Home / ಲೇಖನ / ಇತರೆ / ಹಸಿವು

ಹಸಿವು

face-867521__180ಪ್ರಿಯ ಸಖಿ,

ಅವನು ಸತ್ತು ಮಲಗಿ ಗಂಟೆಗಳೇ ಕಳೆದಿವೆ. ನಿಧಾನಕ್ಕೆ ಬರುವವರೆಲ್ಲಾ ಬಂದ ನಂತರ ಶವಸಂಸ್ಕಾರವೂ ನಡೆದಿದೆ. ಇಷ್ಟರವರೆಗೆ ನೋವಿನ ಹಿನ್ನೆಲೆಯಲ್ಲಿ ಮರೆಯಾಗಿದ್ದ ಹಸಿವು ಈಗ ಅವನ ಸಂಬಂಧಿಕರ ದೇಹದಲ್ಲಿ ಬೆಂಕಿಯಂತೆ ಸುಡುತ್ತಿರುವುದು ಗೋಚರಿಸುತ್ತದೆ. ಹೌದು ಅವರು ಏನನ್ನೂ ಸೇವಿಸದೇ ಹನ್ನೆರಡು ಗಂಟೆಗಳೇ ಕಳೆದಿವೆ. ಆದರೆ ಹಸಿವು ಎಂದು ಬಾಯಿಬಿಟ್ಟು ಹೇಳುವುದಾದರೂ ಹೇಗೆ? ಸತ್ತವನು ಎಲ್ಲರಿಗೂ ಒಂದಿಲ್ಲೊಂದು ರೀತಿಯಲ್ಲಿ ಹತ್ತಿರದ ಸಂಬಂಧಿ.

ಆ ಸಮಯದಲ್ಲಿ ಕಿಚ್ಚಿನಂತೆ ಸುಡುತ್ತಿರುವ ಹಸಿವನ್ನು ಬೈಯ್ದುಕೊಳ್ಳುವವರೇ ಹೆಚ್ಚು. ಇಷ್ಟೆಯೇ ಸಂಬಂಧಗಳನ್ನು ಕಳೆದುಕೊಂಡಾಗಿನ ನೋವಿನ ತೀವ್ರತೆ ಅವನನ್ನು ಮಣ್ಣು ಮಾಡಿ ಬಂದೊಡನೆ ಹಸಿವು ಕಾಡಲು ಪ್ರಾರಂಭಿಸಿಬಿಡಬೇಕೆ? ಹಸಿವಿನ ಮುಂದೆ ನೋವು ಎರಡನೇ ಸ್ಥಾನಕ್ಕೆ ಹೋಯಿತೇ? ಹಾಗಿದ್ದರೆ ಇಲ್ಲಿ ಎಲ್ಲಕ್ಕಿಂತಾ ಮುಖ್ಯವಾದದ್ದು ಹಸಿವು ಮಾತ್ರವೇ? ಬೇರೆಲ್ಲದ್ದಕ್ಕೂ ಇಲ್ಲಿ ಅರ್ಥವೇ ಇಲ್ಲವೇ? ಬದುಕಲು ತಿನ್ನುವುದು, ತಿನ್ನಲು ಬದುಕುವುದು, ಇವೆರಡರ ನಡುವಿನ ವ್ಯತ್ಯಾಸದ ಗೆರೆ ಪ್ರಾರಂಭವಾಗುವುದು ಎಲ್ಲಿಂದ? ಎಂಬುದು ಮನದ ಪ್ರಶ್ನೆಗಳು. ನೋವಿದೆಯೆಂದು ಎಷ್ಟು ದಿನ ಉಪವಾಸವಿರಲು ಸಾಧ್ಯ? ನೋವಿನ ತೀವ್ರತೆ ಹಸಿವಿನ ತೀವ್ರತೆಯನ್ನು ಭಂಗಿಸಲು ಸಾಧ್ಯವೇ? ಎಂಬುದು ಬುದ್ಧಿಯ ತರ್ಕ.

ಸಖಿ, ನಾವು ಮರೆತಿದ್ದೇವೆ. ಹಸಿವು ದೇಹಕ್ಕೆ ಸಂಬಂಧಿಸಿದ್ದು, ನೋವಿದೆಯೆಂದು ಏನೂ ತಿನ್ನದಿರಲಾಗುವುದಿಲ್ಲ ಎಂಬ ವಿವೇಚನೆ ಬುದ್ಧಿಗೆ ಸಂಬಂಧಿಸಿದ್ದು. ದೇಹ, ಬುದ್ಧಿ, ಮನಸ್ಸು, ಮೂರೂ ಬೇರೆ ಬೇರೆಯಾದದ್ದೆಂದು ಈ ಸಂದರ್ಭದಲ್ಲಿ ಸ್ಪಷ್ಟವಾಗಿ ಗುರುತಿಸಬಹುದು. ಹಾಗೇ ದೇಹದ ಹಸಿವಿಗೂ ಬುದ್ಧಿ, ಮನಸ್ಸುಗಳಿಗೂ ನೇರ ಸಂಬಂಧವಿಲ್ಲದಿದ್ದರೂ ನಾವು ಮೂರನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೂಗುತ್ತೇವೆ! ಬುದ್ಧಿಯ ಹಸಿವು, ಮನಸ್ಸಿನ ಹಸಿವುಗಳು ಇದ್ದರೂ  ಅದಕ್ಕೆ ದೇಹದ ಹಸಿವಿಗೆ ನೀಡುವಷ್ಟು ಪ್ರಾಮುಖ್ಯತೆಯನ್ನು ನಾವು ಕೊಡುವುದಿಲ್ಲ. ಏಕೆಂದರೆ ದೇಹದ ಹಸಿವು ಜೀವಕ್ಕೆ ಮೂಲವಾದುದು ಅದನ್ನು ಹಿಂಗಿಸಲೇಬೇಕು. ಅದು ಅನಿವಾರ್ಯ. ಆದರೆ ಬುದ್ಧಿಯ ಹಸಿವು; ಮನಸ್ಸಿನ ಹಸಿವುಗಳನ್ನು ಹಿಂಗಿಸಲೇಬೇಕಾದ ಅನಿವಾರ್ಯತೆ ಇಲ್ಲವೆಂದೇ ಅದು ಹಿಂದಕ್ಕೆ ತಳ್ಳಲ್ಪಟ್ಟಿದೆ.

ಬುದ್ಧಿಯ ಹಸಿವು ಇಂಗಿಸಲು ವಿಚಾರಗಳ, ಚಿಂತನಗಳ ಅವಶ್ಯಕತೆ ಇರುವಂತೆ ಮನಸ್ಸಿನ ಹಸಿವು ಇಂಗಿಸಲು ಪ್ರೀತಿ, ಅಕ್ಕರೆ, ಅಭಿಮಾನ, ಸ್ನೇಹ ಮುಂತಾದ ಭಾವನೆಗಳ ಅವಶ್ಯಕತೆ ಇದೆ. ಆದರೆ ದೇಹದ ಹಸಿವನ್ನು ಪೂರೈಸುವುದೇ ಮುಖ್ಯವಾಗಿ ಮಿಕ್ಕ ಹಸಿವು ಗೌಣವಾಗುತ್ತದೆ.

ಆದರೆ ಬರಿಯ ದೇಹದ ಹಸಿವನ್ನಷ್ಟೇ ಹಿಂಗಿಸಿ ಇದೇ ಬದುಕೆಂದುಕೊಂಡು ಆಯುಷ್ಯವನ್ನು ಕಳೆದರೆ ನಮಗೂ ಪ್ರಾಣಿಗಳಿಗೂ ವ್ಯತ್ಯಾಸವೇನಿದೆ? ಬುದ್ಧಿಯ ಹಸಿವೂ
ಮನಸ್ಸಿನ ಹಸಿವೂ ನಮ್ಮನ್ನು ಸುಡಬೇಕು. ಅದನ್ನು ಹಿಂಗಿಸಿಕೊಳ್ಳಲು ನಾವೂ ಪ್ರಯತ್ನಿಸಬೇಕು. ಆಗ ಬದುಕು ಸಾರ್ಥಕ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...