Home / ಕವನ / ಕವಿತೆ / ಮನೆಯು ಪಾಲಾಯ್ತು

ಮನೆಯು ಪಾಲಾಯ್ತು

“ಮನೆಯು ಪಾಲಾಯ್ತು
ಒರ್‌ಬಾಳ್ವೆ ಹೋಳಾಯ್ತು
ಕರುಳೆರಡು ಸೀಳಾಯ್ತು
ಅಯ್ಯೊ! ಅಕಟಕಟಾ!
ಎರಡಾಯ್ತು ಬಾವುಟ”
ಎಂದು ಗೋಳಾಡದಿರು
ಓ, ಗೆಳೆಯನೇ!

ಕಲಹ ಪಾಲಿಗೆ ಮೊದಲು:
ಹೊಗೆಯಿತಸಮಾಧಾನ,
ಉರಿಯಿತು ದುರಭಿಮಾನ.
ತಮ್ಮ, ಪಸುಗೆಯ ಬಯಸಿ
ಕೈಮಾಡಿದನು, ಮುನಿದು;
ಒಬ್ಬಣ್ಣ ಸುಮ್ಮನಿರೆ
ಉಳಿದರಂತಿಹರೆ?

ಹೊಡೆತಕ್ಕೆ ಮರುಹೊಡೆತ;
ಮತದ ಮದ್ದಿನ ಸಿಡಿತ!
ಮಾರಿಗಾಯ್ತೌತಣ;
ನಾಡೆಲ್ಲ ರಣ ರಣ!

ತಡವೆ ರೋಗನಿದಾನ!
ಒಳಗೆಲ್ಲೊ ವಿಷದ ಸೆಲೆ
ಉಪಚಾರ ಮೇಲ್ಮೇಲೆ!
ಅರಿವು ಮೂಡಿದ ಮೇಲೆ
ನಿಜದ ಸಂಧಾನ.
ನಮ್ಮ ಮನೆ ಪಾಲಾಗೆ
ಬೇಕಾಯ್ತು ಕಡೆಗೆಮಗೆ
ಹೆರರ ತೀರ್ಮಾನ!

ಎಲ್ಲವೂ ಆಯ್ತು, ದಿಟ!
ಪಾಲಾಯ್ತು ಮನೆ ಮಠ,
ಹಣಕಾಸು ಆಳು ಭಟ;
ಒಂದೆಸೆದ ಬಾವುಟ!
ಗೆದ್ದಿತೆಲ್ಲರ ಹಟ!
ಇನ್ನೇತಕಾ ಗೋಳು?

ನೋಡು ನಾಳಿನ ಬಾಳು:
ನಗುತಿರಲಿ ಆ ಮನೆ,
ನಗುತಿರಲಿ ಈ ಮನೆ!
ಅವರ ಬಾವುಟವವರು
ನಮ್ಮ ಬಾವುಟ ನಾವು
ಏರಿಸುವ! ಹಾರಿಸುವ!
ಒಲುಮೆ ತೋರಿಸುವ!
ನಮ್ಮ ಕರುಳಿನ ನಂಟು
ಬಿಡಿಸಲಾಗದ ಗಂಟು:
ಈ ನಂಬಿಕೆಯ ಬೆಳಕೆ
ಒಡೆದ ಮನಕಂಟು!

ಬೇರೆಯಿಹ ಕೈಗಳನು
ಮುಗಿದು ವಂದಿಸಿದಂತೆ;
ಎರಡು ಕಣ್ಣಿನ ಕವಲು-
ನೋಟ ಸಂಧಿಸಿದಂತೆ;
ಇಬ್ಬಗೆಯ ಹೂಗಳನು
ಹಾರಕೊಂದಿಸಿದಂತೆ;
ಗಂಡು ಹೆಣ್ಣಿನ ಬಾಳ-
ನೊಲುಮೆ ಬಂಧಿಸಿದಂತೆ;
ಕವಲೊಡೆದ ಕಾವೇರಿ
ಮತ್ತೆ ಕೂಡಿದ ತೆರದಿ;
ಬೇಡನಾವನೊ ಬಂದು
ಎರಡು ಗೂಡಿನಲಿಟ್ಟ
ಜೊತೆಯ ಹಕ್ಕಿಗೆ ಕಟ್ಟ-
ಕಡೆಗೆ ಬಿಡುಗಡೆ ದೊರೆಯೆ
ಅವು ಹಾರಿ ನೆರೆವಂತೆ;
ಹುಟ್ಟು ಧರಿಸಿದ ಆತ್ಮ
ಪರಮಾತ್ಮನಲಿ ಕಡೆಗೆ
ಬೆರೆತೈಕ್ಯವಪ್ಪಂತೆ;
ನಾವು ಸೋದರರಿಂದು
ಬೇರಾದರೇನಂತೆ,-
ಮನವೊಡೆಯದಂತೆ
ಮನೆಯೊಡೆಯದಂತೆ
ಮತ್ತೆ ಬೆರೆಯೋಣ,
ಹೊಸ ಬಾಳ ತೆರೆಯೋಣ,
ಶಾಂತಿ ಸೌಹಾರ್ದಗಳ
ಅಮೃತವರ್ಷದ ಧಾರೆ
ಇಳೆಗೆಲ್ಲ ಕರೆಯೋಣ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...