Home / ಕವನ / ಕವಿತೆ / ಕೋಗಿಲೆಯ ಪಾಡು

ಕೋಗಿಲೆಯ ಪಾಡು

ನಿಶಿಯ ನೀರವ ಮೌನದೆದೆಯ ಏಕಾಂತವನು
ಭೇದಿಸುತ ಗಾಳಿಯಲಿ ತೂರಿಬಂತು
ಯಾವುದೋ ನೋವಿನಲಿ ತನ್ನ ಬಾಳಿನ ಹಣತೆ
ತೇಲಿಬಿಟ್ಟೊಂದು ಕಿರು ಕೋಗಿಲೆಯ ಕೊರಗು.

“ಕೋಗಿಲೆಯೆ ಇಂದೇಕೆ -ಈ ಋತು ವಸಂತದಲಿ
ನಿನ್ನಿನಿಯನೊಲವಿನೆದೆ ಮಡಿಲೊಳಿರದೆ
ಇಲ್ಲಿ ಏಕಾಂತದಲಿ ತುಂಬು ನೋವಿನೊಳೆದೆಯ
ಹರಿಸಿ ಹಾಯಿಸುತಿರುವೆ – ನನ್ನೊಲವ ನೋವೆ

ನಿನ್ನೊಲವ ಪರಿಯೇನು? – ನಾ ಕಳೆದುಕೊಂಡಿರುವ
ಬೆಳಕ ಕಾತರದಲ್ಲಿ ಹಾಡುತಿಂದು
ನನ್ನ ಹೃದಯದೊಳೇಕೆ ಬಿರುಗಾಳಿಯೆಬ್ಬಿಸಿಹೆ?
ಹೋಗು ದೂರಕೆ ಹುಚ್ಚೆ” ಎಂದೆ ನಾನಾಗ!

ಅಯ್ಯೋ! ನನ್ನೀ ಬಾಳ ನೋವ ಕೇಳುವರಿಲ್ಲ
ವಿಶ್ವದೊಳಗೆನಗೆ ವಿಧಿಯಿತ್ತುದಿನಿತೆ?
ನಾನೇಕೆ ಉಳಿದೆನೋ ನನ್ನವರ ಜತೆಯಲೇ
ನನ್ನನೂ ಕೊಂಡಿದ್ದರೆನಿತು ಸುಖವಿತ್ತು!

ಓ ವಿರಹಿ ಕವಿ, ನಿನ್ನ ನೋವಿನೇಕಾಕಿತನ
ನನಗೆ ಅರಿವಿದೆ; ನನ್ನ ನೋವ ಕೇಳು
ಬಾಳು ಎಂತಿಹುದೆಂದು, ಬಾಳು ಎಂತಹುದೆಂದು.
ಬಾಳ್ಗೆ ಬಾಳುವೆಯುಂಟೆ ಒಲವಿಲ್ಲದಂದು?

ಹಿಂದೊಂದು ದಿನ ಒಂದು ಕಾಗೆಗಳ ಹಿರಿ ತಂಡ
ಕೋಗಿಲೆಯ ಗೂಡೊಂದ ದಾಳಿಯಿಡಲು
ಗಂಡು ಕೋಗಿಲೆ ತನ್ನ ಹೆಂಡತಿಯ ಕಾಪಿಡಲು
ಹೋರಾಡಿ, ಹೋರಾಡಿ, ಜೀವ ಪಣವಿಡಲು,

ಹೆಣ್ಣು ಹೃದಯದ ನೋವು, ಕಾತರತೆ, ಭೀತಿಯಲಿ
ಕಾಗೆಗಳ ಕೂಗಿನಲಿ- ತಲ್ಲಣದಲಿ
ಹಿಮ್ಮೆಟ್ಟಿ ಹಾರುತಿರೆ-ಕೋರಿ ಕಾಗೆಯದೊಂದು
ಮೃತ್ಯುವೊಲು ಚಿಮ್ಮಿತದರೆದೆಯ ಕುಕ್ಕಿಡಲು.

ಹೂಂಕರಿಸಿ, ಹೇಂಕರಿಸಿ, ಕುಕ್ಕಿ ಜೀವವ ಹಿಂಡಿ,
ಕೋಗಿಲೆಯ ನೆತ್ತರಲಿ ತನ್ನ ಕೊಕ್ಕು
ಕೆಂಪಡರೆ, ಸಂತಸದಿ, ಕಾಗೆ ಗೂಡಿಗೆ ಬಂದು,
ಮೂಲೆಯೊಳಗಿದ್ದೊಂದು ಮೊಟ್ಟೆಯನ್ನು ಕಂಡು,

ಹಿಗ್ಗಿನಲಿ ಕೊಂಡೊಯ್ದು, ತನ್ನ ಗೂಡಿನಲದಕೆ
ಕಾವಿತ್ತು, ಮರಿಮಾಡಿ, ಗುಟುಕನಿತ್ತು,
ತನ್ನಂತೆಯೇ ಅದಕು ‘ಕಾ’ ಎನಲು ಕಲಿಸುವೆನು
ಎನುತ ಯತ್ನಿಸುತಿರಲು- ಮರಿಯ ದನಿ ಬೇರೆ!

ಜಗದ ಕರ್ಕಶವೆಲ್ಲ ಕೂಡಿ ಮಾಡಿಸಿದಂತೆ
ಕಾಗೆ ತನ್ನಯ ಕೊರಳ ಹೊರಳಿಸಿರಲು
ಕೋಗಿಲೆಯ ಮರಿ ಹಾಡೆ ಜಗದಿ ಜೀವದ ತಾರೆ
ಪುಲಕಿಸಿತು. ಅರಳಿತ್ತು ಋತು ಕಾಮಬಣ್ಣ!

ನನ್ನಂತೆಯೇ ಹಾಡು ಎನುತ ಎಳ ಕೋಗಿಲೆಯ
ಕತ್ತ ನುಲಿಚಿತು ಕಾಗೆ ಈರ್ಷ್ಯೆಯಲ್ಲಿ
ಕಾಗೆಯೊಲು ಕೂಗಲೆಂದೆನಿತು ಯತ್ನಿಸಲೇನು!
ಮಧುರ ಗೀತವೆ ಮರಿಯ ಕೂರಳ ದನಿಯೊಳಗು!

ಕಾಗೆಗಳು ದ್ವೇಷದಲ್ಲಿ ಗುಂಪುಗೂಡುತ ಎಳೆಯ
ಕೋಗಿಲೆಯ ಕತ್ತಿನಲಿ ಕೊಕ್ಕನಿಟ್ಟು
ಚುಚ್ಚಿದುವು, ತಮ್ಮಂತೆ ಕಂಠ ಒಡಕಾದೊಡದು
ಹಾಡುವುದ ನಿಲ್ಲಿಪುದು, ಆಗ ಸರಿಯೆಂದು!

ಈ ನೋವ ಮುಗಿಸಲೆಂದೆಂದಿರುಳು ಕೋಗಿಲೆಯು
ಹಾರಿತ್ತು ದೂರಕ್ಕೆ ಗೂಡಿನಿಂದ;
ಇಂದದಕೆ ನೆಲೆಯಿಲ್ಲ- ಜಗದಲ್ಲಿ ಒಲವಿಲ್ಲ,
ಅದರ ಹಾಡಿನ ಹುರುಳು ಬರಿಯ ನೋವಾಯ್ತು!

ಎನುತ ಹಾಡಿತು ಹಕ್ಕಿ ತನ್ನ ಬಾಳಿನ ಹಾಡು
ಕೇಳಲಿಲ್ಲಾನದರ ಉಲಿಯ ಮತ್ತೆ,
ಎಲ್ಲಿ ಹೋಯಿತೊ ಏನೊ! ಬಾಳನೇ ಬಿಟ್ಟಿತೋ?
ಕೋಗಿಲೆಗೆ ಇರಲಿಲ್ಲವೇನೋ ನೆಲೆಯಿಲ್ಲಿ!

ಇಂತ ಹಾಡಲು ಬೇಕು, ಅಂತ ನುಡಿಯಲು ಬೇಕು;
ಎಂತಾದರೂ ಸರಿಯೇ ನಮ್ಮ ಬಗೆಯ
ಅನುಸರಿಸಿ ಕವಿಯಾಗು, ಇಲ್ಲದೊಡೆ ನೆಲೆಯಿಲ್ಲ!
ನಿನ್ನ ಹಾಡನು ಕೇಳಿ ಮೆಚ್ಚುವವರಿಲ್ಲ!

ಎನುತ ಕವಿಗಳಿಗೆಲ್ಲ ಹಸಿವ ಬಂಧನದಲ್ಲಿ
ಹಿಡಿದು, ಹಿಡಿತದಿ ಹಿಗ್ಗಿ, ತಗ್ಗಿ ದುಡಿಸಿ,
ದೂರಿಡುವ ಕನ್ನಡದ ನಾಡ ಕವಿಗಳ ಪಾಡೆ
ಕೋಗಿಲೆಯ ಪಾಡೇನೊ ಎನಿಸಿತೆನಗೆ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...