Home / ಕವನ / ಕವಿತೆ / ಸುವರ್ಣ ಸ್ವಾತಂತ್ರ್ಯ

ಸುವರ್ಣ ಸ್ವಾತಂತ್ರ್ಯ

ಭಾರತ ದೇಶದ ಸ್ವಾತಂತ್ರ್ಯೋತ್ಸವದ
ಸುವರ್ಣ ಹಬ್ಬವ ಮಾಡೋಣ
ಬನ್ನಿರಿ ಗೆಳೆಯರೆ ದೇಶ ಬಾಂಧವರೆ
ಸ್ವಾತಂತ್ರ್ಯವ ಕೊಂಡಾಡೋಣ

ತಿಲಕ್ ಗೋಖಲೆ ಮಹಾತ್ಮ ಗಾಂಧಿ
ಸುಭಾಷ್ ವಲ್ಲಭ ಜವಾಹರ
ಸಾವಿರ ಸಾವಿರ ದೇಶಭಕ್ತ ಜನ
ಹೋರಾಡುತ ಗಳಿಸಿದಾ ವರ

ಎಷ್ಟೋ ಜನ ಪ್ರಾಣಗಳನು ತೆತ್ತರೊ
ತಾಯಿಯ ಪಾದಕ್ಕೆ ನೈವೇದ್ಯ
ರಕ್ತದಿ ಬರೆದರೊ ತ್ಯಾಗದ ಕತೆಗಳ
ಎಲರಿಗೂ ವಂದನೆಯಾದ್ಯ

ಬ್ರಿಟಿಷರ ಬೂಟಿನ ತುಳಿತಕ್ಕೆ ಸಿಕ್ಕು
ಜೈಲಲಿ ಕೊಳೆತರೊ ಎಷ್ಟೊ ಜನಾ
ಹೆಂಡಿರು ಮಕ್ಕಳ ಮನೆಗಳ ತೊರೆದು
ನರಳಿ ಗೈದರೋ ಬಲಿದಾನ

ಅಂಥ ಎಲ್ಲ ಸ್ವಾತಂತ್ರ್ಯ ವೀರರಿಗೆ
ಅಶ್ರುತರ್ಪಣವ ಕೊಡಬೇಕು
ಅವರು ಕೊಟ್ಟ ಸ್ವಾತಂತ್ರ್ಯ ಸಂಪದವ
ಎಚ್ಚರದಲಿ ಬಳಸಲು ಬೇಕು

ಐವತ್ತು ವರುಷ ಬಂಗಾರ ಹರುಷ
ಕಳೆದುದು ಪಡೆದುದು ಏನೇನು
ಬಂಗಾರವೇನು ಬೆಳ್ಳಿಯೋ ಮಣ್ಣೋ
ಗಳಿಸಿದ್ದು ಸಾಧಿಸಿದ್ದೇನು
***

ಪ್ರತೀವರ್ಷವೂ ಮಾಡುತ ಬಂದೆವು
ಸ್ವಾತಂತ್ರ್ಯೋತ್ಸವ ಹಬ್ಬ
ಪ್ರತೀ ಸಾರಿಯು ವಿಷಾದದಿಂದಲೇ
ಕಂಡೆವು ಕವಿದಿಹ ಮಬ್ಬ

ಕಛೇರಿ ಶಾಲಾ ವಿದ್ಯಾಲಯಗಳು
ಮಕ್ಕಳ ಮೆರವಣಿಗೆಯಲಿ
ಧ್ವಜವ ಹಾರಿಸುವ ನಾಟಕ ಮಾಡುತ
ಕಳೆದೆವು ವರ್ಷಗಳಲ್ಲಿ

ಪ್ರತೀ ವರ್ಷವೂ ಕೇಳುತ ಬಂದೆವು
ಯಾರಿಗೆ ಬಂತೀ ಸ್ವಾತಂತ್ರ್ಯ
ದೀನ ದಲಿತರಿಗೆ ನೋವು ನರಳಿಕೆಯು
ಕೆಲವರಿಗಷ್ಟೇ ಸ್ವಾತಂತ್ರ್ಯ

ಘಟಸರ್ಪಗಳನು ಇಲಿ ಕಪ್ಪೆಗಳನು
ತೋಳಗಳನ್ನೂ ಕುರಿಗಳನು
ಒಂದೆ ಕೋಣೆಯಲಿ ಕೂಡಿ ಹಾಕಿದೊಲು
ಮಾಡಲು ಸ್ವತಂತ್ರ ದೇಶವನು

ಆಕಳು ಮೊಲಗಳ ಹುಲಿಸಿಂಹಗಳನು
ಒಂದೇ ಕಣದಲಿ ಹಾಕಿ
ಕೂಡಿ ಬಾಳಿ ಸಹ ಜೀವನ ಎನ್ನುತ
ತಂದರು ಸ್ವತಂತ್ರ ಬೆರಕಿ

ಕೋಟಿ ಕೋಟಿಗಳ ಕಬಳಿಸುವಂಥಾ
ಅಧಿಕೃತ ದರೋಡೆಯವರ
ಪ್ರಜಾರಾಜ್ಯವಿದು ಸೃಷ್ಟಿ ಮಾಡುತಿದೆ
ದೇಶ ಕೊಳ್ಳೆ ಹೊಡೆಯುವವರ

ಹಣವುಳ್ಳವರಿಗೆ ಸೇವೆಗೆ ನಿಂತಿವೆ
ಖಾಕೀ ಬಿಳಿ ಕರಿ ಡ್ರೆಸ್ಸು
ಹಣವಿಲ್ಲದವರ ಪಾಲಿಗೆ ಎಲ್ಲಾ
ಕಾನೂನ್ ವ್ಯವಸ್ಥೆ ಟಿಸ್ಸು

ಕಾಳಸಂತೆಗಳು ಕಪ್ಪು ದಂಧೆಗಳು
ರಾಜಾರೋಷದಿ ನಡೆದಾವೆ
ಗೂಂಡಾದಾದರು ರಾಜಕಾರಣವು
ಕೈಕೈ ಹಿಡಿದೇ ಸಾಗ್ಯಾವೆ

ಬಂಗಲೆ ಬಿಲ್ಡಿಂಗ್ ಬೆಳೆದೇ ಬೆಳೆದಿವೆ
ರಕ್ಕಸ ಬೊಜ್ಜಿನ ನಗರಗಳು
ಗೂಡೇ ಇಲ್ಲದೆ ಗೋಳಿಡುತ್ತಿದ್ದರು
ಬಡವರು ಕೊಚ್ಚೆಯ ಪ್ರಾಣಿಗಳು

ನೌಕರಿಗಳದೇ ಮಾರ್ಕೆಟ್ ಇರುವುದು
ಲಕ್ಷಲಕ್ಷಗಳ ವ್ಯಾಪಾರ
ಮದುವೆಯ ಮಾರ್ಕೆಟ್ ಮೆರೆಯುತ್ತಿರುವುದು
ಲಕ್ಷಗಳ ಬೆಲೆಯ ಗಂಡುವರ

ನೌಕರಿದಾರರ ಗುರಿಯು ಗಳಿಸುವುದು
ಅಪ್ರಮಾಣಿಕತೆ ದಾರಿ
ಎಷ್ಟೇ ಸುರಿದರೂ ಹೆಣ್ಣಿಗೆ ಉಳಿವುದು
ಹಿಂಸೆಯ ಬೆಂಕಿಯ ದಾರಿ

ಜಾತಿ ಧರ್ಮಗಳು ಮೌಢ್ಯಾಚಾರ
ಹಳೆಯ ಭೂತಗಳು ಬೆಳೆಯುತಿವೆ
ಹೊಸಯುಗದಿ ಹೊಸುತು ರೂಪವ ತಳೆದಿವೆ
ಜನಗಳ ಮತಿಯನು ಮಸಳಿಸಿವೆ

ಅಯೋಧ್ಯೆಯಲ್ಲೋ ಕಾಶ್ಮೀರದಲ್ಲೋ
ಕೆಂಪು ಚಿತ್ತಾರಗಳು ಬರೆದಾವೋ
ಬೊಂಬಾಯಿಯಲ್ಲೋ ಅಸ್ಸಾಮಿನಲ್ಲೋ
ಬಾಂಬು ರಂಗೋಲಿ ಹಾಕ್ಯಾವೋ

ಕೋಟಿ ಕೋಟಿಗಳ ಹಗರಣಗಳಲೂ
ದೇಶದ ಮುನ್ನಡೆ ಅಂತೀವೋ
ಸುವರ್ಣ ಸ್ವತಂತ್ರ ಭಾರತದಲ್ಲಿ
ತಿಪ್ಪೆಯ ಮ್ಯಾಲೇ ಕುಂತೀವೋ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...