Home / ಕಥೆ / ಜನಪದ / ಹೂಂ ಅಂದರೆ ಒಂದೇ ಉಂಡಿ

ಹೂಂ ಅಂದರೆ ಒಂದೇ ಉಂಡಿ

ಚಿತ್ರ: ಸರಿನಾ
ಚಿತ್ರ: ಸರಿನಾ

ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ”
ಎಂದಳು ಹೆಂಡತಿ.

“ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎಂದು ಗಂಡನವಾದ.

ಒಂದು ತಾಸು ಜಗಳಾಡಿದರು. ಯಾರೂ ಉಣ್ಣಲಿಲ್ಲ. ಕಡೆಯಲ್ಲಿ ಒಂದು ನಿರ್ಧಾರಕ್ಕೆ ಬಂದರು – “ಯಾರು ಹೂಂ ಅಂತಾರೊ ಅವರು ಒಂದು
ತಿನ್ನಬೇಕು. ಸುಮ್ಮನೆ ಮನಗಿದವರಿಗೆ ಎರಡು.”

ನಾಯಿ ಬಂದು ಮಾಲಾದಿ ತಿನ್ನ ಹತ್ತಿತು. ನಾಯಿಯನ್ನು ಹೊಡೆಯುವರಾರು? ಹೊಡೆದರೆ ಹೂಂ ಅನ್ನಬೇಕಾಗುತ್ತದೆ. ಹೂಂ ಅಂದವರಿಗೆ ಒಂದಽ ಉಂಡಿ. ಅದಕ್ಕಾಗಿ ಅವನೂ ಹೂಂ ಅನಲಿಲ್ಲ. ಅವಳೂ ಹೂಂ ಅನಲಿಲ್ಲ. ಹಾಗೇ ಮಲಗಿದರು.

ಹೊತ್ತು ಹೊರಟಿತು. ಸೂರ್ಯನು ಮಾರು ಮೇಲೆ ಏರಿ ಬಂದನು. ಅವರ ಮುಚ್ಚಿದ ತಟ್ಟಿ ಮುಚ್ಚಿದ ಹಾಗೆಯೇ ಇತ್ತು. ನೆರೆಹೊರೆಯವರು ತಟ್ಟಿ
ಬಡಿದರು. ಹೂಂ ಅನಲಿಲ್ಲ; ಹಾಂ ಅನಲಿಲ್ಲ. ನಾಲ್ಕು ಮಂದಿ ನೆರೆದರು. ತಟ್ಟಿ ಮುರಿದರು. ಒಳಗೆ ಹೊಕ್ಕರು. ಇಬ್ಬರಿಗೂ ಮಾತಾಡಿಸಿ ನೋಡಿದರು. ಅಗಳಾಡಿಸಿ ನೋಡಿದರು. ಮಿಸುಕಲೇ ಇಲ್ಲ ಯಾರೂ.

ಇಬ್ಬರೂ ಸತ್ತಿದ್ದಾರೆಂದು ನಿರ್ಧರಿಸಿ ಕುಳ್ಳುಕಟ್ಟಿಗೆಗಳನ್ನು ಹೊತ್ತೊಯ್ದು ಸುಡುಗಾಡಿನಲ್ಲಿ ಒಗೆದು ಬಂದರು. ಇಬ್ಬರನ್ನೂ ನಾಲ್ಕು ನಾಲ್ಕು ಜನ ಹೊತ್ತರು.
ಇಬ್ಬರೊಳಗಾರೂ ಹೂಂ ಅನಲಿಲ್ಲ. ಹೂಂ ಅಂದರೆ ಒಂದೇ ಉಂಡಿ ಅಲ್ಲವೇ?

ಕುಳ್ಳು ಕಟ್ಟಿಗೆಯ ತಾಳಿಯ ಮೇಲೆ ಹೆಣ ಒಗೆದರು. ಉರಿ ಹಚ್ಚಿದರು. ಚೌಕೀದಾರನನ್ನು ಅಲ್ಲಿ ನಿಲ್ಲಿಸಿ ಮಂದಿಯೆಲ್ಲ ತಂತಮ್ಮ ಮನೆಗೆ ಹೋದರು.
ಬೆಂಕಿ ಹೊತ್ತಿದಂತೆ ಮೈಯೆಲ್ಲ ಸುಡುತ್ತ ಬಂತು. ಇಬ್ಬರಲ್ಲಿ ಒಬ್ಬರೂ ಸೋಲಲಿಲ್ಲ. ಕಿರಿ ಬೆರಳೊಂದು ಛಟ್ ಎಂದು ಸಿಡಿದು ಬಂದು ಬಿತ್ತು. “ಥೂ ! ನೀನೇ ಎರಡು ಉಂಡಿ ತಿನ್ನು” ಎಂದನು ಗಂಡ. ಮೈಮೇಲಿನ ಬಟ್ಟೆಬರೆಗಳೆಲ್ಲ ಸುಟ್ಟಿದ್ದರಿಂದ ಇಬ್ಬರೂ ಬರಿ ಬತ್ತಲೆಯೇ ಜಿಗಿದು ಕಡೆಗೆ ಬಂದರು. “ದೆವ್ವ ಬಂದವೆಂದು ಚೌಕಿದಾರ ಓಡಿಹೋದನು.

ಊರ ಗೌಡನು ತನ್ನ ಅರಿವೆ ಒಗೆದು ತರಲಿಕ್ಕೆ ಅಗಸನಿಗೆ ಹೇಳಿದನು. ಆದರೆ ಅಗಸನು ಹಳ್ಳಕ್ಕೆ ಹೋಗಲು ಸಿದ್ದನಾಗಲಿಲ್ಲ. ಹಳ್ಳದ ದಂಡೆಯಲ್ಲಿಯೇ
ಸುಡುಗಾಡು ಇತ್ತು. ದೆವ್ವ ಬೆನ್ನುಹತ್ತುವವೆಂದು ಚೌಕಿದಾರನು ಉರಲ್ಲೆಲ್ಲ ಹೇಳಿದ್ದನು. ಗೌಡನು ಅಗಸನಿಗೆ ಒತ್ತಾಯದಿಂದ ಅರಿವೆಗಳನ್ನು ಕೊಟ್ಟು ತಾನೂ ಕುದುರೆ ಹತ್ತಿ ಬೆನ್ನ ಹಿಂದೆ ಹೋದನು. ಬಟ್ಟಿ ಒಗೆದು ದಡದಲ್ಲಿ ಒಣಹಾಕಲಾಯಿತು. ಆ ಬಟ್ಟೆಗಳನ್ನು ತೆಗೆದುಕೊಳ್ಳಲು ಇಬ್ಬರೂ ಆ ಗಂಡಹೆಂಡತಿ ಓಡುತ್ತ ಬಂದರು.

“ಅಯ್ಯಯ್ಯೋ ದೆವ್ವ ಹಿಡಿಯುತ್ತವೆ” ಎನ್ನುತ್ತ ಅಗಸ ಮತ್ತು ಗೌಡ ಇಬ್ಬರೂ ಓಡಿದರು. ಅಂದು ಆ ಗಂಡ ಹೆಂಡತಿ ಅಗಸನ ಬಟ್ಟೆ ಹಾಕಿಕೊಂಡು ಬಂದಂದಿನಿಂದ ಹಾರುವರು, ಲಮಾಣಿಗರಾದರಂತೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...