Home / ಕವನ / ಕವಿತೆ / ಭಾರತ ಭವಿಷ್ಯವನು ಬರೆವನಾರು?

ಭಾರತ ಭವಿಷ್ಯವನು ಬರೆವನಾರು?

ಅದೊ ನೋಡು! ಹೊಲದಲ್ಲಿ ನೇಗಿಲನು ಬಲ್ವಿಡಿದು
ಮೈಬೆವರಿನಿಂದುತ್ತ ಮಣ್ ನೆನೆವರಂ ದುಡಿದು
ಹೆರವರಿಗೆ ಹೊನ್ ಬೆಳೆಯ ತೆಗೆಯೆ ಜೀವವ ತೇದು
ನೇಗಿಲಿನ ರೇಖೆಯಿಂ ದುಡಿವ ಬಾಳ್ ನೆತ್ತರಿಂ

ಭಾರತ ಭವಿಷ್ಯವನು ಬರೆವನವನು
ನೆಲತಾಯ ನಲ್ಗುವರ-ಬಡ ರೈತನು.

ಮತ್ತದೋ ನೋಡಲ್ಲಿ! ಯಂತ್ರಶಾಲೆಗಳಲ್ಲಿ-
ಯಂತ್ರಗಳ ನಡುವೆ ತಾನೊಂದು ಯಂತ್ರವೆ ಆಗಿ
ಹೆರರ ಸೌಖ್ಯಕೆ ತನ್ನ ಬಾಳ ಸವಿಯನೆ ನೀಗಿ
ಮೌನವೇ ಮಸಿಯಾಗೆ ಗೈಮೆ ಲೇಖನಿಯಾಗೆ

ಭಾರತ ಭವಿಷ್ಯವನು ಬರೆವನವನು
ಕರ್ಮಯೋಗಕೆ ಕಲಶವಿಡುವ ಕಾರ್ಮಿಕನು

ಇತ್ತ ನಿರುಕಿಸು! ಶಸ್ತ್ರಸನ್ನದ್ಧನಾಗಿಯುಂ
ತಾನಹಿಂಸಾ ಸತ್ಯ ತತ್ತ್ವಕ್ಕೆ ತಲೆಬಾಗಿ
ಹೆರರ ನೆಲಕಾಶಿಸದೆ ತಾಯ್ ನೆಲಕೆ ಮುಡಿಪಾಗಿ
ತನ್ನ ಬಾಳನ್ನಿರಿಸಿ, ಇಳೆ ಮೆಚ್ಚುವದಟಿನಿಂ

ಭಾರತ ಭವಿಷ್ಯವನು ಬರೆವನವನು
ಧರ್ಮಯುದ್ಧಕ್ಕಳುಕದಿಹ ವೀರಭಟನು.

ಮೇಣದೋ! ವಿಜ್ಞಾನಶಾಲೆಯಲಿ ಭೇದಿಸುತ
ಪ್ರಕೃತಿಯ ರಹಸ್ಯವನು, ಸತ್ಯವನು ಶೋಧಿಸುತ,
ನಾಡ ಮಣ್ಣನು ಚಿನ್ನ ಮಾಳ್ಪ ಕಲೆ ಸಾಧಿಸುತ
ವಿಜ್ಞಾನಸಿದ್ಧಿಯನು ಯುದ್ಧಕೆ ನಿರೋಧಿಸುತ

ಭಾರತ ಭವಿಷ್ಯವನು ಬರೆವನವನು
ಸತ್ಯ-ಪರಮೇಶ್ವರನ ಭಕ್ತ, ವಿಜ್ಞಾನಿ.

ಮೇಣಿದೋ! ಜನರೊಡನೆ ನಲವಿನಿಂ ಬೆರೆಯುತ್ತ
ಅನ್ಯಾಯವಸಮತೆ ಅಧರ್ಮಗಳ ಜರೆಯುತ್ತ
ಕಾವ್ಯ ಕಹಳೆಯನೂದಿ ಜನರನೆಚ್ಚರಿಸುತ್ತ
ಸತ್ಯ ಸೌಂದರ್ಯಗಳ ಮಂತ್ರವುಚ್ಚರಿಸುತ್ತ

ಭಾರತ ಭವಿಷ್ಯವನು ಬರೆವನವನು
ಭಾರತಿಯ ವರಪುತ್ರ ಕವಿವರ್‍ಯನು.

ಅದೊ! ವಿಶಾಲಪ್ರಪಂಚಕೆ ಭಾರತದ ಕೀರ್ತಿ
ಹರಡಿ, ಮೇಣ್ ಗಳಿಸುತ್ತ ಹೊರದೇಶಗಳ ಅರ್ತಿ.
ದೇಶ ದೇಶಕೆ ನಂಟುನೇಹಗಳ ಬಲಿಸುತ್ತ
ಯುದ್ಧವನು ನಿಲಿಸಿ ಶಾಂತಿ ಧ್ವಜವ ನಿಲಿಸುತ್ತ

ಭಾರತ ಭವಿಷ್ಯವನು ಬರೆವರವರು
ಸ್ವಾತಂತ್ರ್‍ಯ ಪಡೆದ ಭಾರತದ ನಾಯಕರು.

ಆಹ! ನೋಡು! ಕೊಂಡಾಡು ಭಕ್ತಿಯಿಂ ಪೊಡಮಡು
ಸತ್ಯ ಧರ್ಮ ಅಹಿಂಸೆಗಳಿಗಾಗಿ ಜೀವವನು
ಮುಡಿಪಿರಿಸಿ, ಬುದ್ಧದೇವನ ಧರ್ಮ ಚಕ್ರವನು
ಅಂತು ಚರಕವಗೈದು ನಡೆನುಡಿಯ ನೂಲಿನಿಂ

ಭಾರತ ಭವಿಷ್ಯವನು ಬರೆದು ಬರೆಯುತಲಿಹನು
ಜನತಾ ಜನಾರ್ದನನ ಭಕ್ತ ಗಾಂಧಿ ಮಹಾತ್ಮ
ಕ್ರಿಸ್ತ ಬುದ್ಧರ ಪಂತಿಯೊಳು ನಿಲುವ ಪೂತಾತ್ಮ
ಪ್ರತ್ಯಕ್ಷದೈವ ಪಾಮರರ ಪರಮಾತ್ಮ!
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...