Home / ಕವನ / ಕವಿತೆ / ಕನ್ನಡದ ಏಳಿಗೆ

ಕನ್ನಡದ ಏಳಿಗೆ

ಕನ್ನಡದ ತಿಳಿನೀರ ನಾನೊಂದು ಬೊಗಸೆಯಲಿ
ಕುಡಿದು ನೋಡಿದೆನದರ ಸವಿಯನ್ನು ನಾನೊ;
ಕುಡಿಕುಡಿದು ಮುದವಾಂತು ನಲ್ಗಬ್ಬ ಸಾರವನು
ಬಾಯ್ದುದಿಯೊಳನವರತ ಇರಿಸಲೆಳಸಿದೆನೊ!

ಎಷ್ಟು ತತ್ವದ ಗೀತ?  ಎಷ್ಟು ಮೋಹದ ಮಾತು?
ವಚನರಾಶಿಯ ಸಾರ, ಪುರಾಣಗಳ ಮೇಳ!
ಗದ್ಯ ಪದ್ಯದ ವಾದ, ಶರಣ ಹಾಡಿನ ನಾದ;
ಕನ್ನಡಾಂಬೆಯ ಕೊರಳ ಮುತ್ತುಮಣಿ ಮಾಲಾ-

ವೃತ್ತಕಂದಗಳೋಟ, ಚಂಪುಕಾವ್ಯದ ಕೂಟ,
‘ಝೇಂಕರಿಪ ಷಟ್ಪದಿ’ಗಳಾ ವೇಗ ಮಾರ್ಗ;
ಶಾಸ್ತ್ರಗ್ರಂಥದ ಸಾಲು, ವ್ಯಾಕರಣಗಳ ಬಾಳು,
ಹಾಸು ಹೊಕ್ಕಾಗಿಯೇ ತಾಳಿ ಬಾಳಿದೆ ಕೇಳ!

ದಾಸ ಪದಗಳು ಹರಡಿ ಹಳ್ಳಿ ಜನಗಳು ಉಬ್ಬಿ
ಲಾವಣಿಗಳಾ ದನಿಯ ಇಂಪಿನಿಂ ಹಿಗ್ಗಿ;
ಹೊಸಕವನ ಕೊಳದ ದನಿ, ಶ್ರೋತೃಗಳ ಬಿಲ್ಲದನಿ,
ಕನ್ನಡದ ಹಲತರದಲೇಳಿಗೆಯ ಸುಗ್ಗಿ!

ದಶಮಾನ ಶತವಾಗಿ, ಶತಮಾನ ದಶವಾಗಿ
ತಿಳಿನೀರ ಬುಗ್ಗೆಯದು ಎಷ್ಟು ಸಿಹಿ ಚೆಲುವು!
ತಿಳಿಯದಿಹ ಕವಿವರ್ಯರೇಸು ಜನ ಏತರದಿ
ಕನ್ನಡದ ತೋಟದಲಿ ಬೆಳೆಸಿದರು ಹೂವು!!

ಆಳಿದರು ಚೋಳ ಚಾಳುಕ್ಯ ಗಂಗ ಕದಂಬ
ವಿಜಯನಗರದ ರಾಜ್ಯ ವೈಭವದ ಗೂಡು;
ನೃಪತುಂಗ ಪಂಪರೂ ಪೊನ್ನರನ್ನರ ತಂಡ
ಗುಣವರ್ಮ ಆ ಜನ್ನ ನಾಗಚಂದ್ರರ ದಂಡು.

ಲಕ್ಷಣವ ಸಾರಿದ ಸಾಳ್ವ ಭಟ್ಟಾಕಳಂಕರು
ಕೇಶಿರಾಜರದಂತು ನಾಗವರ್ಮರದೊ!
ತಾಯಂದಿರಾ ಕಂತಿ ಅಕ್ಕದೇವಿಯರಿಹರು
ಕನ್ನಡಿತಿ ಹೊನ್ನಮ್ಮ ಕವಿಕೋಕಿಲವಳೊ!

ಮಧ್ಯಯುಗ ಬಸವಣ್ಣ ರಾಘವಾಂಕರ ಸಾಲು
ವ್ಯಾಸಕುವರನ ಒಂದು ಭಾರತದ ಹಾಡೊ;
ಪದ್ಮರಸ ಲಕ್ಷ್ಮೇಶ ತಿಮ್ಮಕವಿ ಹರಿಹರರು
ಕವಿವರರು ಅಗಣಿತವೆ ಕನ್ನಡದ ಬಾಳೊ!

ಷಡಕ್ಷರಿಯ ಬಿರುನುಡಿಯು, ಮುದ್ದಣನ ಇನಿವಾತು
ಕನಕಾಪುರಂದರರ ಲಲ್ಲೆ ಹಾಡಿನ ನುಣ್ಪು;
ಕೃಷ್ಣರಾಜರ ಸೇವೆ, ತಿರುಮಲಾರ್‍ಯರ ಸೊಲ್ಲು
ಒಡನಾಡಿ ಬಳೆಯಿತೊ ಕನ್ನಡದ ಹುರುಪು

ನೃಸಿಂಹ ಅಳಸಿಂಗರ ವಿದ್ವತ್ಸೇವೆಯ ಮೇರೆ
ಬಸಪ್ಪಶಾಸ್ತ್ರಿಗಳೊ ಪಂಜೇ ಶ್ರೀಕಂಠರು!
ಹಲವಾರು ನುಡಿಸೇವೆ ಸ್ಪೂರ್ತಿಯಿಕ್ಕಿದ ಜನವೆ
ಕಣ್ಮುಂದು ನಿಲ್ಲುವರು ಇನ್ನು ಬಾಳುವರು!

ಕನ್ನಡದ ಕರ್ಣಾಟಕಿಂದು ಅಂದಿನದಂತೆ
ಒಂದಾಗಿ ಇಲ್ಲವೆಂದೊಕ್ಕೊರಲ ಕೂಗು,
ಒಂದಾಪ ಸವಿಗನಸು ಕಾಣಲಿವೆ ಅದರಂತೆ
ನುಡಿಸೇವೆ ವೃಂದದಾ ಉತ್ಸುಕದ ದಂಡು!

ಮೈಸೂರು ಮಂಗ್ಳೂರು ಧಾರ್ವಾಡ ಎಂದೆಂದು
ಸೀಮಾ ಮಹತ್ವವನು ಕೊಟ್ಟು ಮೂಲೆಯೊಳಿರಿಸಿ,
ಕನ್ನಡಾಂಬೆಯ ಕುವರರಂದಿನಾ ಪ್ರಭೆಯೊಂದು
ಮಾಸಿಹೋಗಿದೆ ಇಂದು ಚೈತನ್ಯವಳಿಸಿ!

ಕವನಗಳ ಕಂತೆಗಳು, ಸಣ್ಣ ಕಥೆ ಬೊಂತೆಗಳು,
ಹಲಕಾದಂಬರಿಗಳೂ ತುಂಬುವುದು ಹಿತವೆ!
ಭಾಷಾಭಿಮಾನವೂ ಸ್ವಜನಾನುರಾಗವೂ
ಬಳೆಯುತ್ತಿವೆ ಜನರಲ್ಲಿ ಫಲಬಿಟ್ಟಿವೆ!!
*     *     *

ನನ್ನಿಚ್ಚೆ, ನನ್ಗನಸು, ನನ್ನೊಲುಮೆ ಇದು ಒಂದು-
ಕನ್ನಡವು ಭಾರತದ ಹಸುಗೂಸಂತಿರದೆ;
ಮುನ್ನಡೆವೆ ಮುನ್ನೋಡ್ವ ಘನಭಾಷೆಯೆಂದೆನಿಸಿ
ಬಾಳಲೆಂಬುವ ಕಾಂಕ್ಷೆ ಮುನ್ನಿಟ್ಟು ನಡೆವೆ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...