Home / ಕವನ / ಕವಿತೆ / ಕನ್ನಡದ ಏಳಿಗೆ

ಕನ್ನಡದ ಏಳಿಗೆ

ಕನ್ನಡದ ತಿಳಿನೀರ ನಾನೊಂದು ಬೊಗಸೆಯಲಿ
ಕುಡಿದು ನೋಡಿದೆನದರ ಸವಿಯನ್ನು ನಾನೊ;
ಕುಡಿಕುಡಿದು ಮುದವಾಂತು ನಲ್ಗಬ್ಬ ಸಾರವನು
ಬಾಯ್ದುದಿಯೊಳನವರತ ಇರಿಸಲೆಳಸಿದೆನೊ!

ಎಷ್ಟು ತತ್ವದ ಗೀತ?  ಎಷ್ಟು ಮೋಹದ ಮಾತು?
ವಚನರಾಶಿಯ ಸಾರ, ಪುರಾಣಗಳ ಮೇಳ!
ಗದ್ಯ ಪದ್ಯದ ವಾದ, ಶರಣ ಹಾಡಿನ ನಾದ;
ಕನ್ನಡಾಂಬೆಯ ಕೊರಳ ಮುತ್ತುಮಣಿ ಮಾಲಾ-

ವೃತ್ತಕಂದಗಳೋಟ, ಚಂಪುಕಾವ್ಯದ ಕೂಟ,
‘ಝೇಂಕರಿಪ ಷಟ್ಪದಿ’ಗಳಾ ವೇಗ ಮಾರ್ಗ;
ಶಾಸ್ತ್ರಗ್ರಂಥದ ಸಾಲು, ವ್ಯಾಕರಣಗಳ ಬಾಳು,
ಹಾಸು ಹೊಕ್ಕಾಗಿಯೇ ತಾಳಿ ಬಾಳಿದೆ ಕೇಳ!

ದಾಸ ಪದಗಳು ಹರಡಿ ಹಳ್ಳಿ ಜನಗಳು ಉಬ್ಬಿ
ಲಾವಣಿಗಳಾ ದನಿಯ ಇಂಪಿನಿಂ ಹಿಗ್ಗಿ;
ಹೊಸಕವನ ಕೊಳದ ದನಿ, ಶ್ರೋತೃಗಳ ಬಿಲ್ಲದನಿ,
ಕನ್ನಡದ ಹಲತರದಲೇಳಿಗೆಯ ಸುಗ್ಗಿ!

ದಶಮಾನ ಶತವಾಗಿ, ಶತಮಾನ ದಶವಾಗಿ
ತಿಳಿನೀರ ಬುಗ್ಗೆಯದು ಎಷ್ಟು ಸಿಹಿ ಚೆಲುವು!
ತಿಳಿಯದಿಹ ಕವಿವರ್ಯರೇಸು ಜನ ಏತರದಿ
ಕನ್ನಡದ ತೋಟದಲಿ ಬೆಳೆಸಿದರು ಹೂವು!!

ಆಳಿದರು ಚೋಳ ಚಾಳುಕ್ಯ ಗಂಗ ಕದಂಬ
ವಿಜಯನಗರದ ರಾಜ್ಯ ವೈಭವದ ಗೂಡು;
ನೃಪತುಂಗ ಪಂಪರೂ ಪೊನ್ನರನ್ನರ ತಂಡ
ಗುಣವರ್ಮ ಆ ಜನ್ನ ನಾಗಚಂದ್ರರ ದಂಡು.

ಲಕ್ಷಣವ ಸಾರಿದ ಸಾಳ್ವ ಭಟ್ಟಾಕಳಂಕರು
ಕೇಶಿರಾಜರದಂತು ನಾಗವರ್ಮರದೊ!
ತಾಯಂದಿರಾ ಕಂತಿ ಅಕ್ಕದೇವಿಯರಿಹರು
ಕನ್ನಡಿತಿ ಹೊನ್ನಮ್ಮ ಕವಿಕೋಕಿಲವಳೊ!

ಮಧ್ಯಯುಗ ಬಸವಣ್ಣ ರಾಘವಾಂಕರ ಸಾಲು
ವ್ಯಾಸಕುವರನ ಒಂದು ಭಾರತದ ಹಾಡೊ;
ಪದ್ಮರಸ ಲಕ್ಷ್ಮೇಶ ತಿಮ್ಮಕವಿ ಹರಿಹರರು
ಕವಿವರರು ಅಗಣಿತವೆ ಕನ್ನಡದ ಬಾಳೊ!

ಷಡಕ್ಷರಿಯ ಬಿರುನುಡಿಯು, ಮುದ್ದಣನ ಇನಿವಾತು
ಕನಕಾಪುರಂದರರ ಲಲ್ಲೆ ಹಾಡಿನ ನುಣ್ಪು;
ಕೃಷ್ಣರಾಜರ ಸೇವೆ, ತಿರುಮಲಾರ್‍ಯರ ಸೊಲ್ಲು
ಒಡನಾಡಿ ಬಳೆಯಿತೊ ಕನ್ನಡದ ಹುರುಪು

ನೃಸಿಂಹ ಅಳಸಿಂಗರ ವಿದ್ವತ್ಸೇವೆಯ ಮೇರೆ
ಬಸಪ್ಪಶಾಸ್ತ್ರಿಗಳೊ ಪಂಜೇ ಶ್ರೀಕಂಠರು!
ಹಲವಾರು ನುಡಿಸೇವೆ ಸ್ಪೂರ್ತಿಯಿಕ್ಕಿದ ಜನವೆ
ಕಣ್ಮುಂದು ನಿಲ್ಲುವರು ಇನ್ನು ಬಾಳುವರು!

ಕನ್ನಡದ ಕರ್ಣಾಟಕಿಂದು ಅಂದಿನದಂತೆ
ಒಂದಾಗಿ ಇಲ್ಲವೆಂದೊಕ್ಕೊರಲ ಕೂಗು,
ಒಂದಾಪ ಸವಿಗನಸು ಕಾಣಲಿವೆ ಅದರಂತೆ
ನುಡಿಸೇವೆ ವೃಂದದಾ ಉತ್ಸುಕದ ದಂಡು!

ಮೈಸೂರು ಮಂಗ್ಳೂರು ಧಾರ್ವಾಡ ಎಂದೆಂದು
ಸೀಮಾ ಮಹತ್ವವನು ಕೊಟ್ಟು ಮೂಲೆಯೊಳಿರಿಸಿ,
ಕನ್ನಡಾಂಬೆಯ ಕುವರರಂದಿನಾ ಪ್ರಭೆಯೊಂದು
ಮಾಸಿಹೋಗಿದೆ ಇಂದು ಚೈತನ್ಯವಳಿಸಿ!

ಕವನಗಳ ಕಂತೆಗಳು, ಸಣ್ಣ ಕಥೆ ಬೊಂತೆಗಳು,
ಹಲಕಾದಂಬರಿಗಳೂ ತುಂಬುವುದು ಹಿತವೆ!
ಭಾಷಾಭಿಮಾನವೂ ಸ್ವಜನಾನುರಾಗವೂ
ಬಳೆಯುತ್ತಿವೆ ಜನರಲ್ಲಿ ಫಲಬಿಟ್ಟಿವೆ!!
*     *     *

ನನ್ನಿಚ್ಚೆ, ನನ್ಗನಸು, ನನ್ನೊಲುಮೆ ಇದು ಒಂದು-
ಕನ್ನಡವು ಭಾರತದ ಹಸುಗೂಸಂತಿರದೆ;
ಮುನ್ನಡೆವೆ ಮುನ್ನೋಡ್ವ ಘನಭಾಷೆಯೆಂದೆನಿಸಿ
ಬಾಳಲೆಂಬುವ ಕಾಂಕ್ಷೆ ಮುನ್ನಿಟ್ಟು ನಡೆವೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...