Home / ಕಥೆ / ಜನಪದ / ಮೂರು ಆಕಳ ಕರುಗಳು

ಮೂರು ಆಕಳ ಕರುಗಳು

ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು.

ಮಧ್ಯಾಹ್ನವಾಗಿದ್ದರೂ ಚಳಿ ಹಿಮ್ಮೆಟ್ಟಿದೆ. ಬಿಸಿಲು ಬೆಳದಿಂಗಳಾಗಿರುವಾಗ ಕಟ್ಟಿಹಾಕಿದ ಕರುಗಳನ್ನು ತುಸು ಅಡ್ಡಾಡಿ ಬರಲೆಂದು ಕುಣಿಕೆ ಉಚ್ಚಿ ಬಿಡುವುದುಂಟು. ಹಾಗೆ ಹೊರಬಿದ್ದ ಮೂರು ಆಕಳ ಕರುಗಳು ಅಗಸೆಯ ಬಳಿಯಲ್ಲಿ ಕೂಡಿದವು. ಒಂದು ಕರು ಒಕ್ಕಲಿಗರದು; ಇನ್ನೂಂದು ಉಪಾಧ್ಯರದು; ಮೂರನೇದು ಗೌಳಿಗರದು.

ಮೂರೂ ಕರುಗಳು ಜೊತೆಗೂಡಿ ಅಗಸೆಯಿಂದ ಹೊರಬಿದ್ದವು. ಮುಂದೆ ಬಚ್ಚಲ ಮೋರೆಯ ನೀರು ಹೊರಬಿದ್ದು, ಹುದಿಲುಂಟುಮಾಡಿತ್ತು. ದಾರಿಹಿಡಿದು ಸಾಗುವವರು ಅದನ್ನು ದಾಟಬೇಕಾಗುತ್ತಿತ್ತು. ಎಲ್ಲಿಂದ ಹೇಗೆ ದಾಟಬೇಕು ಎಂದು ಯೋಚಿಸದೆ ಒಕ್ಕಲಿಗರ ಕರು ಬಾಲವನ್ನು ಎತ್ತರಿಸಿ ಟಣ್ಣನೆ ಜಿಗಿದು ಆಚೆಯ ಬದಿಯಲ್ಲಿ ನಿಂತಿತು. ಅದರಂತೆ ಜಿಗಿದು ಹೋಗುವ ಪ್ರಯತ್ನ ಮಾಡಿದರೂ ಉಪಾಧ್ಯರ ಕರುವಿನ ಹಿಂಗಾಲು ಕೆಸರು ತುಳಿದವು. ಇನ್ನುಳಿದದ್ದು ಗೌಳಿಗರ ಕರು. ಅದು ಜಿಗಿದು ಹೋಗುವ ವಿಚಾರವನ್ನೇ ಮಾಡಲಿಲ್ಲ. ಪಚಲ್ ಕಚಲ್ ಎಂದು ಹುದಿಲು ತುಳಿಯುತ್ತ ಅದನ್ನು ದಾಟಿಹೋಗಿ ಮುಂದಿನ ಕರುಗಳನ್ನು ಕೂಡಿಕೊಳ್ಳಲು ಧಾವಿಸಿತು.

ಅಷ್ಟರಲ್ಲಿ ಉಪಾಧ್ಯರ ಕರು ಕೇಳಿತು ಒಕ್ಕಲಿಗರ ಕರುವಿಗೆ – “ಏನೋ- ನೀನು ಕಾಲಿಗೆ ಕೆಸರು ಸೋಂಕದಂತೆ ಆ ಹುದಿಲು ಹರಿಯನ್ನು ಟಣ್ಣನೆ ಜಿಗಿದು ಬಂದೆಯಲ್ಲ ! ಅಷ್ಟೊಂದು ಚಪಲತೆ ನಿನಗೆಲ್ಲಿಂದ ಬಂತು” ಎಂದು ಕೇಳಿತು.

ಒಕ್ಕಲಿಗರ ಕರು ಅಭಿಮಾನದಿಂದ ಹೇಳಿತು – “ನಮ್ಮವ್ವನಿಗಿರುವ ನಾಲ್ಕು ಮೊಲೆಗಳ ಹಾಲನ್ನೆಲ್ಲ ದಿನಾಲು ಎರಡೂ ಹೊತ್ತು ಕುಡಿಯುತ್ತೇನೆ. ಅದರಿಂದ ನನಗೆ ಅಷ್ಟೊಂದು ಕಸುವು ಬಂದಿದೆ.”

“ಏನಂದೀ ? ಅವ್ವನ ಮೊಲೆಯಲ್ಲಿ ಹಾಲಿರುತ್ತವೆಯೇ?” ಎಂದು ಉಪಾಧ್ಯರ ಕರು ಬೆಕ್ಕಸಬಟ್ಟು ಕೇಳಿತು.

ಅವೆರಡೂ ಕರುಗಳು ಮಾತಾಡುವುದನ್ನು ಕೇಳಿ ಇದಾವ ಹೊಸವಿಷಯ ಎಂದು ಕುತುಹಲದಿಂದ ಗೌಳಿಗರ ಕರು ಅವಸರದ ಹೆಜ್ಜೆ ಹಾಕಿ ಕೇಳಿತು – “ಅವ್ವನಿಗೆ ಮೊಲೆ ಇರುವವೇ?”

ತಮ್ಮ ಎಳೆಕರು ಬೆಲೆಯುಳ್ಳ ಬದುಕಾಗಲೆಂದು ಆಕಳನ್ನು ಹಿಂಡಿಕೊಳ್ಳದೆ ಇದ್ದಷ್ಟು ಹಾಲನ್ನು ಒಕ್ಕಲಿಗರು ಹೋರಿಗರುವಿಗೆ ಬಿಟ್ಟುಕೊಡುತ್ತಾರೆ, ಉಪಾಧ್ಯರು ಹಾಲಿನ ಸಲುವಾಗಿ ಅವುಗಳನ್ನು ಕಟ್ಟಿರುವುದರಿಂದ ಅವರು, ಕೆಚ್ಚಲೊಳಗಿನ ಹಾಲನ್ನೆಲ್ಲ ಹಿಂಡಿಕೊಂಡು ಆಮೇಲೆ ಕರುವಿಗೆ ಬಿಡುವರು. ಅದು ಒಣ ಮೊಲೆಗಳನ್ನು ಚೀಪುವದು. ಅಂತೆಯೇ ಅದು ಕೇಳಿತು – “ಅವ್ವನ ಮೊಲೆಯಲ್ಲಿ ಹಾಲಿರುವವೇ” ಎಂದು.

ಇನ್ನು ಗೌಳಿಗರಂತೂ ಹಾಲು ಮಾರುವವರು. ಆಕಳ ದೊಲೆಗಳನ್ನು ಜಗ್ಗಿ ಹಿಂಡಿಕೊಳ್ಳವರಲ್ಲದೆ, ಹಿಂದುಗಡೆ ಸಹ ಕರುವನ್ನು ಬಿಡುವದಿಲ್ಲ. ಅಂತೆಯೇ ಗೌಳಿಗರ ಕರು ಕೇಳುತ್ತದೆ – “ಅವ್ವನಿಗೆ ಮೊಲೆ ಇರುವವೇ” ಎಂದು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...