಂದು ರೊಟ್ಟಿ ಮಾಡಿಕೊಡು.”
ಸಾಹುಕಾರನಿತ್ತ ರೊಟ್ಟಿಯನ್ನು ತಂದು ಭಿಕ್ಷುಕನಿಗೆ ನೀಡಿದಳು. ಆತನು ಉಂಡು ಸಂತುಷ್ಟನಾಗಿ ಅಜ್ಜಿಗೊಂದು ದುಡ್ಡುಕೊಟ್ಟು – “ನಿನ್ನ ಮೊಮ್ಮಗನಿಗೆ ಚುರುಮುರಿ ತಿನ್ನಲಿಕ್ಕೆ” ಎಂದನು. ಅಜ್ಜಿ ಆ ದುಡ್ಡನ್ನು ತನ್ನ ಮುರುಕ ಪೆಟ್ಟಿಗೆಯಲ್ಲಿಟ್ಟಳು.

ಮಧ್ಯಾಹ್ನದ ಹೊತ್ತಿಗೆ ಮಲ್ಲೇಶಿ ಹೊಲದಿಂದ ಹಸಿದು ಬಂದು, ಊಟಕ್ಕೆ ಸಿದ್ಧನಾದನು. ಅಜ್ಜಿಗೇನೂ ತಿಳಿಯದಾಯಿತು. ಮನೆಯಲ್ಲಿ ರೊಟ್ಟಿಯೂ ಇರಲಿಲ್ಲ, ಹಿಟ್ಟೂ ಇರಲಿಲ್ಲ. “ಒಂದು ದುಡ್ಡ ಅದೆ, ಚುರುಮುರಿಕೊಂಡು ತಿನ್ನು” ಎಂದು ಪೆಟ್ಟಿಗೆ ತೆಗೆದು ನೋಡಿದಾಗ, ಪೆಟ್ಟಿಗೆಯ ತು೦ಬ ಬಂಗಾರವಾಗಿತ್ತು.

“ಇದನ್ನೆಲ್ಲಿಂದ ತಂದಿ ? ಯಾರು ಕೊಟ್ಟರು ?” ಎಂದು ಕೇಳಿದನು ಮಲ್ಲೇಶಿ. ಅಜ್ಜಿ ನಡೆದ ಕಥೆಯನ್ನೆಲ್ಲ ಹೇಳಿದಳು.

ಪಟ್ಟಿಗೆಯೊಳಗಿನ ಅರ್ಧಬ೦ಗಾರ ಮಾರಿ, ಬೆಚ್ಚಗಿನ ಮನೆ ಕಟ್ಟಿಸಿದರು. ಎತ್ತು ಗಾಡಿ ಕೊಂಡರು. ಮಲ್ಲೇಶಿಯೂ ಸಾಹುಕಾರನೇ ಆಗಿ ಕುಳಿತನು,
ಆ ಚೆಣ್ಣಿಕೆಟ್ಟಿಯಲ್ಲಿ.

ಅದನ್ನೆಲ್ಲ ಕಂಡ ಸಾಹುಕಾರನಿಗೆ ಅಸೂಯೆ ಉಂಟಾಯಿತು. ಇದೆಲ್ಲ ಐಶ್ವರ್ಯಾ ಏತರಿಂದ ಬ೦ತೆ೦ದು ಅಜ್ಜಿಗೆ ಕೇಳಲು ಹೆ೦ಡತಿಗೆ ತಿಳಿಸಿದನು.
ಸಾಹುಕಾರನ ಹೆ೦ಡತಿ ಅಜ್ಜಿಯ ಮನೆಗೆ ಬ೦ದು ಕೇಳಿದರೆ – “ಭಿಕ್ಷುಕ ಮುದುಕನು ನಮ್ಮಲ್ಲಿ ಉಂಡು ಹೋಗುವಾಗ ಒಂದು ದುಡ್ಡು ಕೊಟ್ಟ ಹೋಗಿದ್ದನು. ಅದರಿಂದ ಒಂದು ಪೆಟ್ಟಿಗೆ ಬಂಗಾರವಾಗಿ ಬಿಟ್ಟಿತು. ಅದೇ ಈ ಎಲ್ಲ ಐಶ್ವರ್ಯಕ್ಕೆ ಕಾರಣ” ಎಂದಳು ಕಾಶಮ್ಮಜ್ಜೆ.

ಹೆಂಡತಿಯ ಬಾಯಿಂದ ಅಜ್ಜಯ ಐಶ್ವರ್ಯದ ಕಾರಣ ತಿಳಿದು ಸಾಹುಕಾರನ ಆಶಗೆ ಕುಡಿ ಒಡೆಯಿತು. ಒಬ್ಬ ಭಿಕ್ಷುಕನನ್ನು ಹಿಡಿದು ತಂದು, ಹುಗ್ಗಿ ಹೋಳಿಗೆ ಉಣಿಸಿದರೆ, ಆತನು ಒಂದೇ ದುಡ್ಡಲ್ಲ ಎರಡು ದುಡ್ಡು ಕೊಡುವದರಿಂದ ಎರಡು ಪೆಟ್ಟಿಗೆ ಬಂಗಾರ ಸಿದ್ಧವಾಗುವದೆಂದು ಲೆಕ್ಕ ಹಾಕಿದನು. ಶಿವನು ಅದೇ ವೇಷದಿಂದ ಕಾಣಿಸಿಕೊಳ್ಳಲು ಅವನನ್ನು ಕರೆತಂದು ಪಂಚಪಕ್ವಾನ್ನಗಳನ್ನು ಸಾಕುಸಾಕೆ೦ದರೂ ಉಣಬಡಿಸಿದರು. ಭಿಕ್ಷುಕನು ಉಂಡುಹೋಗುವಾಗ ವಾಡಿಕೆಯಂತೆ ಕೊಟ್ಟ ದುಡ್ಡನ್ನೂ ಸಾಹುಕಾರನು ತಿಜೊರಿಯಲ್ಲಿಟ್ಟು ಕೀಲಿಹಾಕಿದನು.

ಅಂದು ರಾತ್ರಿ ಆತನಿಗೆ ನಿದ್ರೆಯೇ ಹತ್ತಲಿಲ್ಲ. ಹೊತ್ತು ಹೊರಡುವ ಸಂದರ್ಭವನ್ನೇ ನೋಡುತ್ತಿದ್ದನು. ತಡವಾಗಿಯಾದರೂ ಒಮ್ಮೆ ಬೆಳಗಾಯಿತು. ಸಾಹುಕಾರನು ಎದ್ದವನೇ ಮುಖಸಹ ತೊಳಕೊಳ್ಳದೆ, ಹೆಂಡತಿಯನ್ನು ಕರೆದು ತಿಜೋರಿಯನ್ನು ತೆರೆದರೆ, ಅಲ್ಲೇನು ಕಂಡನು? ಹಣವೆಲ್ಲ ಹಚ್ಜಾಗಿತ್ತು. ಬ೦ಗಾರವೆಲ್ಲ ಇದ್ದಿಲಾಗಿತ್ತು. ವಸ್ತು‌ಒಡವೆಗಳೆಲ್ಲ ಚೀಪುಗಲ್ಲು ಆಗಿದ್ದವು. ಏತಕ್ಕಾಗಿ ಬದುಕುವುದಿನ್ನು – ಎಂದು ನಿರಾಶನಾಗಿ ಕೈಯಾಡಿಸುವಷ್ಟರಲ್ಲಿ ಅವನ ಕೈಗೆ ಒಂದು ಕಾಗದ ಸಿಕ್ಕಿತು. ಅದನ್ನೆತ್ತಿಕೊಂಡು ಬಿಚ್ಚಿ ನೋಡುತ್ತಾನೆ, ಒಳಗೆ ಏನೋ ಬರೆದಿದೆ-

“ಆಶೆ ಬಹಳ ಕೆಟ್ಟದು. ಆಶೆಬುರುಕನಾಗಬಾರದು.” ಆ ಪಾಠ ಹೇಳಿಸಿಕೊಳ್ಳಲಿಕ್ಕೆ ಅದೆಷ್ಟು ಶುಲ್ಕನೀಡಬೇಕಾಯಿತಲ್ಲ ಆ ಸಾಹುಕಾರ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...