Home / ಕವನ / ಕವಿತೆ / ನಿಜಬುದ್ಧ

ನಿಜಬುದ್ಧ

ಹಿಂದೊಮ್ಮೆ ಬುದ್ಧ ತನ್ನೊಲವ ಶಿಷ್ಯನ ಕೂಡ
ಮಾತನಾಡುತಲಿರಲು ಸೃಷ್ಟಿಸ್ಥಿತಿಲಯ ವಿಷಯ,
ಆನಂದ ಪ್ರಶ್ನಿಸಿದ “ಗುರುದೇವ, ಹೃದಯದಲಿ
ತೊಡಕುತಿದೆ-ಸಂದೇಹ-ಕೇಳುವೊಡೆ-ಹೇಳುವೆನು!”
ಬುದ್ಧದೇವನು ಆಗ ಚಂದ್ರಮನ ಎಳೆನಗುವ   ೫
ನಕ್ಕು ಪೇಳಿದನಿಂತು – “ಆನಂದ, ಅಂತಹುದು
ಸಂದೇಹವೇನಿಹುದು? – ಮನವ ಮುರಿವಂತಹುದು!
ಅರಿತಿದ್ದರದಕಾನು ಉತ್ತರವ ಹೇಳುವೆನು”
“ಗುರುದೇವ! ಜೀವನದಿ ಎಲ್ಲರೊಡನಾಡುತಲಿ
ಕಾಮಕ್ರೋಧದ ಕ್ರೂರ ಅಲೆಗಳಪ್ಪಳಿಸಿದರು   ೧೦
ಕಲ್ಬಂಡೆಯಂತಿರುವ ಯೋಗವೇ ಮೇಲಹುದೊ?
ಮೇಣ್, ಜಗಕೆ ದೂರಾಗಿ ಜ್ಞಾನಪಡೆವುದು ಮೇಲೊ?”
“ಆನಂದ, ಸಂದೇಹ ತಿಳುಹಿದುದೆ ಮೇಲಾಯ್ತು!
ನಾನು ಜಗವನೆ ತೊರೆದು ದೂರ ಕಾಡನು ಸೇರಿ
ಬುದ್ಧನಾದುದು ನಿನಗೆ ಅರಿತಿಹುದು …..ಎನಗಲ್ಲಿ,   ೧೫
ಕಾನನದಿ ಮಾಯೆಗಳು ಬಂಧನಗಳಿರಲಿಲ್ಲ!
ರಾಹುಲ ಯಶೋಧರರ ಮಾಯೆಯನು ಒಡೆಯಲಿಕೆ
ಕಾಡಿಗೋಡಿದೆ ನಾನು! – ಅದು ಹಿರಿಮೆಯೇನಲ್ಲ!
ಪತ್ನಿ ಪುತ್ರರ ಕೂಡ ನಿಂತು ತನ್ನನು ಗೆಲುವ
ಯೋಗವೇ ಮೇಲಹುದು! ಬುದ್ಧನಾದರು ಮತ್ತೆ   ೨೦
ಅರಿತುದನು ಬಿತ್ತಲಿಕೆ ಜನತೆಯೇನೆಲನೆಮಗೆ!
ಜನತೆಯೊಡಲಲಿ ಹುಟ್ಟಿ, ಜನತೆ ಮಡಿಲಲಿ ಬೆಳೆದು,
ಜನತೆಯೆಡೆಯೇ ಉಳಿದು, ಜನತೆಯಡಿ ಮುಂದೊಯ್ವ
ಜ್ಞಾನ ಕರ್ಮಿಯು ಬುದ್ಧ! – ಮುಂದೆ ಬರುವವನವನು!
ಹಗಲು ಹುಟ್ಟುವ ಮುನ್ನ ಅರುಣನಿಣುಕುವ ಹಾಗೆ   ೨೫
ಮುಂದೆ ಜನಿಸುವ ಅವನ ಆಗಮನ ಸೂಚಿಸಲು
ನಾಬಂದೆ! ಆನಂದ- ಈಗ ನಿನಗರಿವಾಯ್ತೆ?
ಜಗದ ನಿಜವನು ಅರಿತ ನಿಜಬುದ್ಧ ಬರುತಿಹನು!
ಜಗವ ನಿಜದಲಿ ನಡೆಪ ಆನಂದ ನನಗಿಲ್ಲ-
ಆತನಿಗೆ ಮೀಸಲದು!”  ಆನಂದ ನಡುವಿನಲಿ   ೩೦
ಬಾಯಿಟ್ಟು ಪ್ರಶ್ನಿಸಿದ, “ಗುರುದೇವ, ಆತನನು
ವರ್ಣಿಪಿರ? – ಎಂತಿರುವ ಆ ಬುದ್ಧ-ನಿಜಬುದ್ಧ?
ಜಗದ ನಡೆನುಡಿಬೆರೆತ, ಜಗದ ಸತ್ಯವನರಿತ
ಜಗದ ಕೂಸಾಬುದ್ಧ ಎಲ್ಲಿ ಜನಿಸಿಹನವನು?”
ಬುದ್ಧ ನಸುನಕ್ಕಿಂತು ಪೇಳಿದನು ಉತ್ತರವ-   ೩೫
“ನಡುವಿಂದ ಮೊಳಕಾಲವರೆಗಿಳಿವ ಬಿಳಿವಸ್ತ್ರ
ತನ್ನ ಕೈಯಿಂ ತಾನೆ ನೂತುನೇದುದು ಖಾದಿ!
ಮೇಲ್ಹೊದಿಕೆ-ಮತ್ತೊಂದು-ಬಿಳಿಯ ಖಾದಿಯ ಚೌಕ
ವಿಶ್ವದಿಗ್ವಜಯಕ್ಕೆ ಹೊರಟ ಸನ್ಯಾಸಿಯವ,
ಕೈಯಲ್ಲಿ ದಂಡವಿದೆ-ಮುಖಬತ್ತಿ ಬಾಡಿಹುದು   ೪೦
ಯೌವನದ ತೇಜವಿದೆ-ಬ್ರಹ್ಮಚರ್‍ಯದ ತೇಜ!
ಮಡದಿಯನು ಮಾತೆಯೊಲು ಕಾಣವವನಾ ತೇಜ!
ಹೃಯದಲಿ ಹಿರಿಕೆಚ್ಚು-ಸ್ವಾತಂತ್ರ್‍ಯದಾ ಕಿಚ್ಚು
ಅದೊ ಆತ ಬರುತಲಿಹ ಈ ಎಡೆಗೆ ನೋಡಲ್ಲಿ
ಭಾರತಿಯ ಹಿರಿಯಮಗ-ಕಿರಿಯಮಕ್ಕಳು ನೋಡು   ೪೫
ಎನಿತು ಜನ ದಂಡಾಗಿ ಹಿಂದೆ ಸಾಗುತಲಿಹರು-
ಬುದ್ಧನವ! – ನಿಜಬುದ್ಧ! ನಾನವನ ಜನ್ಮವನು
ಸೂಚಿಸಲು ಬಂದಿದ್ದ ಮುಂಜಾನೆ! – ಆನಂದ!”
-ಅಷ್ಟರಲೆ ಕನಸೊಡೆದು ಎಚ್ಚೆತ್ತು ನೋಡಿದೆನು
ಸೆರೆಮನೆಯ ಹೊರಬದಿಗೆ ಕಾವಲಿನ ಪೋಲೀಸ   ೫೦
ನಡೆದ ಬೂಟ್ಸಿನ ಸದ್ದು ರಾತ್ರಿಯಾ ಕಡುಮೌನ
ಭೇದಿಸುತ ಬರುತಿತ್ತು- ಸುಂದರ ದಿಗಂತದಲಿ
ನಕ್ಷತ್ರನೂರ್ಲಕ್ಷ ಸ್ವಾತಂತ್ರ್‍ಯಸಿರಿಯಲ್ಲಿ
ನಕ್ಕುನಲಿಯುತಲಿರಲು, ಸೆರೆಮನೆಯ ಒಳಬದಿಯ
ಗಾಳಿ ಸುಂಯ್ಗುಡುತಿತ್ತು! ಕಂಗಳಲಿ ನೀರೂರಿ   ೫೫
ಗೋಡೆಯಲಿ ಮಸಿಯಿಂದ ನಾಬರೆದ ಚಿತ್ರದೆಡೆ
ಕಣ್ತಿರುವಿ ಕೈಮುಗಿದೆ ಗಾಂಧಿಗೆ ಮಹಾತ್ಮನಿಗೆ!
– “ನಿಜಬುದ್ಧ! ಭಾರತಿಯ ಹಿರಿಮಗ-ನಮಗೆಲ್ಲ
ಆತ್ಮ ಸ್ವಾತಂತ್ರ್‍ಯವನು ಸಾಧಿಸುವ ಮಂತ್ರವನು
ಬೋಧಿಸಿದ ನಿಜಗುರುವೆ! – ನಿನಗೆ ಚಿರಜಯಮಕ್ಕೆ!”   ೬೦
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...