Home / ಕವನ / ಕವಿತೆ / ಭಾರತ ಭವಿಷ್ಯವನು ಬರೆವನಾರು?

ಭಾರತ ಭವಿಷ್ಯವನು ಬರೆವನಾರು?

ಅದೊ ನೋಡು! ಹೊಲದಲ್ಲಿ ನೇಗಿಲನು ಬಲ್ವಿಡಿದು
ಮೈಬೆವರಿನಿಂದುತ್ತ ಮಣ್ ನೆನೆವರಂ ದುಡಿದು
ಹೆರವರಿಗೆ ಹೊನ್ ಬೆಳೆಯ ತೆಗೆಯೆ ಜೀವವ ತೇದು
ನೇಗಿಲಿನ ರೇಖೆಯಿಂ ದುಡಿವ ಬಾಳ್ ನೆತ್ತರಿಂ

ಭಾರತ ಭವಿಷ್ಯವನು ಬರೆವನವನು
ನೆಲತಾಯ ನಲ್ಗುವರ-ಬಡ ರೈತನು.

ಮತ್ತದೋ ನೋಡಲ್ಲಿ! ಯಂತ್ರಶಾಲೆಗಳಲ್ಲಿ-
ಯಂತ್ರಗಳ ನಡುವೆ ತಾನೊಂದು ಯಂತ್ರವೆ ಆಗಿ
ಹೆರರ ಸೌಖ್ಯಕೆ ತನ್ನ ಬಾಳ ಸವಿಯನೆ ನೀಗಿ
ಮೌನವೇ ಮಸಿಯಾಗೆ ಗೈಮೆ ಲೇಖನಿಯಾಗೆ

ಭಾರತ ಭವಿಷ್ಯವನು ಬರೆವನವನು
ಕರ್ಮಯೋಗಕೆ ಕಲಶವಿಡುವ ಕಾರ್ಮಿಕನು

ಇತ್ತ ನಿರುಕಿಸು! ಶಸ್ತ್ರಸನ್ನದ್ಧನಾಗಿಯುಂ
ತಾನಹಿಂಸಾ ಸತ್ಯ ತತ್ತ್ವಕ್ಕೆ ತಲೆಬಾಗಿ
ಹೆರರ ನೆಲಕಾಶಿಸದೆ ತಾಯ್ ನೆಲಕೆ ಮುಡಿಪಾಗಿ
ತನ್ನ ಬಾಳನ್ನಿರಿಸಿ, ಇಳೆ ಮೆಚ್ಚುವದಟಿನಿಂ

ಭಾರತ ಭವಿಷ್ಯವನು ಬರೆವನವನು
ಧರ್ಮಯುದ್ಧಕ್ಕಳುಕದಿಹ ವೀರಭಟನು.

ಮೇಣದೋ! ವಿಜ್ಞಾನಶಾಲೆಯಲಿ ಭೇದಿಸುತ
ಪ್ರಕೃತಿಯ ರಹಸ್ಯವನು, ಸತ್ಯವನು ಶೋಧಿಸುತ,
ನಾಡ ಮಣ್ಣನು ಚಿನ್ನ ಮಾಳ್ಪ ಕಲೆ ಸಾಧಿಸುತ
ವಿಜ್ಞಾನಸಿದ್ಧಿಯನು ಯುದ್ಧಕೆ ನಿರೋಧಿಸುತ

ಭಾರತ ಭವಿಷ್ಯವನು ಬರೆವನವನು
ಸತ್ಯ-ಪರಮೇಶ್ವರನ ಭಕ್ತ, ವಿಜ್ಞಾನಿ.

ಮೇಣಿದೋ! ಜನರೊಡನೆ ನಲವಿನಿಂ ಬೆರೆಯುತ್ತ
ಅನ್ಯಾಯವಸಮತೆ ಅಧರ್ಮಗಳ ಜರೆಯುತ್ತ
ಕಾವ್ಯ ಕಹಳೆಯನೂದಿ ಜನರನೆಚ್ಚರಿಸುತ್ತ
ಸತ್ಯ ಸೌಂದರ್ಯಗಳ ಮಂತ್ರವುಚ್ಚರಿಸುತ್ತ

ಭಾರತ ಭವಿಷ್ಯವನು ಬರೆವನವನು
ಭಾರತಿಯ ವರಪುತ್ರ ಕವಿವರ್‍ಯನು.

ಅದೊ! ವಿಶಾಲಪ್ರಪಂಚಕೆ ಭಾರತದ ಕೀರ್ತಿ
ಹರಡಿ, ಮೇಣ್ ಗಳಿಸುತ್ತ ಹೊರದೇಶಗಳ ಅರ್ತಿ.
ದೇಶ ದೇಶಕೆ ನಂಟುನೇಹಗಳ ಬಲಿಸುತ್ತ
ಯುದ್ಧವನು ನಿಲಿಸಿ ಶಾಂತಿ ಧ್ವಜವ ನಿಲಿಸುತ್ತ

ಭಾರತ ಭವಿಷ್ಯವನು ಬರೆವರವರು
ಸ್ವಾತಂತ್ರ್‍ಯ ಪಡೆದ ಭಾರತದ ನಾಯಕರು.

ಆಹ! ನೋಡು! ಕೊಂಡಾಡು ಭಕ್ತಿಯಿಂ ಪೊಡಮಡು
ಸತ್ಯ ಧರ್ಮ ಅಹಿಂಸೆಗಳಿಗಾಗಿ ಜೀವವನು
ಮುಡಿಪಿರಿಸಿ, ಬುದ್ಧದೇವನ ಧರ್ಮ ಚಕ್ರವನು
ಅಂತು ಚರಕವಗೈದು ನಡೆನುಡಿಯ ನೂಲಿನಿಂ

ಭಾರತ ಭವಿಷ್ಯವನು ಬರೆದು ಬರೆಯುತಲಿಹನು
ಜನತಾ ಜನಾರ್ದನನ ಭಕ್ತ ಗಾಂಧಿ ಮಹಾತ್ಮ
ಕ್ರಿಸ್ತ ಬುದ್ಧರ ಪಂತಿಯೊಳು ನಿಲುವ ಪೂತಾತ್ಮ
ಪ್ರತ್ಯಕ್ಷದೈವ ಪಾಮರರ ಪರಮಾತ್ಮ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...