Home / ಕಥೆ / ಜನಪದ / ಶಿವರಾತ್ರಿ – ಪಾರಣೆ

ಶಿವರಾತ್ರಿ – ಪಾರಣೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಗಂಡನು ಶಿವರಾತ್ರಿಯ ದಿನ ಉಪವಾಸ ಮಾಡುವನೆಂದು ತಿಳಿದು ಹೆಂಡತಿ ತಾನೂ ಉಪವಾಸ ಮಾಡುವುದನ್ನು ನಿರ್ಧರಿಸಿದಳು. ಉಪವಾಸವೆಂದರೂ ಹಳ್ಳಿಯಲ್ಲಿ ಗೆಣಸು, ಬಾಳೆಹಣ್ಣು, ಕಜ್ಜೂರಿ, ಸೇಂಗಾ ತಿನ್ನುವುದು ವಾಡಿಕೆಯಾಗಿದೆ. ಆ ಪ್ರಕಾರ ಗಂಡ ಹೆಂಡಿರು ಸಾಯಂಕಾಲದಲ್ಲಿ ಫಲಾಹಾರ ಮಾಡಿದರು. ಮರುದಿನ ಹೊತ್ತು ಹೊರಡುವ ವೇಳೆಗೆ ಪಾರಣೆ. ಅದಕ್ಕಾಗಿ ಹಿಟ್ಟು, ಬೇಳೆ, ಬೆಲ್ಲ, ಅಕ್ಕಿಗಳನ್ನು ಸಾವರಿಸಿಟ್ಟಳು.

ಶಿವರಾತ್ರಿಯದಿನ ಇಡಿಯರಾತ್ರಿ ಮಹಾದೇವನ ಗುಡಿಯಲ್ಲಿ ನಡೆಯುವ ಭಜನೆಯಲ್ಲಿ ಭಾಗವಹಿಸಿಲು ಗಂಡನು ಹೊರಟನು “ನೀನೂ ಗುಡಿಗೆ ಬಂದುಬಿಡು ನನ್ನೊಡನೆ. ಭಜನೆ ಕೇಳುವಿಯಂತೆ. ಸಾಕಷ್ಟು ಹೆಣ್ಣು ಮಕ್ಕಳು ಬಂದಿರುತ್ತಾರೆ” ಎಂದು ಹೆಂಡತಿಗೆ ಹೇಳಲು, ಆಕೆ ಗಂಡನ ಬಿಡೆಯಕ್ಕಾಗಿ ಗುಡಿಗೆ ಹೋದಳು.

ಭಜನೆ ಆರಂಭವಾಗಿ ಒಳ್ಳೆಯ ಭರಕ್ಕೆ ಬರತೊಡಗಿತ್ತು. ಅಂಥ ಪ್ರಸಂಗದಲ್ಲಿ ಆಕೆಯ ಮನಸ್ಸು ಮನೆಯತ್ತ ಎಳೆಯತೊಡಗಿತು. ಬೇಕಾದಷ್ಟು ಫಲಾಹಾರ ಮಾಡಿದ್ದರೂ ಆಕೆಗೆ ಉಂಡಷ್ಟು ತೃಪ್ತಿಯಾಗಿರಲಿಲ್ಲ. ಹಸಿವೆಯೆನಿಸಹತ್ತಿದ್ದರಿಂದ ಮನೆಗೆ ಹೋಗಿ, ಏನಾದರೂ ಮಾಡಿಕೊಂಡು ತಿಂದು ಮಲಗಬೇಕೆಂದು ಯೋಚಿಸಿದಳು. “ಗಂಡನಂತೂ ಭಜನೆಯಲ್ಲಿ ಭಾಗಿಯಾಗಿದ್ದರಿಂದ ಅಡ್ಡಹೊತ್ತಿನಲ್ಲಿ ಮನೆಗೆ ಬರುವಂತಿಲ್ಲ. ಆದ್ದರಿಂದ ನನ್ನ ಉದ್ದೇಶವು ನಿರ್ಬಾಧವಾಗಿ ನೆರವೇರುತ್ತದೆ” – ಎಂದು ಎದ್ದು ಮನೆಯ ಹಾದಿ ಹಿಡಿದಳು. ಮನೆಗೆ ಬಂದವಳೇ ಒಲೆಹೊತ್ತಿಸಿ, ಭಾಂಡೆಯಲ್ಲಿ ಸಟ್ಟುಗವನ್ನು ಅಟ್ಟು, ಕೋಣಮಗಿಯಲ್ಲಿ ಆರಹಾಕಿದಳು. ತಾಬಾಣದಲ್ಲಿ ಅಷ್ಟಷ್ಟು ತೆಗೆದುಕೊಂಡು ತಿಂದರಾಯಿತೆಂದು. ತಾಬಾಣ ತೆಗೆದುಕೊಳ್ಳುವಷ್ಟರಲ್ಲಿ ಗುಡಿಯಿಂದ ಗಂಡ ಬಂದು. ಬಾಗಿಲು ತೆಗೆಯೆಂದು ಕೂಗಿದನು. ಹೆಂಡತಿ ಲಗುಬಗೆಯಿಂದ ಅದೆಲ್ಲವನ್ನೂ ಮುಚ್ಚಿಟ್ಟು ದಡದಡನೆ ಬಾಗಿಲಿಗೆ ಬಂದು ಕದ ತೆರೆದಳು.

“ಗುಡಿಯಿಂದ ತೀವ್ರವೇ ಬಂದುಬಿಟ್ಟೆಯಲ್ಲ ! ಏಕೆ ?” ಎಂದು ಕೇಳಿದನು ಗಂಡ.

ನನಗೇನು ತಿಳಿಯುವದೇ – ಹೊಳೆಯುವದೇ ? ಆದ್ದರಿಂದ ಬೇಸರವೆನಿಸಿತು. ಓಡಿ ಮನೆಗೆ ಬಂದೆ.”

“ಒಳ್ಳೆಯದೇ ಆಯಿತು. ಮಲಗಿಕೊಂಡುಬಿಡೋಣ ಹಾಗಾದರೆ” ಎಂದು ಗಂಡನು ಮಲಗುವದಕ್ಕೆ ಅಣಿಯಾದನು.

“ಅನಕಾ ಒಂದು ಕಥೇಯನ್ನಾದರೂ ಹೇಳಿರಿ” ಎಂದಳು ಹೆಂಡತಿ.

“ನಿದ್ದೆಯ ಹೊತ್ತಿನಲ್ಲಿ ಕಥೆ ಕೇಳಬೇಕನ್ನುವಳಲ್ಲ” ಎಂದು, ಬೇಸರದಿಂದ ಎಂಥದೋ ಕತೆಯನ್ನು ಹೇಳಲು ಆರಂಭಿಸಿದನು ಗಂಡ.

“ಕತ್ತಲದಾಗ ಕಡೋಡಿ, ಕೊಣಮಗ್ಯಾಗ ತೊಡೋಡಿ, ಸುಮ್ಮನೆ ಮನಗ ಬಿದ್ದೋಡಿ” ಎಂದು ಚೇಷ್ಟೆಯಿಂದಾಡಿದ ಲಲ್ಲೆಯನ್ನು ಕೇಳಿ ಹೆಂಡತಿ ಕಕ್ಕಾ ವಿಕ್ಕಿಯಾದಳು. “ಇವನಿಗೆ ಗೊತ್ತಾಗದಂತೆ ಮಾಡಿದ್ದೆಲ್ಲ ತಿಳಿದೇ ಬಿಟ್ಟಿದೆಯಲ್ಲ” ಎನ್ನುತ್ತ ತಾನು ಮಾಡಿದ್ದನ್ನೆಲ್ಲ ವಿವರಿಸಿದಳು-

“ಸುಳ್ಳೇಕೆ ಹೇಳಲಿ ? ಭಜನೆ ಕೇಳಬೇಕೆಂದರೆ ಹಸಿವೆ ಮನೆಯತ್ತ ಎಳೆದುತಂದು ಸಜ್ಜಿಗೆ ಮಾಡಿಸಿತು. ನೀವು ಬರುವಷ್ಟರಲ್ಲಿ ತಿಂದುಮುಗಿಸಿ, ಉಪವಾಸ ಮಾಡಿದವರಂತೆಯೇ ಮಲಗಿಬಿಟ್ಟು, ನೀವು ಬಂದಾಗ ಬಾಗಿಲು ತೆರೆಯಬೇಕೆಂದು ಯೋಚಿಸಿದ್ದೆ. ಆದರೆ ನಾನು ತಾಬಾಣ ಸಾವರಿಸುವಷ್ಟರಲ್ಲಿ ನೀವು ಬಂದೇ ಬಿಟ್ಟಿದ್ದರಿಂದ, ಮಾಡಿದ್ದನ್ನೆಲ್ಲ ಮುಚ್ಚಿಟ್ಟು ಓಡಿಬಂದು ಬಾಗಿಲು ತೆರೆದೆ, ನನ್ನದೇನಿದೆ ತಪ್ಪು ? ಹಸಿವೆ ತಾಳದೆ ಹೀಗೆ ಮಾಡಿದೆ. ನಿಮಗೆಲ್ಲ ತಿಳಿದೇ ಬಿಟ್ಟಿದೆಯಲ್ಲ ? ಹೊಟ್ಟೆಯಲ್ಲಿ ಹಾಕಿಕೊಳ್ಳಿರಿ” ಎಂದು ವಿನಯದಿಂದ ಕೇಳಿಕೊಂಡಳು.

ಗಂಡನು, ಅಂದು ರಾತ್ರಿ ಹೆಂಡತಿಯು ಮಾಡಿದ ಅಚಾತುರ್ಯವನ್ನೂ, ಮರುದಿನ ಬೆಳಗಾದ ಬಳಿಕ ಆಕೆ ಮಾಡಿದ ಸಜ್ಜಗೆಯನ್ನೂ ಆಕೆಯ ವಿನಂತಿಯನ್ನು ಮನ್ನಿಸಿ ಹೊಟ್ಟೆಯಲ್ಲಿ ಹಾಕಿಕೊಂಡನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...