Home / ಕವನ / ಕವಿತೆ / ಆದರ್ಶಕ್ಕೆ

ಆದರ್ಶಕ್ಕೆ

ದೂರದೂರ ದಿಕ್ದಿಗಂತದಿಂದ ದೂರಕೆ
ಹಗಲು ಮುಗಿಲು ಮಿಲನವಾಗಿ ಕುಣಿಯುತಿರುವೆಡೆ
ಜಗವೆ ಒಲವ ಕೊಳಲು ಆಗಿ ಗಾನ ಸುರಿವೆಡೆ
ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ!

ಕಣ್ಣ ಮುಚ್ಚಿ
ಹೃದಯ ಮುಚ್ಚಿ
ಒಮ್ಮೆ ಅಂದು ಕಾತರಿಸಲು
ಮಿಂಚಿನಂತೆ ತೂರಿ ನೀನು
ಜೀವ ತೋರಿದೆ
ಬಲವ ಕಲಕಿದೆ!

ಯಾರಿಗಾಗಿ ಕೊರಗುತಿಹೆನೊ ಅದನೆ ಅರಿಯದೆ
ಸಾಗುತಿಹುದು ಜೀವ ನನ್ನ ನೆಲೆಯ ಕಾಣದೆ!   ೧

ಎಲ್ಲೆಡೆಯಲು ಬೆಳಕು ಇರಲು ನನಗೆ ಕತ್ತಲು!
ಅಲೆಗಳಂತೆ ಜಿಗಿದು ಜಿಗಿದ ಬಾಳು ಬತ್ತಲು
ಕಂಡುದೊಮ್ಮೆ-ಕಾಂಬುದೆಲ್ಲಿ-ಶೂನ್ಯ ಸುತ್ತಲು!
ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ!

ಮನಸು ಸೊರಗಿ
ಜೀವ ಕೊರಗಿ
ಸುತ್ತಮುತ್ತು ತಿರುಗಿ ತಿರುಗಿ
ಮೌನದಲ್ಲೆ ಮರುಗಿ ಮರುಗಿ
ನಿನ್ನ ಕಾಣದೆ
ಬಾಡಿ ಒರಗಿದೆ!

ಕಾಲ ದುಗುಡದಾಳದಲ್ಲಿ ಹರಿದು ಸಾಗಿದೆ
ಸಾಗುತಿಹುದು ಜೀವನಿನ್ನ ನೆಲೆಯ ಕಾಣದೆ!   ೨

ಎಳೆಮಂಜಿನ ಮೇಲ್ಮೈಯಿನ ಮೃದುತೆಯಂತೆದೆ
ಎಳೆಹರಯದ ದಳಗಳೊಳಗೆ ಹುದುಗಿ ಹೋಗಿರೆ
ಬೀಗಿ ಬಳುಕಿ ಸಾರಿಹೋದ ಬೆಳಗಿನ ಕನಸೆ!
ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ!

ತಾಯ ಮಮತೆ
ಎದೆಯ ಕೊರತೆ
ನೀಗುತೆನ್ನ ಮನಕೆ ಶಾಂತಿ
ತರುವುದೆಂಬ ಬಯಕೆ ಭ್ರಾಂತಿ
ಕಂಡುದೇನನು?
-ತನ್ನತನವನು!

ಪ್ರೇಮ ತನ್ನ ಬೆಲೆಯಿದೆಂದು ಬೇಡಲು ಬಹುದೆ?
ಸಾಗುತಿಹುದು ಜೀವ ನಿನ್ನ ನೆಲೆಯ ಕಾಣದೆ!   ೩

ಹೆಣ್ಣೊಂದರ ಕಣ್ಣಿನಲ್ಲಿ ಮಿಂಚಿನ ಮಿಣುಕು
ಕಂಡೆನೊಮ್ಮೆ ಅಲ್ಲೆ ಇಹುದು ಒಲವಿನ ಬದುಕು
ಎನುತ ಹಾರಿಹೋದೆನಾಗ ಆಕೆಯ ಬಳಿಗು
ಸಾಗುತಿರಲು ಜೀವ ನಿನ್ನ ಮೂರ್ತಿಯರಸುತೆ!

ಇನಿತು ದಿನವು
ಕಾಣದಿರವು
ಹೃದಯ ಬಯಸಿ ಬೆಳೆಸಿದೊಲವು
ಹೂವಾಗಿದೆ ಆಕೆ ಚೆಲುವು
ಎನುವ ಭರವಸೆ
ಎದೆಯ ತುಂಬಿರೆ
ಆಸೆಯೊಡೆದು ಒಲವು ಸಿಡಿದು ಹೃದಯ ಬಿರಿದಿದೆ!
ಸಾಗುತಿಹುದು ಜೀವ ನಿನ್ನ ನೆಲೆಯ ಕಾಣದೆ!   ೪

ಮುಳುಗುತಿರುವ ತಾರೆ ತನ್ನ ಕಂಗಳ ತೊಳೆದು
ಕಳುಹುತಿರಲು ಭುವಿಯ ಕಡೆಗೆ ಮಂಜಿನ ಹರಳು
ಹಾತೊರೆಯುತ ಕಾಯುವಂತೆ ಹೂವಿನ ಎದೆಯು
ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ!

ನೆಲೆಯನರಸಿ
ಬದುಕ ಸವೆಸಿ
ಕೊನೆಯಿಲ್ಲದ ಕಡಲಿನಲ್ಲಿ
ಕೊರಗು ಕೊಟ್ಟ ದೋಣಿಯಲ್ಲಿ
ಅಲೆಗೆ ಬೆದರುತೆ
ಜೀವ ಸಾಗಿದೆ!

ಒಲವವಸತಿ ಕಾತರಿಸಿದೆ ನಾಳೆಯರಿಯದೆ!
ಸಾಗುತಿಹುದು ಜೀವ ನಿನ್ನ ನೆಲೆಯ ಕಾಣದೆ!   ೫
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...