Home / ಕಥೆ / ಜನಪದ / ಸತ್ತೇನು ಗುಬ್ದಿ ?

ಸತ್ತೇನು ಗುಬ್ದಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಬೆಳೆಗಾಲ. ಹೊಲದಲ್ಲಿ ಜೋಳದ ನಿಲುವು, ಮಗಿಯಷ್ಟು ಗಡುತರವಾದ ತೆನೆ ಹೊತ್ತು ತೂಗಲಾಡುತ್ತಿದೆ.

ಹೊಲದವನು ನಡುಹೊಲದಲ್ಲಿ ಕಟ್ಟಿದ ಮಂಚಿಕೆಯನ್ನೇರಿ ನಿಂತು, ಕವಣೆಯಲ್ಲಿ ಕಲ್ಲು ಬೀಸಾಡಿ ಹಕ್ಕಿಗಳನ್ನು ಓಡಿಸುತ್ತಿದ್ದನು. ಬೀಸಾಗಿ ಬಂದ ಕವಣೆಗಲ್ಲಿನ ರಭಸಕ್ಕಂಜಿಯೇ ಹಕ್ಕಿಗಳೆಲ್ಲ ಹಾರಿಹೋದವು, ಆದರೆ ಒಂದು ಗುಬ್ದಿ ಮಾತ್ರ ಹಾರಿ ಹೋಗದೆ, ಒಂದು ತೆನೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಕುಳಿತಿತು. ಹೊಲದವನ ಬಾಯ ಬೆದರಿಕೆಗಾಗಲಿ, ಬಾರಕೋಲಿನ ಸಪ್ಪಳಕ್ಕಾಗಲಿ ಅದು ಮಿಸುಕಲಿಲ್ಲ; ಕವಣೆಗಲ್ಲಿಗೂ ಹಣಿಯಲಿಲ್ಲ. ಅಟ್ಟದಿಂದಿಳಿದು ಕಾವಲಿಗನು ಆ ಗುಬ್ದಿ ಕುಳಿತಲ್ಲಿಗೆ ಮೆಲ್ಲನೆ ಹೋಗಿ ಅದನ್ನು ಗಪ್ಪನೆ ಹಿಡಿದು ತಂದು, ಅದರ ಕಾಲಿಗೆ ದಾರಕಟ್ಟಿ ಅಟ್ಟದ ಕಾಲಿಗೆ
ಬಿಗಿದನು. ಆದರೂ ಅದು ಪಕ್ಕ ಬಿಚ್ಚಿ ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು ಕಾವಲಿಗನು ಕೇಳಿದನು – “ಸತ್ತೇಯೇನು ಗುಬ್ಬಿ?”
ಆ ಗುಬ್ದಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚಗೀ ಕಾಲಿನಲ್ಲಿ
ಜೋಕಾಲಿ ಆಡಹತ್ತಿದ್ದೇನೆ.
ನಾನೇಕೆ ಸಾಯುವೆನು ?”

ಹೊಲದವನು ಅದನ್ನು ಬಿಚ್ಚಿ ಕೊಂಡೊಯ್ದು ಹರಿಯುವ ಹಳ್ಳದಲ್ಲಿ ಒಗೆದನು, ಆಗಲೂ ಅದು ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು – “ಸತ್ತೆಯಾ ಗುಬ್ಬಿ” ಎಂದು ಕೇಳಿದನು. ಗುಬ್ಬಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳಕ್ಕೆ ಬಂದು ಈಸಾಡುತ್ತಿದ್ದೇನೆ.
ನಾನೇಕೆ ಸಾಯುವೆನು ?”

ಒಕ್ಕಲಿಗನು ಆ ಗುಬ್ಬಿಯನ್ನು ಊರಲ್ಲಿ ತೆಗೆದುಕೊಂಡು ಹೋಗಿ, ಗಾಣಿಗನ ಗಾಣದ ಗಾಲಿಯಲ್ಲಿ ಹಾಕಿದನು. ಮತ್ತೆಯೂ ಅದು ಫಡಫಡಿಸಿತು. ಕೇಳಿದನು-
“ಸತ್ತೆಯೇನು ಗುಬ್ಬಿ ?”
ತನ್ನ ದಾಟಿಯಲ್ಲಿಯೇ ಗುಬ್ಬಿ ಮರುನುಡಿಯಿತು.
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಿನಲ್ಲಿ ಈಸಾಡಿ
ಈಗ ಎಣ್ಣೆ ಹೂಸಿಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಹೊಲದವನು ಗುಬ್ದಿಯನ್ನು ಮನೆಗೊಯ್ದು ಒಲೆಯಮೇಲಿನ ಸಳಮಳಿಸುವ ನೀರಿನ ಭಾಂಡೆಯಲ್ಲಿ ಚೆಲ್ಲಿದನು. ಅಲ್ಲಿಯೂ ಗುಬ್ಬಿಯ ಫಡಫಡಾಟ ನಡೆದೇ ಇತ್ತು. “ಸತ್ತೆಯಾ ಗುಬ್ದಿ” ಎಂದು ಕೇಳಿದನು. ಗುಬ್ದಿ ಹೇಳಿತು –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಇಲ್ಲಿ ಬಿಸಿಬಿಸಿ ನೀರಿನಿಂದ
ಎರಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಗುಬ್ಬಿಯನ್ನು ಹೆಂಡತಿಯ ಕೈಗಿತ್ತು, ಇದನ್ನು ಕೊಯ್ದು ಅಡಿಗೆ ಮಾಡಲು ಹೊಲದವನು ತಿಳಿಸಿದನು. ಹೆಂಡತಿಯು ಮರುಕ್ಷಣದಲ್ಲಿ ಅಡಿಗೆಮಾಡಿ ಗಂಡನಿಗೆ ಉಣಬಡಿಸಿದಳು. ಉಂಡ ಬಳಿಕ ಹೊಟ್ಟೆಯಲ್ಲಿ ಫಡಫಡಿಸುತ್ತಿರುವ ಗುಬ್ಬಿಯನ್ನು ಕುರಿತು ಗಂಡನು ಕೇಳಿದನು –
“ಸತ್ತೆಯಾ ಗುಬ್ಬಿ ?”

ಮರುಕ್ಷಣದಲ್ಲಿಯೇ ಒಕ್ಕಲಿಗನು ಕಾರಿಕೊಂಡನು. ಅದರಲ್ಲಿ ಗುಬ್ಬಿ ಕಾಣಿಸಿ ಕೊಂಡಿತು. ಮತ್ತೆ ಫಡಫಡಿಸುತ್ತ –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದ ಕಾಲಿಗೆ ಜೋಕಾಲಿ ಆಡಿ
ಹಳ್ಳದ ತಿಳಿ ನೀರಿನಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಬಿಸಿಬಿಸಿ ನೀರಿನಿಂದ ಎರಕೊಂಡು
ಪಲ್ಲೆ ಮಾಡಿಸಿ ಉಂಡುಗಿಂಡು
ಹೊರಟಿದ್ದೇನೆ ನೋಡು.
ನಾನೇಕೆ ಸಾಯುವೆನು ?”

ಎನ್ನುತ್ತ ಬುರ್ರನೆ ಹಾರಿಹೋಯಿತು ಸಾವಿಲ್ಲದ ಗುಬ್ಬಿ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...