Home / ಕಥೆ / ಜನಪದ / ಕಥೆಯದೇ ಕಥೆ

ಕಥೆಯದೇ ಕಥೆ

ಅಳಿಯ ಇದ್ದನು. ಹಾಡಬಂದರೂ ಹಾಡು ಹೇಳುತ್ತಿದ್ದಿಲ್ಲ ; ಕಥೆ ಬಂದರೂ ಕಥೆ ಹೇಳುತ್ತಿದ್ದಿಲ್ಲ. “ಏನು ಬಂದು ಏನುಕಂಡೆವು. ಇವನೇನು ಒಂದು ಹಾಡು ಹೇಳಲಿಲ್ಲ ; ಕಥೆ ಹೇಳಲಿಲ್ಲ. ಇವನನ್ನು ಹೇಗಾದರೂ ಮಾಡಿ ಕೊಲ್ಲಬೇಕು” ಎಂದು ಕಥೆ ಹಂಚಿಕೆ ಹಾಕಿತು.

“ಮುಂಜಾನೆ ಎದ್ದಕೂಡಲೇ ಜೋಡು ಮೆಡುತ್ತಾನೆ. ಆವಾಗ ಅವನಿಗೆ ಚೇಳು ಆಗಿ ಕಡೆಯಬೇಕು. ಹೆಂಡತಿಯನ್ನು ಕರೆಯಲಿಕ್ಕೆ ಹೋಗುತ್ತಾನೆ- ಆವಾಗ ಅಗಸೆ ಅವನ ತಲೆಯಮೇಲೆ ಬೀಳುವಂತೆ ಮಾಡಬೇಕು” ಹೀಗೆನ್ನುವ ಕಥೆಯ ಮಾತನ್ನು ಆಳುಮಗ ಕೇಳಿರುತ್ತಾನೆ.

“ಎವ್ವಾ ಎವ್ವಾ, ನಾನೂ ಹೇಣತೀಗಿ ಕರಕೊಂಡು ಬರ್ತೀನಿ” ಎಂದು ಅವ್ವನಿಗೆ ಕೇಳಿ, ಆಕೆಯ ಅಪ್ಪಣೆ ಪಡೆಯುತ್ತಾನೆ, ಆ ಅಳಿಯ.

ಆವಾಗ ಆಳುಮಗ ಅನ್ನುತ್ತಾನೆ – “ನಾನು ಬರ್ತೀನಿ. ನಿನ್ನೊಡನೆ ಧಣೀ” “ಯಾತಕ್ಕ ಬರತೀಯೋ ಎತ್ತು ದನ ನೋಡಕೋತ ಇರು” ಎಂದರೂ ಕೇಳುವದಿಲ್ಲ. ಕುದುರೆಯ ಮೇಲೆ ಜೀನು ಬಿಗಿದು ಸಜ್ಜುಗೊಳಿಸುತ್ತಾನೆ. ಧಣಿಯು ಮುಂಜಾನೆ ಎದ್ದು ಜೋಡು ಮೆಡುವಷ್ಟರಲ್ಲಿ ಆಳು ಜೋಡಿನಲ್ಲಿರುವ ಚೇಳನ್ನು ನೋಡಿ ಅದನ್ನು ಕಡಿದು ಕಿಸೆಯಲ್ಲಿ ಹಾಕಿಕೊಂಡುಬಿಟ್ಟನು.

ಊರುಬಿಟ್ಟು ಹೊರಬೀಳುವಾಗ ಆಳು ಸುತ್ತು ಸುತ್ತು ದಾರಿಯಲ್ಲಿ ಕರಕೊಂಡು ಹೊರಟನು. ಅಗಸೆಯ ಎರಡೂ ದಾರಿ ಬಿಟ್ಟು, ಮೂರನೇ ಅಡ್ಡದಾರಿ ಹಿಡಿದು ಊರ ದಾಟಲಿಕ್ಕೆ ಅನುವು ಮಾಡಿಕೊಟ್ಟನು.

ಇಷ್ಟೆಲ್ಲ ಪಾರು ಆಗಿ ಅತ್ತೆಮಾವನ ಊರು ತಲುಪುತ್ತಾರೆ. ಅಲ್ಲಿ ಕೈಕಾಲು ತೊಳೆಯಲಿಕ್ಕೆ ಮನೆಯವರು ನೀರು ಕೊಟ್ಟರು; ಉಣಬಡಿಸಿದರು. ಬಹಳ ದಿನಗಳ ಮೇಲೆ ಬಂದವನೆಂದು ತಿಳಿದು ಹಾಸಿಗೆ ಮಾಡಿಕೊಟ್ಟು, ಅಳಿಯನಿಗೆ ಮಲಗಲು ಹೇಳಿದರು. ಪ್ರವಾಸದಿಂದ ದಣಿದ ಅಳಿಯ ಮಲಗಿಬಿಟ್ಟನು. ಹೆಂಡತಿಯ ನಡತೆ ಸರಿಯಾಗಿರಲಿಲ್ಲ. ಗಂಡನು ಮಲಗಿದ್ದನ್ನು ನೋಡಿದ ಕೂಡಲೇ, ದಿನಾಲು ಹೋಗುವಂತೆ ಮನೆಬಿಟ್ಟು ಹೊರಗೆ ಹೊರಟಳು. ಅವಳ ಹಿಂದಿನಿಂದ ಆಳುಮಗನೂ ಸಾಗಿದನು, ಆಕೆಗೆ ಗೊತ್ತಾಗದಂತೆ.

ಆಕೆ ನೇರವಾಗಿ ಫಕೀರನ ಮನೆಗೆ ಹೋದಳು; ಅವನನ್ನು ತೆಕ್ಕೆಹೊಡೆದಳು.

“ಇಷ್ಟೇಕೆ ತಡಮಾಡಿ ಬಂದಿ ? ಇಷ್ಟೇಕೆ ರಾತ್ರಿ ಮಾಡಿದಿ ?” ಎಂದು ಅವಳ ಮೂಗನ್ನೇ ಕೊಯ್ದು ಹಾಕಿದನು. ಆಕೆ ಅಳುತ್ತ ಕರೆಯುತ್ತ ಮನೆಯ ಕಡೆಗೆ ಹೊರಟಳು.

ಇನ್ನು ಗಂಡನ ಮನೆಗೆ ಯಾವ ಮುಖದಿಂದ ಹೋಗುವದು ?

“ಅವನೇ ಮೂಗು ಕೊಯ್ದನೆಂದು ಅಪವಾದ. ಹೊರಿಸಿದರಾಯಿತು. ತಾನೇ ಮೂಕಾಟಲೆ ಕರಕೊಂಡು ಹೋಗುತ್ತಾನೆ. ಮತ್ತು ಎಲ್ಲ ಸುರಳೀತ ನಡೀತದೆ” ಎಂದು ಲೆಕ್ಕ ಹಾಕಿದಳು. ಹಾಗೂ ಗಂಡನ ಮಗ್ಗುಲಲ್ಲಿ ಮಲಗಿಕೊಂಡಳು.

ಬೆಳಗಾಗುವ- ಮೊದಲೇ ಆಕೆಯೆದ್ದು “ನನ್ನ ಮೂಗು ಹೋಯಿತು” ಎಂದು ಬೊಬ್ಬೆ ಹೊಡೆದಳು. ಗಂಡನು ಗಾಬರಿಗೊಂಡು ಎದ್ದನು. ತಾಯಿತಂದೆ ಎಲ್ಲರೂ ಬಂದರು, “ಯಾಕೆ ಮಗಾ, ಏನಾಯ್ತು” ಎಂದು ಎಲ್ಲರೂ ಕೇಳುವವರೇ.

“ನನ್ನ ಗಂಡ ನನ್ನ ಮೂಗು ಕೊಯ್ದರೆಪ್ಪೋ” ಎಂದು ಗುಲ್ಲುಮಾಡಿದಳು.

ನೆರೆದ ಜನ ಅಳಿಯನಿಗೆ ಛೀ ಥೂ ಅಂದಿತು.

ಅಲ್ಲಿಯೇ ನಿಂತ ಆಳುಮಗ ಹೇಳಿದನು – “ನನ್ನ ಧೊರೀನೇ ಮೂಗು ಕೊಯ್ದಾನೆಂದರೆ ಅವನ ಕೈ ರಕ್ತ ಆಗಿರಬೇಕು. ಹಾಂಗ ಆಗಿಲ್ಲವಾದರೆ ಮತ್ತೆ ಯಾರಾದರೂ ಅವಳ ಮೂಗು ಕೊಯ್ದಿರಬೇಕು. ಫಕೀರ ಬಾವಾ ಸಾಹೇಬ ಅವಳ ಮೂಗು ಕೊಯ್ದಾನ.”

ಆಳು ಗಟ್ಟಿಸಿ ಹೇಳುವುದನ್ನು ಸುಳ್ಳು ಸತ್ಯ ನಿರ್ಣಯಿಸುವ ಸಲುವಾಗಿ ನೆರೆದವರೆಲ್ಲರೂ ಕಂದೀಲು ಹಿಡಕೊಂಡು ಫಕೀರನ ಮನೆಗೆ ಹೋದರು.

ಅಲ್ಲಿ ನೋಡಿದರೆ ಫಕೀರನ ಮನೆಯಲ್ಲಿ ರಕ್ತ ಬಿದ್ದಿರುತ್ತದೆ.

ಮಾವನನ್ನೂ ಮಾಲಕನ ಹೆಂಡತಿಯನ್ನೂ ಕಚೇರಿಗೆ ಕಳಿಸಲಾಯಿತು. ಆಳು ಮಗನು ಅಳಿಯನನ್ನು ಕರಕೊಂಡು ಮರಳಿ ತನ್ನೂರಿಗೆ ಹೋದನು.

ಕಲಿತ ಕಥೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡರೆ ಹೀಗೆ ಅಪವಾದ ಬರುತ್ತವೆ. ಅವು ಜನ್ಮಕ್ಕೇ ಮೂಲವಾಗುವವು. ಆದ್ದರಿಂದ ಬಂದಕಥೆ ಮಂದಿಗೆ ಹೇಳಬೇಕು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...