Home / ಕಥೆ / ಜನಪದ / ಒಬ್ಬರಿಗಿಂತ ಒಬ್ಬರು ಮಿಗಿಲು

ಒಬ್ಬರಿಗಿಂತ ಒಬ್ಬರು ಮಿಗಿಲು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ ಹಾಯ್ದು ಹೋಗುವ ಒಬ್ಬ ಹುಡುಗನು ಆತನನ್ನು ನೋಡುತ್ತ ಕೆಲಹೊತ್ತು ನಿಂತುಕೊಂಡನು. ಶ್ರೀಮಂತನ ದೃಷ್ಟಿಯು ಆ ಹುಡುಗನತ್ತ ಹರಿಯಿತು. ಹುಡುಗ ನಗುತ್ತ ನಿಂತಿದ್ದಾನೆ ! ಅದನ್ನು ಕಂಡು ಶ್ರೀಮಂತನಿಗೆನಿಸಿತು – ತನ್ನ ಮನೆಯನ್ನೂ ತನ್ನ ವೈಭವವನ್ನೂ ನೋಡಿ ಆನಂದದಿಂದ ನಗುತ್ತಿದ್ದಾನೆ. ಈ ಹುಡುಗ. ಈತನಿಗೆ ಏನಾದರೂ ತಿನ್ನಲು ಮಿಠಾಯಿಕೊಡಿಸೋಣವೆಂದು ಯೋಚಿಸಿ, ಆ ಹುಡುಗನನ್ನು ಮಾತಾಡಿಸಿದನು-

“ಏನೋ, ತಮ್ಮಾ ಏಕೆ ನಗುತ್ತಿರುವಿ ?”

ಅನುಮಾನಿಸುತ್ತಲೇ ಆ ಹುಡುಗನು ಮರುನುಡಿದನು – “ಅಕಸ್ಮಾತ್ ನೀವು ಸತ್ತರೆ ನಿಮ್ಮ ಹೆಣವನ್ನು ಈಚೆಗೆ ಹೇಗೆ ತರುವುದು – ಎಂದು ಯೋಚಿಸಿ ನಕ್ಕೆನು.”

ಹುಡುಗನು ಅಧಿಕಪ್ರಸಂಗಿಯೆನ್ನುವುದು ಸ್ಪಷ್ಟವಾಯಿತು. ಅವನ ಮನೆಯೊಳಗಿನ ಹಿರಿಯರನ್ನು ಕರೆಯಿಸಿ ಈತನು ವಿವೇಕಿಯಾಗುವಂತೆ ತಿದ್ದಲು ಸೂಚಿಸಬೇಕೆಂದು ಶ್ರೀಮಂತನು ಬಗೆದನು.

“ಏ ಹುಡುಗಾ, ನಿಮ್ಮ ಮನೆಯಲ್ಲಿ ಯಾರಾರು ಇರುವಿರಿ ?”

“ನನ್ನ ಅಣ್ಣ ಹಾಗೂ ತಂದೆ ಇದ್ದಾರೆ” ಹುಡುಗನ ಹೇಳಿಕೆ.

“ಒಳ್ಳೇದು ಇಲ್ಲಿ ಕುಳಿತುಕೋ” ಎಂದು ಆ ಹುಡುಗನನ್ನು ಕುಳ್ಳರಿಸಿಕೊಂಡು ಒಬ್ಬ ಆಳುಮಗನನ್ನು ಕರೆದು ಆ ಹುಡುಗನ ಅಣ್ಣನನ್ನು ಕರೆತರಲು ಹೇಳಿದನು.

ಹುಡುಗನ ಅಣ್ಣ ಬರಲು, ಶ್ರೀಮಂತನು ಅವನ ಅಧಿಕಪ್ರಸಂಗವನ್ನು ತಿಳಿಸಿದನು. ಆ ಮಾತು ಕೇಳಿ ಅಣ್ಣನಿಗೆ ತಮ್ಮನ ಮೇಲೆ ಸಿಟ್ಟು ಬಂತು. ಜಂಕಿಸಿ
ನುಡಿದನು – “ಧನಿಯರು ಸತ್ತರೆ ಆ ಹೆಣವನ್ನು ಹೊರತರುವ ವಿಚಾರ ನಿನಗೇಕೆ ಬೇಕಾಗಿತ್ತು ? ಹೆಣವನ್ನು ಕಡೆಕಡೆದು ತಂದಾರು ಹೊರಗೆ. ಅದರ
ಉಸಾಬರಿ ಏತಕ್ಕೆ ಮಾಡುವಿ ?”

ಆ ಮಾತು ಕೇಳಿ ಶ್ರೀಮಂತನಿಗೆ ಅನಿಸಿತು – ಈತನು ತಮ್ಮನಿಗಿಂತ ಮಿಗಿಲಾದ ಅಧಿಕಪ್ರಸಂಗಿ – “ತಮ್ಮಾ, ನೀನೂ ಒಂದಿಷ್ಟು ಕುಳಿತುಕೋ” ಎಂದು
ನುಡಿದು, “ಇವರಿಬ್ಬರನ್ನು ಬಿಡಬೇಡ” ಎಂದು ಆಳುಮಗನಿಗೆ ಸೂಚಿಸಿದನು. ಬೇರೊಬ್ಬ ಆಳನ್ನು ಕರೆದು – “ಅವರ ತಂದೆಯನ್ನು ಮುಂದೆ ಹಾಕಿಕೊಂಡು ಬಾ. ಅವನಾದರೂ ಈ ಅವಿವೇಕಿಗಳನ್ನು ತಿದ್ದಲಿ” ಎಂದು ಹೇಳಿದನು.

ಮರುಕ್ಷಣದಲ್ಲಿಯೇ ಅವರ ತಂದೆ ಬರಲು, ಶ್ರೀಮಂತನು ಅವನನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡು, ಅವನ ಮಕ್ಕಳಿಬ್ಬರೊಡನೆ ನಡೆದ ಸಂಗತಿಯನ್ನು ಕ್ರಮವಾಗಿ ವಿವರಿಸಿದನು. ತಂದೆಗೂ ಎಲ್ಲಿಲ್ಲದ ಸಿಟ್ಟುಬಂತು, ಅವರ ವರ್ತನೆ ಕೇಳಿ. ಶ್ರೀಮಂತನ ಎದುರಿನಲ್ಲಿಯೇ ಮಕ್ಕಳಿಗೆ ಛೀ ಎನ್ನಲು ತೊಡಗಿದನು – “ಕತ್ತೆ ಆಗಿರುವಿರಿ ತಿಳಿಯುವದಿಲ್ಲವೇ ನಿಮಗೆ ? ಧನಿಯರು ಸತ್ತರೆ ಹೆಣವನ್ನು ಹೇಗೆ ಹೊರತರುವುದೆಂಬ ವಿಚಾರ ನಿಮಗೇಕೆ ಬೇಕಿತ್ತು ? ಹೆಣವನ್ನು ಕಡೆ ಕಡೆದು ಹೊರತರುವ ಯುಕ್ತಿ ಹೇಳಿಕೊಡುವದಕ್ಕೆ ನೀನಾವ ಪಂಡಿತನು ? ಮನೆಯಲ್ಲಿಯೇ ಶವಕ್ಕೆ ಬೆಂಕಿ ಹಚ್ಚಲೊಲ್ಲರೇಕೆ, ನಿಮಗೇಕೆ ಆ ಉಸಾಬರಿ ?”

ತಂದೆಯೂ ಅದೇ ವರ್ಗಕ್ಕೆ ಸೇರಿದ ಪ್ರಾಣಿಯೆಂದು ಬಗೆದು, ಅವರೆಲ್ಲರಿಗೂ ಹೋಗಿಬನ್ನಿರೆಂದು ಶ್ರೀಮಂತನು ಕೈಮುಗಿದು ಕಳಿಸಿದನು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...