Home / ಕವನ / ಕವಿತೆ / ಹೆಸರಿನೊಳಗೇನಿದೆ?

ಹೆಸರಿನೊಳಗೇನಿದೆ?

ದರ್ಪ ಸೂಚನೆ ಸುಖದ ವಂಚನೆ
’ಮನು’ ಮನದ ಯಾತನೆ
ಜಾತಿ ಧರ್ಮ ಆಸ್ತಿ ಗೌರವ
ಕಾಣಲಾರವೆ ಹೆಸರೊಳಗೆ?

ಊರ ಗೌಡನ ಹೆಸರು
ಶೂದ್ರ ಸಿದ್ದನದೇನು?
ಗೌಡ ಕರೆದಂತೆ ಕರಿಸಿದ್ದನನ್ನು
ಕೂಗಬಹುದೇ ಹೊಲೆಯ ಗೌಡನನ್ನು?

ಇರಬಹುದು ಒಮ್ಮೊಮ್ಮೆ
ಹೆಸರೊಂದೆ ಈರ್ವರಿಗು
ಒಂದೇ ಮನೆಯಲಿ ಸಣ್ಣ ದೊಡ್ಡ
ಜಾತಿ ಮತಗಳ ನಡುವೆ ದೊಡ್ಡ ಗುಡ್ಡ

ಲಂಗೋಟಿ ಇರದವಗೂ
ಗೌಡನೆಂದೆ, ಸಾಮಿಯೆಂದೆ
ಧಣಿಯೆಂದೆ, ಸಾವ್ಕಾರನೆಂದೆ
ಹಾಗಲ್ಲದಿದ್ದರೆ ಅದು ಜಾತಿ ನಿಂದೆ!

ಒಲವಿತ್ತು ಬಲವಿತ್ತು
ಛಲವಿತ್ತು ಗೆಲುವಿತ್ತು
ಊರಾಚೆಯ ಕರಿಯನಿಂದೆ
ಕರೆದೆ ನೀ ನಿನ್ನದೇ ದೇವರ
’ಲೇ ಬಸ್ಯಾ, ಯಂಕ್ಯಾ, ರಾಗ್ಯಾ, ರಾಮ್ಯಾ…’
ವಕ್ರೋಕ್ರ ಪೆಕರ ಕಾಗೆ ಕರೆವಂತೆ

ಹೆಸರಿನಿಂದಲೆ ಧರ್ಮ
ಹೆಸರಿನಿಂದಲೆ ಕರ್ಮ
ಗೊತ್ತಿಲ್ಲ ಯಾರಿಗೆ ಇದರ ಮರ್ಮ?

ಅಕ್ಬರನೆಂದರೆ ಮುಸ್ಲಿಮನೆಂದೆ
ಆಚಾರಿಯೆಂದರೆ ಹಾರವನೆಂದೆ
ಡೇವಿಡ್ಡು ಆಂಥೋನಿ ಕ್ರಿಸ್ತನೆಂದೆ

ಎಂದಾದರು ಎಲ್ಲಾದರು
ಇಟ್ಟು ಕರೆದೆವೆ ಬೇರೆ ಹೆಸರು
ನಮ್ಮ ಮಕ್ಕಳಿಗೂ ಅದಲು ಬದಲು?

ಮರದ ತುಂಡು
ಕಲ್ಲು ಗುಂಡು
ಊರ ಹೊರಗಿನ ದೇವರು

ಮಾರಮ್ಮ ದುರುಗಮ್ಮ
ಸುಂಕ್ಲಮ್ಮ ಮರಿಗೆಮ್ಮ
ಎಷ್ಟು ಚಂದದ ಹೆಸರು
ಕುರಿ ಕೋಳಿ ಕ್ವಾಣ
ಉಳಿಸಿದ್ದು ಇವರ ನ್ಯಾಣ!

ಚಂದ ಚಂದದ ಮೂರ್ತಿ
ಜಗವ ತುಂಬಿದೆ ಕೀರ್ತಿ
ದೊಡ್ಡ ಮಂದಿಯ ದೇವರು
ಕೃಷ್ಣನಂತೆ ರಾಮನಂತೆ
ಎಲ್ಲಾ ಅವನ ಲೀಲೆಯಂತೆ
ಗೋವಿಂದಾ ಮಾಯೆ ನಿನ್ನ ಹೆಸರು!

ಜಾತಿ ಜಾತಿಗೂ ಒಬ್ಬ
ಧರ್ಮ ಧರ್ಮಕೂ ಮಬ್ಬ
ಸೃಷ್ಟಿಸಿದೆ ಬಲುಚತುರ ಮಾಯಕಾರ

ನಾಮ ನಾಮಗಳ ಹೊಸೆದು
ಒಂದೇ ದಾರದಿ ಬೆಸೆದು
ಜೀವ ಜೀವಕೆ ಜೀವಕೊಡುವುದ
ಬೇಕೆಂತಲೇ ಮರೆತ ಗೆಣೆಕಾರ!

ನಿನ್ನೆ ಮೊನ್ನೆಗಳಿಂದ ಕತ್ತಲೆ ಸೀಳಿ
ನಾಲ್ಕಕ್ಷರದ ಬೆಳಕು ಮೂಡಿ
ಉಟ್ಟ ವಸ್ತ್ರದ ಜೊತೆಗೇ
ಇಟ್ಟ ಹೆಸರುಗಳು ಬದಲಾಗಿ
ಸಂದಿದೆ ನಗರಜೀವನದ ಷೋಕಿ

ಹೆಸರಿನಲ್ಲೇನಿದೆ ಬರೀ ಹೆಸರು
ಲೋಕವಾದರೆ ತಾ ಒಂದೇ ಉಸಿರು

*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...