Home / ಲೇಖನ / ಇತರೆ / ಹುಟ್ಟು ಸಾವಿನ ಮಧ್ಯೆ

ಹುಟ್ಟು ಸಾವಿನ ಮಧ್ಯೆ

ಪ್ರಿಯ ಸಖಿ,
ಹುಟ್ಟು ನಮ್ಮ ಕೈಯಲಿಲ್ಲ. ಹಾಗೂ ಸಾವೂ ಕೂಡ. (ಆತ್ಮ ಹತ್ಯೆಗಳನ್ನು ಹೊರತುಪಡಿಸಿ) ಆದರೆ ಇವೆರಡರ ನಡುವಿನ ಬದುಕು ನಮ್ಮ ಕೈನಲ್ಲೇ ಇದೆ. ಇದನ್ನು ನಮಗೆ ಬೇಕೆಂದಂತೆ ರೂಪಿಸಿಕೊಳ್ಳುವ ಅವಕಾಶ ನಮಗಿದೆ. ಒಂದು ಮಗುವಿನ ಹುಟ್ಟಿನೊಂದಿಗೆ ಅನೇಕ ಆಸೆ, ಕನಸುಗಳೂ ಹುಟ್ಟಿಕೊಳ್ಳುತ್ತವೆ.

ಬದುಕಿನುದ್ದಕ್ಕೂ ಅವುಗಳನ್ನು ಪೂರೈಸಿಕೊಳ್ಳಲು ವ್ಯಕ್ತಿ ಹೆಣಗುತ್ತಾನೆ. ಸಫಲವಾಗುವುದು ಕೆಲವೇ ಕೆಲವು. ಇನ್ನುಳಿದವು ವ್ಯಕ್ತಿಯ ಸಾವಿನೊಂದಿಗೇ ಸಾಯುತ್ತವೆ. ಅಥವಾ ಆದು ಬೇರಾರದೋ ಆಸೆ ಕನಸು ಮುಂದುವರೆಯುತ್ತವೆ. ವ್ಯಕ್ತಿ ಸಫಲಗೊಳಿಸಿಕೊಂಡ ಆಸೆ, ಕನಸುಗಳಿಂದಲೇ ನಾವು ಅವನನ್ನು ಅಳೆಯುತ್ತೇವೆ. ಅವನು ಆಗದೇ ಉಳಿದ ವ್ಯಕ್ತಿತ್ವದಿಂದ ಅವನನ್ನು ನಾವು ಅಳೆಯುವುದಿಲ್ಲ.

ಈ ವ್ಯಕ್ತಿತ್ವವನ್ನು ಅಳೆಯುವ ಕೆಲಸವೂ ಆಗುವುದು ವ್ಯಕ್ತಿಯ ಸಾವಿನಲ್ಲಿ.  ಅವನ ಗುಣ, ಸ್ವಭಾವ, ಆಸ್ತಿ, ಅಂತಸ್ತು, ಸಾಧಿಸಿದ ಕೆಲಸ, ಸಮಾಜದ ಸೇವೆ, ಬುದ್ಧಿವಂತಿಕೆ, ಒಳ್ಳೆಯತನ ಇತ್ಯಾದಿಗಳಂದ ವ್ಯಕ್ತಿಯನ್ನು ತೂಗುತ್ತೇವೆ. ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬ ಮಾತೊಂದಿದೆ.

ಸತ್ತ ವ್ಯಕ್ತಿ ಸಮಾಜಕ್ಕೆ ಉಪಯೋಗಿಯಾಗಿದ್ದರೆ ಜನ ಅವನು ಪರಿಪೂರ್ಣ ಬದುಕನ್ನು ಬಾಳಿ ಸತ್ತರೂ ಇವನು ಇಷ್ಟು ಬೇಗ ಸಾಯಬಾರದಿತ್ತು. ಇಂತಹಾ ಸಹೃದಯ ಅಪರೂಪ. ಇವನಂತವನಿಂದ ಸಮಾಜಕ್ಕೆ ಇನ್ನೂ ಬಹಳಷ್ಟು ಆಗಬೇಕಾದುದಿತ್ತು. ಇವನ ಸಾವಿನಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಒಳ್ಳೆಯವರನ್ನು ಸಾವೂ ಬೇಗ ಕೊಂಡೊಯ್ಯುತ್ತದೆ…. ಎಂದೆಲ್ಲಾ ವಿಷಾದಿಸುತ್ತಾರೆ.

ಅದೇ ಸಮಾಜಕ್ಕೆ ಉಪಯೋಗವಿಲ್ಲದ, ಸಮಾಜ ಕಂಟಕ ಸತ್ತಾಗ ಜನ ಸಧ್ಯ ಸತ್ತನಲ್ಲಾ, ಎಂದು ಹೇಳಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಸಖಿ, ಸಾವನ್ನು ಕುರಿತ ಕಥೆಯೊಂದು ನೆನಪಾಗುತ್ತದೆ. ವ್ಯಕ್ತಿಯೊಬ್ಬ ದೇವರಲ್ಲಿ ಹೀಗೆ ಬೇಡಿಕೊಂಡನಂತೆ. ದೇವ ನಾನು ಸತ್ತಾಗ ನನ್ನ ಸಾವಿಗೆ ದುಃಖಿಸಿ ಅಳುವ ಕೆಲವರಾದರೂ ಜನರಿರುವಂತೆ ಕರುಣಿಸು, ಎಂದು. ಅದಕ್ಕೆ ದೇವರು ಇದು ನನ್ನಿಂದ ಆಗದ ಕೆಲಸ. ಇದು ನಿನ್ನಿಂದಲೇ ಸಾಧ್ಯ. ನಿನ್ನ ಸಾವಿಗೆ ಜನ ದುಃಖಿಸುವಂತಾಗಲು, ಜನರು ಮೆಚ್ಚುವಂತೆ ನೀನು ಬದುಕಬೇಕು ಎಂದನಂತೆ.

ಸಖಿ, ಈ ಕಥೆಯೊಳಗೆ ಬದುಕಿನ ಗೂಡಾರ್ಥವೇ ಆಡಗಿದೆಯಲ್ಲವೇ?  ಹುಟ್ಟು, ಸಾವು ಯಾವುದೋ ಶಕ್ತಿಯ ಕೈಯಲ್ಲಿದ್ದರೂ ಮಧ್ಯದ ಈ ಬದುಕಿನಲ್ಲಿ ಗುಣವಂತನಾಗುವುದು, ಕೆಡಕನಾಗುವುದು ವ್ಯಕ್ತಿಯ ಕೈಯಲ್ಲೇ ಇದೆಯಲ್ಲವೇ? ಸಾವಿನಾಚೆಗೆ ಏನಿದೆಯೋ ಯಾರಿಗೂ ತಿಳಿದಿಲ್ಲ. ನಾವಿಲ್ಲಿ ಒಳ್ಳೆಯವರಾಗಿ, ಸಮಾಜಕ್ಕೆ ಬೇಕಾದವರಾಗಿ ಬದುಕಿದರೆ ಮುಂದೆ ಸ್ವರ್ಗ, ಮೋಕ್ಷ ಸಿಗುತ್ತದೆ ಎಂಬ ಮಾತಿಗೂ ಯಾವುದೇ ಆಧಾರವಿಲ್ಲ. ಆದರೆ ಒಬ್ಬ ಒಳ್ಳೆಯ ವ್ಯಕ್ತಿಯ ಸಾವಿಗೆ ಹಲವಾರು ಜನರು ಕಣ್ಣೀರು ಹರಿಸುತ್ತಾರೆಂಬುದು ನಿಜ. ಬಹುಶಃ ವ್ಯಕ್ತಿ ಸಾರ್ಥಕ ಬದುಕಿಗೆ ಇದೇ ದೊಡ್ಡ ಕೊಡುಗೆ ಹಾಗೇ ಜನರ ಕಣ್ಣೀರನ್ನು ಸಂಪಾದಿಸುವುದೇ ನಿಜವಾದ ಧನ್ಯತೆ. ಆಲ್ಲವೇ ?
*****

Tagged:

Leave a Reply

Your email address will not be published. Required fields are marked *

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...