Home / ಕವನ / ಕವಿತೆ / ಸಾಕು ಮಾಡೋಣ

ಸಾಕು ಮಾಡೋಣ

ಪುರಾಣ ಪುಣ್ಯಕಥೆಗಳ ಮಿಥ್ಯಾಲಾಪಗಳು ಇನ್ನು ಸಾಕು
ಮುಗಿಲ ಮಲ್ಲಿಗೆಗಳ ಮೂಸುವ ಭ್ರಮೆ ಇನ್ನು ಸಾಕು,
ಕಾಣದುದರ ಕೈಕಾಲುಗಳಿಗೆ ಜೋತಾಡಿ
ಕರ್ರಗೆ ಕಲೆಕಲೆ ಮಾಡಿದ್ದ ಕಂತೆಗಳು ಇನ್ನು ಸಾಕು

ಇದೋ ನೋಡಿ ನಿಮ್ಮ ಮುಂದಿರುವುದು
ಪುಣ್ಯ ಗಣ್ಯ ಭೂಮಿ ಭಾರತವಲ್ಲ
ಹಂದೆಗಳ ಹಡೆಯುವ ದಾರಿದ್ರ್ಯ ದಳ್ಳುರಿಯ
ಆತ್ಮಘಾತಕತನದ ಗಟಾರಮತಿಗಳ ಒಣನೆಲವಾಗಿದೆ.
ನಾವೀಗ ನಿಜವನರಿಯದ ಕೂಪಮಂಡೂಕಗಳು
ಹಲವು ಹಲ್ಕಟ್ತನಗಳ ಮುಚ್ಚಿ ಆದರ್ಶ ಹಾಡುವವರು,
ಸಂಪನ್ನ ರಾಮರೊಳಗೆ ಹುದುಗಿರುವ ರಾವಣರು,
ಪತಿವ್ರತಾ ಮೇಕಪ್ಪಿನೊಳಗೆ ಮಿಡುಕುವ ಪತಿತೆಯರು,

ಜಗವನ್ನೇ ಬೆಳಗುವ ರವಿಕಿರಣಗಳು
ಈ ಒಣಕಾಡಿನೆಲೆಗಳಿಗೂ ಸೋಕವು
ನೆಲವ ಬೆಳಗುವುದನ್ನಂತು ಕೇಳಬೇಡ
ಇಲ್ಲಿಯ ಕಾಗೆ ಗೂಗೆಗಳಿಗೆ ಹೊಸಪಾಠ ಕಲಿಸಿದರೆ
ಅವು ಕೂಗುವುದು ಮತ್ತದೇ ಕಾಕಾ ಗೂಗೂ
ಇಲ್ಲಿಯ ನಾಯಿಗಳಿಗೆ ಹೊಸ ಶಾಸ್ತ್ರ ಕಲಿಸಿದರೆ
ಅವು ಊಳಿಡುವುದು ಮತ್ತದೇ ಬೌಬೌ
ನವ ವೇಷ ಭೂಷಣಗಳೊಳಗೆ
ಅದೇ ಪಾಚಿಗಟ್ಟಿದ ಭೂತಬುದ್ಧಿ,

ಯಾವ ಹೊಸಗಾಳಿಗೂ ಮೈತೆರೆಯದ ಹಳಸಲು ಬಾವಿ ಇದು
ಯಾವ ಹೊಸ ಪ್ರಭಾವಗಳಿಗೂ ಪಕ್ಕಾಗದ ಮೋಟು ಮರವಿದು
ಯಾವ ಹೊಸ ಬೀಜವೂ ನಾಟದ ಕಗ್ಗಲ್ಲಿದು
ಇಲ್ಲಿಯವರೆಗೆ ವಿಧಿ ನಿಷೇಧಗಳ
ಋಣಮಾರ್ಗದಲ್ಲಿ ನಡೆದದ್ದಾಯಿತು
ಹುಲಿ ಹಲ್ಲು ಕಿತ್ತು ಆಕಳ ಮಾಡುವ ಯತ್ನ ನಡೆಯಿತು
ಆಡುವ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು
ಸುರುವಿ
ಕಡಿವ ಕತ್ತಿಯನು ಬಂಡೆಗೆ ಹೊಡೆದು ಮೊಂಡಾಗಿಸಿ
ಜೀವಚ್ಛವವಾದೆವು
ಭಕ್ತಿಯ ಬೋಳೆತನ, ಅಹಿಂಸೆಯ ಹೇಡಿತನ, ಸ್ವರ್ಗದ
ದುರ್ಮಾರ್ಗತನ,
ಬ್ರಹ್ಮಚರ್ಯದ ಭಾನಗಡಿತನ, ಯೋಗದ ಗಂಡುಜೋಗತಿತನ,
ಇವನ್ನೆಲ್ಲ ಇನ್ನಾದರೂ ಸಾಕು ಮಾಡೋಣ
ಚೆನ್ನಾಗಿ ಉಳುವ-ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಮೈತುಂಬ ಕೆಲಸ ತುಂಬಿ ಕಾಯ ಕಲ್ಲಾಗಿಸುವಾ,
ಮನ ತುಂಬ ಸೊಗವುಂಡು ಭಾವಪೂರ ಹರಿಸುವಾ,

ನಮ್ಮ ಬೆನ್ನಿಗಂಟಿದ ಹೊಟ್ಟೆ ತುಂಬಿಸಿ ತೇಗುವ,
ಕಣ್ತುಂಬ ನಿದ್ರಿಸಿ ಪುನರ್ಜನ್ಮವನಣಕಿಸುವ
ಇಹ ಸಾರ್ಥಕತೆಯ ಧನಮಾರ್ಗ ಹಿಡಿಯೋಣ
ಎಲ್ಲಿ ಬೇಡದು ಕೂಡದು ಬಾರದುಗಳು ಬಂಧಿಸವೋ
ಎಲ್ಲಿ ಬೇಕು ಮಾಡು ಕೂಡುನಲಿಯುವಿಕೆಗಳು
ತಂತಾವೇ ಆಳುವುವೋ
ಹಾಗೆಯೇ ಬಾಳೋಣ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...