Home / ಕಥೆ / ಜನಪದ / ಒಬ್ಬರಿಗಿಂತ ಒಬ್ಬರು ಮಿಗಿಲು

ಒಬ್ಬರಿಗಿಂತ ಒಬ್ಬರು ಮಿಗಿಲು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ ಹಾಯ್ದು ಹೋಗುವ ಒಬ್ಬ ಹುಡುಗನು ಆತನನ್ನು ನೋಡುತ್ತ ಕೆಲಹೊತ್ತು ನಿಂತುಕೊಂಡನು. ಶ್ರೀಮಂತನ ದೃಷ್ಟಿಯು ಆ ಹುಡುಗನತ್ತ ಹರಿಯಿತು. ಹುಡುಗ ನಗುತ್ತ ನಿಂತಿದ್ದಾನೆ ! ಅದನ್ನು ಕಂಡು ಶ್ರೀಮಂತನಿಗೆನಿಸಿತು – ತನ್ನ ಮನೆಯನ್ನೂ ತನ್ನ ವೈಭವವನ್ನೂ ನೋಡಿ ಆನಂದದಿಂದ ನಗುತ್ತಿದ್ದಾನೆ. ಈ ಹುಡುಗ. ಈತನಿಗೆ ಏನಾದರೂ ತಿನ್ನಲು ಮಿಠಾಯಿಕೊಡಿಸೋಣವೆಂದು ಯೋಚಿಸಿ, ಆ ಹುಡುಗನನ್ನು ಮಾತಾಡಿಸಿದನು-

“ಏನೋ, ತಮ್ಮಾ ಏಕೆ ನಗುತ್ತಿರುವಿ ?”

ಅನುಮಾನಿಸುತ್ತಲೇ ಆ ಹುಡುಗನು ಮರುನುಡಿದನು – “ಅಕಸ್ಮಾತ್ ನೀವು ಸತ್ತರೆ ನಿಮ್ಮ ಹೆಣವನ್ನು ಈಚೆಗೆ ಹೇಗೆ ತರುವುದು – ಎಂದು ಯೋಚಿಸಿ ನಕ್ಕೆನು.”

ಹುಡುಗನು ಅಧಿಕಪ್ರಸಂಗಿಯೆನ್ನುವುದು ಸ್ಪಷ್ಟವಾಯಿತು. ಅವನ ಮನೆಯೊಳಗಿನ ಹಿರಿಯರನ್ನು ಕರೆಯಿಸಿ ಈತನು ವಿವೇಕಿಯಾಗುವಂತೆ ತಿದ್ದಲು ಸೂಚಿಸಬೇಕೆಂದು ಶ್ರೀಮಂತನು ಬಗೆದನು.

“ಏ ಹುಡುಗಾ, ನಿಮ್ಮ ಮನೆಯಲ್ಲಿ ಯಾರಾರು ಇರುವಿರಿ ?”

“ನನ್ನ ಅಣ್ಣ ಹಾಗೂ ತಂದೆ ಇದ್ದಾರೆ” ಹುಡುಗನ ಹೇಳಿಕೆ.

“ಒಳ್ಳೇದು ಇಲ್ಲಿ ಕುಳಿತುಕೋ” ಎಂದು ಆ ಹುಡುಗನನ್ನು ಕುಳ್ಳರಿಸಿಕೊಂಡು ಒಬ್ಬ ಆಳುಮಗನನ್ನು ಕರೆದು ಆ ಹುಡುಗನ ಅಣ್ಣನನ್ನು ಕರೆತರಲು ಹೇಳಿದನು.

ಹುಡುಗನ ಅಣ್ಣ ಬರಲು, ಶ್ರೀಮಂತನು ಅವನ ಅಧಿಕಪ್ರಸಂಗವನ್ನು ತಿಳಿಸಿದನು. ಆ ಮಾತು ಕೇಳಿ ಅಣ್ಣನಿಗೆ ತಮ್ಮನ ಮೇಲೆ ಸಿಟ್ಟು ಬಂತು. ಜಂಕಿಸಿ
ನುಡಿದನು – “ಧನಿಯರು ಸತ್ತರೆ ಆ ಹೆಣವನ್ನು ಹೊರತರುವ ವಿಚಾರ ನಿನಗೇಕೆ ಬೇಕಾಗಿತ್ತು ? ಹೆಣವನ್ನು ಕಡೆಕಡೆದು ತಂದಾರು ಹೊರಗೆ. ಅದರ
ಉಸಾಬರಿ ಏತಕ್ಕೆ ಮಾಡುವಿ ?”

ಆ ಮಾತು ಕೇಳಿ ಶ್ರೀಮಂತನಿಗೆ ಅನಿಸಿತು – ಈತನು ತಮ್ಮನಿಗಿಂತ ಮಿಗಿಲಾದ ಅಧಿಕಪ್ರಸಂಗಿ – “ತಮ್ಮಾ, ನೀನೂ ಒಂದಿಷ್ಟು ಕುಳಿತುಕೋ” ಎಂದು
ನುಡಿದು, “ಇವರಿಬ್ಬರನ್ನು ಬಿಡಬೇಡ” ಎಂದು ಆಳುಮಗನಿಗೆ ಸೂಚಿಸಿದನು. ಬೇರೊಬ್ಬ ಆಳನ್ನು ಕರೆದು – “ಅವರ ತಂದೆಯನ್ನು ಮುಂದೆ ಹಾಕಿಕೊಂಡು ಬಾ. ಅವನಾದರೂ ಈ ಅವಿವೇಕಿಗಳನ್ನು ತಿದ್ದಲಿ” ಎಂದು ಹೇಳಿದನು.

ಮರುಕ್ಷಣದಲ್ಲಿಯೇ ಅವರ ತಂದೆ ಬರಲು, ಶ್ರೀಮಂತನು ಅವನನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡು, ಅವನ ಮಕ್ಕಳಿಬ್ಬರೊಡನೆ ನಡೆದ ಸಂಗತಿಯನ್ನು ಕ್ರಮವಾಗಿ ವಿವರಿಸಿದನು. ತಂದೆಗೂ ಎಲ್ಲಿಲ್ಲದ ಸಿಟ್ಟುಬಂತು, ಅವರ ವರ್ತನೆ ಕೇಳಿ. ಶ್ರೀಮಂತನ ಎದುರಿನಲ್ಲಿಯೇ ಮಕ್ಕಳಿಗೆ ಛೀ ಎನ್ನಲು ತೊಡಗಿದನು – “ಕತ್ತೆ ಆಗಿರುವಿರಿ ತಿಳಿಯುವದಿಲ್ಲವೇ ನಿಮಗೆ ? ಧನಿಯರು ಸತ್ತರೆ ಹೆಣವನ್ನು ಹೇಗೆ ಹೊರತರುವುದೆಂಬ ವಿಚಾರ ನಿಮಗೇಕೆ ಬೇಕಿತ್ತು ? ಹೆಣವನ್ನು ಕಡೆ ಕಡೆದು ಹೊರತರುವ ಯುಕ್ತಿ ಹೇಳಿಕೊಡುವದಕ್ಕೆ ನೀನಾವ ಪಂಡಿತನು ? ಮನೆಯಲ್ಲಿಯೇ ಶವಕ್ಕೆ ಬೆಂಕಿ ಹಚ್ಚಲೊಲ್ಲರೇಕೆ, ನಿಮಗೇಕೆ ಆ ಉಸಾಬರಿ ?”

ತಂದೆಯೂ ಅದೇ ವರ್ಗಕ್ಕೆ ಸೇರಿದ ಪ್ರಾಣಿಯೆಂದು ಬಗೆದು, ಅವರೆಲ್ಲರಿಗೂ ಹೋಗಿಬನ್ನಿರೆಂದು ಶ್ರೀಮಂತನು ಕೈಮುಗಿದು ಕಳಿಸಿದನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...